ಎಸೆಸೆಲ್ಸಿ ಪರೀಕ್ಷೆ ನಡೆಸಲು ಎಲ್ಲ ರೀತಿಯ ಸಿದ್ಧತೆ: ಸುರೇಶ್‍ ಕುಮಾರ್

Update: 2020-06-02 15:43 GMT

ಬೆಳಗಾವಿ, ಜೂ.2: ಕೊರೋನ ಹಿನ್ನೆಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ ಮತ್ತು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದು ಸವಾಲಿನ ಕೆಲಸವಾಗಿದೆ. ಹೀಗಾಗಿ, ಯಾವುದೇ ರೀತಿಯ ತೊಂದರೆಯಾಗದಂತೆ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ ಕುಮಾರ್ ಹೇಳಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತೆ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಧನೆ ಮಾಡಬೇಕು ಎಂಬ ಮಕ್ಕಳ ಕನಸಿಗೆ ಪರೀಕ್ಷೆ ಮೂಲಕ ಪೋಷಿಸುವ ಅಗತ್ಯವಿದೆ. ಮಕ್ಕಳ ಭವಿಷ್ಯದ ಹಾಗೂ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಆದುದರಿಂದ ಮಕ್ಕಳ ಸುರಕ್ಷತೆ ಮತ್ತು ಆತ್ಮವಿಶ್ವಾಸ ಬೆಳೆಸಲು ಮುಂದಾಗುವಂತೆ ಶಿಕ್ಷಕ ಸಮುದಾಯಕ್ಕೆ ತಿಳಿಸಿದರು.

ಎಲ್ಲರಿಗೂ ಸ್ಮಾರ್ಟ್ ಫೋನ್ ಅಥವಾ ನೆಟ್‍ವರ್ಕ್ ಸಿಗದಿರುವುದರಿಂದ ಮನೆ ಮನೆಗೆ ತೆರಳಿ ಪಾಠ ಮಾಡುವುದರ ಜತೆಗೆ ಗ್ರಾಮದ ದೊಡ್ಡ ಮನೆ ಅಥವಾ ಕಟ್ಟಡಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು "ವಠಾರ ಶಾಲೆ" ನಡೆಸುವ ಬಗ್ಗೆ ಕಾರ್ಯಕ್ರಮ ರೂಪಿಸಬೇಕು ಎಂದು ಸಚಿವ ಸುರೇಶ್‍ಕುಮಾರ್ ಸಚಿವರು ಸಲಹೆ ನೀಡಿದರು.

ವಿಶೇಷವಾದ ಸನ್ನಿವೇಶದಲ್ಲಿ ಎಸೆಸೆಲ್ಸಿ ಪರೀಕ್ಷೆ ನಡೆಸಬೇಕಿರುವುದರಿಂದ ರಾಜ್ಯದ ಎಲ್ಲ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಶೀಲಿಸಿದ ನ್ಯಾಯಾಲಯವು ಪರೀಕ್ಷೆ ನಡೆಸಬಹುದು ಎಂದು ಅಭಿಪ್ರಾಯಪಟ್ಟಿದೆ. ಅದೇರೀತಿ ಕೇಂದ್ರ ಸರಕಾರ ಕೂಡ ಹಸಿರು ನಿಶಾನೆ ತೋರಿಸಿದೆ ಎಂದರು.

ಸಮುದಾಯ ರೆಡಿಯೋ, ವಾಟ್ಸಾಪ್ ಮತ್ತಿತರ ಮಾರ್ಗಗಳ ಮೂಲಕ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ನಿರಂತರ ಬೋಧನೆ ಮತ್ತು ಕಲಿಕೆ ಪ್ರಕ್ರಿಯೆ ನಡೆದಿದೆ. ಇದೇರೀತಿ ಇನ್ನೂ ಹದಿನೈದು ದಿನಗಳ ಕಾಲ ಈ ಪ್ರಕ್ರಿಯೆ ಮುಂದುವರಿಸಿ ಮಕ್ಕಳಲ್ಲಿ ಆತ್ಮವಿಶ್ವಾಸ ಮಾಡಿಸಬೇಕು ಎಂದು ಶಿಕ್ಷಕರಿಗೆ ತಿಳಿಸಿದರು.

ಪರೀಕ್ಷಾ ಕೇಂದ್ರಕ್ಕೆ ಉಚಿತ ಸ್ಯಾನಿಟೈಸರ್ ಪೂರೈಕೆ: ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಉಚಿತವಾಗಿ ಸ್ಯಾನಿಟೈಸರ್ ಪೂರೈಸಲಾಗಿದೆ. ಪರೀಕ್ಷಾ ಕೇಂದ್ರದ ಎಲ್ಲ ಶಿಕ್ಷಕರು, ಸಿಬ್ಬಂದಿ ಕೂಡ ಕೈಗವಸ ಹಾಕಿಕೊಳ್ಳಬೇಕು. ಪ್ರತಿ ನೂರು ಮಕ್ಕಳಿಗೆ ಒಂದು ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡುವುದು ಸೇರಿದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಚಿವರು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಶೌಚಾಲಯ ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಆರೋಗ್ಯ, ಸಾರಿಗೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಜತೆಗೆ ಸಭೆ ನಡೆಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಲು ಕ್ರಮಕೈಗೊಳ್ಳಲಾಗುವುದು ಎಂದರು.

ಪರೀಕ್ಷಾ ಪಾವಿತ್ರ್ಯತೆಗೆ ಧಕ್ಕೆಯಾಗದಿರಲಿ: ವಲಸೆ ಕಾರ್ಮಿಕರ ಮಕ್ಕಳಿಗೆ ಅವರು ಇರುವ ಗ್ರಾಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಕಂಟೈನ್ಮೆಂಟ್ ಝೋನ್‍ನಲ್ಲಿ ಪರೀಕ್ಷಾಕೇಂದ್ರ ಇರದಂತೆ ನೋಡಿಕೊಳ್ಳಬೇಕು. ಪರೀಕ್ಷೆಯ ಪಾವಿತ್ರ್ಯತೆ ಅಥವಾ ಗಾಂಭಿರ್ಯತೆಗೆ ಕುಂದು ಬರದಂತೆ ಎಚ್ಚರಿಕೆ ವಹಿಸಬೇಕು ಎಂದು ಸಚಿವ ಸುರೇಶ್‍ಕುಮಾರ್ ಸೂಚನೆ ನೀಡಿದರು.

ಮಕ್ಕಳಲ್ಲಿ ಕಲಿಕೆಯ ಗುಣಮಟ್ಟ ವೃದ್ಧಿಗೊಳಿಸಲು ಶಿಕ್ಷಕರು ಕೈಗೊಂಡ ವಿಶೇಷ ಕಾರ್ಯಕ್ರಮಗಳ ಬಗ್ಗೆ ಸಚಿವರು ಮಾಹಿತಿಯನ್ನು ಪಡೆದುಕೊಂಡರು. ಪರೀಕ್ಷಾ ಪ್ರವೇಶ ಪತ್ರ ವಿತರಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News