ಕೊಡಗು: ಜೂ.4 ರಂದು ಮಳೆಹಾನಿ ಸಂತ್ರಸ್ತರಿಗೆ 436 ಮನೆಗಳ ಹಸ್ತಾಂತರ

Update: 2020-06-03 11:58 GMT

ಮಡಿಕೇರಿ, ಜೂ.3: ಕಳೆದ ಎರಡು ವರ್ಷಗಳ ಹಿಂದೆ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಜಲ ಪ್ರಳಯದಲ್ಲಿ ನೆಲೆ ಕಳೆದುಕೊಂಡು ಸಂತ್ರಸ್ತರಾದ 800ಕ್ಕೂ ಅಧಿಕ ಕುಟುಂಬಗಳ ಪೈಕಿ 436 ಕುಟುಂಬಗಳಿಗೆ ಗುರುವಾರ ಮನೆಗಳ ಹಸ್ತಾಂತರವಾಗಲಿದೆ.

ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಸತಿ ಸಚಿವ ವಿ.ಸೋಮಣ್ಣ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವುದು ಬಹುತೇಕ ಖಚಿತವಾಗಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೆರವೇರಿಸಲಿರುವುದಾಗಿ ಜಿಲ್ಲಾಡಳಿತ ಪ್ರಕಟಿಸಿದೆ. ಆದರೆ ಅವರ ಆಗಮನ ಇನ್ನೂ ದೃಢಪಟ್ಟಿಲ್ಲ.

ಕೊಡಗು ಜಿಲ್ಲೆಯಲ್ಲಿ 2018ರಲ್ಲಿ ಸುರಿದ ಭಾರೀ ಮಳೆ, ಪ್ರವಾಹ ಹಾಗೂ ಗುಡ್ಡ ಕುಸಿತದಿಂದ ಸುಮಾರು 800ಕ್ಕೂ ಅಧಿಕ ಕುಟುಂಬಗಳು ತಮ್ಮ ನೆಲೆಯನ್ನು ಕಳೆದುಕೊಂಡಿದ್ದು, ಎರಡು ವರ್ಷಗಳಿಂದ ಈ ಕುಟುಂಬಗಳು ಸೂರಿಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿವೆ. ಇದೀಗ ಅರ್ಧದಷ್ಟು ಕುಟುಂಬಗಳಿಗೆ ಮನೆಗಳನ್ನು ವಿತರಿಸಲಾಗುತ್ತಿದ್ದು, ಉಳಿದವರಿಗೆ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

ಕೇವಲ 8 ತಿಂಗಳುಗಳಲ್ಲಿ ಮನೆಗಳನ್ನು ನಿರ್ಮಿಸಿಕೊಡುವುದಾಗಿ ಅಂದಿನ ಸರಕಾರ ಘೋಷಿಸಿತ್ತಾದರೂ, ನಿಧಾನ ಗತಿಯ ಕಾಮಗಾರಿಯಿಂದಾಗಿ ಕರ್ಣಂಗೇರಿ ಗ್ರಾಮದಲ್ಲಿ ಕೇವಲ 35 ಮನೆಗಳನ್ನಷ್ಟೇ ಹಸ್ತಾಂತರಿಸಲಾಗಿತ್ತು. ಉಳಿದ ಕುಟುಂಬಗಳು ಬಾಡಿಗೆ ಮನೆಗಳಲ್ಲಿ ವಾಸವಿದ್ದು, ತಮ್ಮ ಸ್ವಂತ ಸೂರುಗಳಿಗಾಗಿ ಕಾಯುತ್ತಿದ್ದರು. ಮನೆ ನಿರ್ಮಿಸಿಕೊಡುವವರೆಗೆ ಬಾಡಿಗೆ ಮನೆಗಳಲ್ಲಿ ವಾಸಿಸಲು ಅಗತ್ಯವಿರುವ ಬಾಡಿಗೆಯನ್ನು ನೀಡುವುದಾಗಿ ಘೋಷಿಸಿದ್ದ ಸರಕಾರ ಆ ನಂತರದಲ್ಲಿ ಅದನ್ನೂ ಕೈಬಿಟ್ಟಿದ್ದು, ಸಂತ್ರಸ್ತರ ಪೈಕಿ ಇನ್ನೂ 400ಕ್ಕೂ ಅಧಿಕ ಕುಟುಂಬಗಳು ತಮ್ಮ ಸ್ವಂತ ಮನೆಗಳ ನಿರೀಕ್ಷೆಯಲ್ಲಿವೆ.

ಪೂರ್ವಾಹ್ನ 11 ಗಂಟೆಗೆ ಮಾದಾಪುರ ಬಳಿಯ ಜಂಬೂರಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಬಡಾವಣೆಯಲ್ಲಿ ನಿರ್ಮಿಸಲಾಗಿರುವ 383 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಗುತ್ತಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ.ಹರೀಶ್, ಸಂಸದ ಪ್ರತಾಪ್‍ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸೋಮವಾರಪೇಟೆ ತಾ.ಪಂ. ಅಧ್ಯಕ್ಷೆ ಪುಷ್ಪಾ ರಾಜ್, ಮಾದಾಪುರ ಗ್ರಾ.ಪಂ. ಅಧ್ಯಕ್ಷೆ ಎನ್.ಲತಾ ಅವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಡಿಕೇರಿ ತಾಲೂಕಿನ ಮದೆ ಗ್ರಾಮದಲ್ಲಿ ನಿರ್ಮಿಸಲಾಗಿರುವ 80 ಮನೆಗಳ ಹಸ್ತಾಂತರ ಕಾರ್ಯಕ್ರಮ ಶಾಸಕ ಕೆ.ಜಿ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 12.30ಕ್ಕೆ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮೇಲಿನ ಅತಿಥಿಗಳಲ್ಲದೆ, ಮಡಿಕೇರಿ ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಮದೆ ಗ್ರಾ.ಪಂ. ಅಧ್ಯಕ್ಷ ಎಂ.ಬಿ.ಚಂದ್ರಶೇಖರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News