ಬೆಳಗಾವಿ, ಮಂಗಳೂರಿನಲ್ಲಿ ಚಿಪ್ ಘಟಕ ಸ್ಥಾಪಿಸಲು ಇಂಟೆಲ್‍ಗೆ ಡಿಸಿಎಂ ಅಶ್ವಥ್ ನಾರಾಯಣ ಆಹ್ವಾನ

Update: 2020-06-03 13:04 GMT

ಬೆಂಗಳೂರು, ಜೂ.3: ಬೆಳಗಾವಿ, ಮಂಗಳೂರಿನಲ್ಲಿ ಚಿಪ್ ಉತ್ಪಾದನಾ ಘಟಕ ಸ್ಥಾಪಿಸುವುದಾದರೆ ಸರಕಾರದಿಂದ ಎಲ್ಲ ಅಗತ್ಯ ಸಹಕಾರ ನೀಡಲು ಸಿದ್ಧ ಎಂದು ಇಂಟೆಲ್ ಸಂಸ್ಥೆಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಭರವಸೆ ನೀಡಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ಇಂಟೆಲ್ ಭಾರತದ ಮುಖ್ಯಸ್ಥೆ ನಿವೃತ್ತಿ ರಾಯ್ ಹಾಗೂ ಸಂಸ್ಥೆಯ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೊ ಕಾನ್ಫರೆನ್ಸ್ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ವೀಡಿಯೊ ಕಾನ್ಫರೆನ್ಸ್ ಗೂ ಮೊದಲು ಅಶ್ವಥ್ ನಾರಾಯಣರನ್ನು ಭೇಟಿಯಾದ ಇಂಟೆಲ್ ಇಂಡಿಯಾ ಬಿಸಿನೆಸ್ ಆಪರೇಷನ್‍ನ ನಿರ್ದೇಶಕ ಮಾನಸ್ ದಾಸ್ ಒಂದು ಕೋಟಿ ರೂ. ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರು.

ಮಂಗಳೂರಿನಲ್ಲೆ ಬಂದರು ಇದೆ, ಬೆಳಗಾವಿಗೆ ಗೋವಾ ಬಂದರು ಸಮೀಪದಲ್ಲಿದೆ. ಈ ಎರಡೂ ಕಡೆಗಳಲ್ಲಿ ಉತ್ಪಾದನಾ ಘಟಕ ಸ್ಥಾಪನೆಗೆ ಅಗತ್ಯ ಸ್ಥಳಾವಕಾಶವೂ ಇದೆ. ಇಂಟೆಲ್ ಸಂಸ್ಥೆ ಈ ಅವಕಾಶವನ್ನು ಬಳಸಿಕೊಳ್ಳುವುದಾದರೆ, ಸರಕಾರದ ಕಡೆಯಿಂದ ಎಲ್ಲ ಅಗತ್ಯ ಸಹಕಾರ ಒದಗಿಸಲಾಗುವುದೆಂದು ಭರವಸೆ ನೀಡಲಾಗಿದೆ ಎಂದು ಅವರು ಹೇಳಿದರು.

ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಇಂಟೆಲ್ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಕಷ್ಟದ ಪರಿಸ್ಥಿತಿಯಲ್ಲಿ ಸಂಸ್ಥೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ರೂ. ದೇಣಿಗೆ ನೀಡಿರುವುದು ಸಂತಸದ ವಿಷಯ. ಸರಕಾರದ ಪರವಾಗಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಲಾಗಿದೆ ಎಂದು ಅವರು ತಿಳಿಸಿದರು.

ಇಂಟೆಲ್ ಅಧಿಕಾರಿಗಳಾದ ಅನಂತನಾರಾಯಣ್,  ಜಿತೇಂದ್ರ ಚಡ್ಡ,  ಮಾನಸ್ ದಾಸ್, ಆನಂದ್ ದೇಶಪಾಂಡೆ, ಅಂಜಲಿ ರಾವ್,  ವರ್ಟಿಕಲ್ ಸಲ್ಯೂಶನ್ ಗ್ರೂಪ್‍ನ ಉಪಾಧ್ಯಕ್ಷ ಕಿಶೋರ್ ರಾಮಿಶೆಟ್ಟಿ ವೀಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News