ಗುಜರಾತ್: ರಾಜ್ಯಸಭೆ ಚುನಾವಣೆಗೆ ಮೊದಲು ಮತ್ತೋರ್ವ ಕಾಂಗ್ರೆಸ್ ಶಾಸಕ ರಾಜೀನಾಮೆ

Update: 2020-06-05 17:30 GMT

ಗಾಂಧೀನಗರ, ಜೂ.5: ಗುಜರಾತ್‌ನಲ್ಲಿ ಕಾಂಗ್ರೆಸ್ ಶಾಸಕರ ರಾಜೀನಾಮೆ ಪರ್ವ ಮುಂದುವರಿದಿದ್ದು ಶುಕ್ರವಾರ ಮತ್ತೊಬ್ಬ ಶಾಸಕ ಬೃಜೇಶ್ ಮೆರ್ಜಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ.

ಗುರುವಾರ ಇಬ್ಬರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು. ಇದೀಗ ಬೃಜೇಶ್ ರಾಜೀನಾಮೆಯಿಂದಾಗಿ 2 ದಿನದಲ್ಲಿ 3 ಶಾಸಕರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದಂತಾಗಿದ್ದು ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದಿಂದ 2ನೇ ಸ್ಥಾನ ಗೆಲ್ಲುವ ಪಕ್ಷದ ಆಸೆಗೆ ಹಿನ್ನಡೆಯಾಗಿದೆ. ಬೃಜೇಶ್ ಮೆರ್ಜಾರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ಸ್ಪೀಕರ್ ರಾಜೇಂದ್ರ ತ್ರಿವೇದಿ ಘೋಷಿಸಿದ್ದಾರೆ.

ಜನತೆಗೆ ಸೇವೆ ಸಲ್ಲಿಸುವ ಉದ್ದೇಶದಿಂದ ತಾನು ಪಕ್ಷಕ್ಕೆ ಸೇರಿದ್ದೆ. ಆದರೆ ಪಕ್ಷದಲ್ಲಿ ಇದಕ್ಕೆ ಅವಕಾಶ ದೊರಕದ ಕಾರಣಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದಿರುವ ಪತ್ರದಲ್ಲಿ ಬೃಜೇಶ್ ತಿಳಿಸಿದ್ದಾರೆ. ಮಾರ್ಚ್‌ನಲ್ಲಿ ರಾಜ್ಯಸಭೆಗೆ ಚುನಾವಣೆ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ನ 5 ಶಾಸಕರು ರಾಜೀನಾಮೆ ಸಲ್ಲಿಸಿದ್ದರು. ಇದೀಗ ಮತ್ತೆ ಮೂವರು ರಾಜೀನಾಮೆ ಸಲ್ಲಿಸುವುದರೊಂದಿಗೆ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News