ಮಳೆಗಾಲ: ಹೆದ್ದಾರಿಯಲ್ಲಿ ಅಪಘಾತಗಳಾಗದಂತೆ ಮುನ್ನೆಚ್ಚರಿಕೆ ವಹಿಸಿ; ಉಡುಪಿ ಡಿಸಿ ಸೂಚನೆ

Update: 2020-06-06 17:23 GMT

ಉಡುಪಿ, ಜೂ.6: ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ನಲ್ಲಿ, ಮಳೆಗಾಲದ ಸಂದರ್ಭದಲ್ಲಿ ಅಪಘಾತಗಳು ಸಂಭವಿಸದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟ ಸೂಚನೆ ನೀಡಿದ್ದಾರೆ.

ಶನಿವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನೀರು ನಿಂತು ಅಪಘಾತಗಳು ಸಂಭವಿಸುವ ಸಾದ್ಯತೆಗಳಿದ್ದು, ಅಂತಹ ಸ್ಥಳಗಳನ್ನು ಕೂಡಲೇ ಗುರುತಿಸಿ ಹೆದ್ದಾರಿಯಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು. ಹೆದ್ದಾರಿಯ ಬದಿಯಲ್ಲಿ ನಿರ್ಮಿಸಿರುವ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಅಗತ್ಯ ಕ್ರಮಕೈಗೊಳ್ಳಿ. ಅಗತ್ಯವಿರುವ ಕಡೆಗಳಲ್ಲಿ ಸೂಕ್ತ ಸೂಚನಾ ಫಲಕಗಳನ್ನು ಅಳವಡಿಸುವಂತೆ ಹಾಗೂ ಹೆದ್ದಾರಿಯಲ್ಲಿ ಪಾಟ್‌ಹೋಲ್‌ಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ-169ಎಯಲ್ಲಿ ಸಹ ಪಾಟ್‌ಹೋಲ್‌ಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವಂತೆ, ಇಂದ್ರಾಳಿ ರೈಲ್ವೆ ಸೇತುವೆ ಬಳಿ ನೀರು ನಿಲ್ಲದಂತೆ ಅಗತ್ಯ ಕ್ರಮ ಕೈಗೊಳ್ಳಿ. ರಾ.ಹೆದ್ದಾರಿ ಸಂಪರ್ಕಿಸುವ ನಗರಸಭೆಯ ರಸ್ತೆಗಳ ಬಳಿ ಸೂಚನಾ ಫಲಕಗಳನ್ನು ಅಳವಡಿಸಿ ಅಪಘಾತಗಳಾಗುವುದನ್ನು ತಡೆಯಿರಿ. ಸಾರ್ವಜನಿಕರಿಗೆ, ವಾಹನ ಸವಾರರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಪಂ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್ ಹಾಗೂ ರಾ.ಹೆದ್ದಾರಿ ಪ್ರಾದಿಕಾರದ ಅಧಿಕಾರಿಗಳು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News