ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸಬೇಕೆನ್ನುವುದು ಮೂರ್ಖತನ: ಕುಮಾರಸ್ವಾಮಿ

Update: 2020-06-07 08:07 GMT

ಬೆಂಗಳೂರು, ಜೂ.7: ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಇದು ಮೂರ್ಖತನದ ಸೂಚನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಆಕ್ರೋಂ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರ್ಯಾಕ್ಟರ್‌, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ, ಟ್ರಾಕ್ಟರ್‌ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರ್ಯಾಕ್ಟರ್‌ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇಂದಿನ ಪೈಪೋಟಿ ಯುಗದಲ್ಲಿ ಕೃಷಿಕ ಯಂತ್ರ, ವಾಹನಗಳನ್ನು ಹೊಂದುವುದು ಅಗತ್ಯ. ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಬೇಕು. ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುವ ಬೆದರಿಕೆಯೊಡ್ಡಬಾರದು. ಬಿಪಿಎಲ್‌ ಕಾರ್ಡ್‌ ಈಗ ಕೇವಲ ಪಡಿತರಕ್ಕೆ ಮಾತ್ರ ಸೀಮಿತವಲ್ಲ. ಹಲವು ಸವಲತ್ತು, ಸೌಲಭ್ಯಗಳಿಗೆ ಬಿಪಿಎಲ್‌ ಕಾರ್ಡೇ ಆಧಾರ ಎಂಬುದು ಸರ್ಕಾರದ ಗಮನದಲ್ಲಿರಲಿ ಎಂದು ಕಿವಿಮಾತು ಹೇಳಿದ್ದಾರೆ.

ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗಬೇಕು. ಅದಕ್ಕಾಗಿ ರೈತರ ಅನ್ನದ ತಟ್ಟೆಗೆ ಕೈ ಹಾಕಬಾರದು. ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ದೋಷಗಳಿವೆ. ಪಟ್ಟಭದ್ರ ಹಿತಾಸಕ್ತಿಗಳಿವೆ. ಅದನ್ನು ಮೊದಲು ಹೋಗಲಾಡಿಸಬೇಕು. ಸರ್ಕಾರ ಅದರತ್ತ ಗಮನಹರಿಸಲಿ. ಮಾತಿಗೆ ಮೊದಲು ರೈತರ ಕೊರಳು ಹಿಂಡುವ ತನ್ನ ಎಂದಿನ ಅಭ್ಯಾಸವನ್ನು ಸರ್ಕಾರ ತೊರೆಯಲಿ ಎಂದು ಕುಮಾರಸ್ವಾಮಿ ಟ್ಟೀಟ್ ಮೂಲಕ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News