3 ಶೈಕ್ಷಣಿಕ ಟಿವಿ ಚಾನೆಲ್ ಆರಂಭಿಸಲು ಕೇಂದ್ರಕ್ಕೆ ಮನವಿ : ಸುರೇಶ್ ಕುಮಾರ್
ಕಲಬುರಗಿ, ಜೂ.7: ಕೋವಿಡ್-19 ಶೈಕ್ಷಣಿಕ ಕ್ಷೇತ್ರದ ಮೇಲೆ ದೂರಾಗಾಮಿ ಪರಿಣಾಮ ಬೀರುವುದರಿಂದ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಮೂರು ಪ್ರತ್ಯೇಕ ಶೈಕ್ಷಣಿಕ ಟಿವಿ ಚಾನೆಲ್ಗಳನ್ನು ಪ್ರಾರಂಭಿಸಲು ಅವಕಾಶ ನೀಡಬೇಕೆಂದು ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಪಠ್ಯದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯವಿದೆ. ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳನ್ನು ರೂಪಿಸಬೇಕಾದರೆ ಪರ್ಯಾಯ ಮಾಧ್ಯಮಗಳನ್ನು ಬಳಸಿಕೊಳ್ಳುವ ಅಗತ್ಯವಿದೆ, ಈ ನಿಟ್ಟಿನಲ್ಲಿ ಕೇಂದ್ರ ಸರಕಾರದ ಮಾರ್ಗಸೂಚಿಗಳನ್ನು ಎದುರು ನೋಡುತ್ತಿದ್ದೇವೆ. ಅದನ್ನು ನೋಡಿಕೊಂಡು ಮುಂದಿನ ಕಾರ್ಯಯೋಜನೆಗಳನ್ನು ರೂಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಈಗಾಗಲೇ ದೂರದರ್ಶನ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಮಕ್ಕಳವಾಣಿಯೆಂಬ ಯೂಟ್ಯೂಬ್ ಚಾನೆಲ್ ಆರಂಭಿಸಲಾಗಿದೆ. ಇದರೊಂದಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗಾಗಿಯೇ ಇನ್ನು ಮೂರು ಚಾನೆಲ್ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.