×
Ad

ಪಿಯುಸಿ ಇಂಗ್ಲಿಷ್ ಪರೀಕ್ಷಾ ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲಾ ಕ್ರಮ : ಜಿಲ್ಲಾಧಿಕಾರಿ ಜಿ.ಜಗದೀಶ್

Update: 2020-06-11 18:08 IST

ಉಡುಪಿ, ಜೂ.11:  ಜೂನ್ 18ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಕುರಿತಂತೆ ಜಿಲ್ಲೆಯ ಎಲ್ಲಾ ಪರೀಕ್ಷಾ ಕೆಂದ್ರಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಸುಗಮ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಗುರುವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲಾಕ್‌ಡೌನ್ ಕಾರಣದಿಂದ ಬಾಕಿ ಉಳಿದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಜೂ.18ರಂದು ನಡೆಯಲಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ 27 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಹೆಚ್ಚುವರಿಯಾಗಿ ಇನ್ನೂ ಎರಡು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಒಟ್ಟು 13,547 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಹೊರಜಿಲ್ಲೆಗಳಿಂದ 160 ಮಂದಿ ಮತ್ತು ಹೊರ ರಾಜ್ಯದಿಂದ ಒಬ್ಬ ವಿದ್ಯಾರ್ಥಿ ಆಗಮಿಸಲಿದ್ದು, ಜಿಲ್ಲೆಯ 1,344 ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲು ಆಯ್ಕೆ ಮಾಡಿಕೊಂಡಿದ್ದಾರೆ. ಪ್ರಶ್ನೆ ಪತ್ರಿಕೆ ತರಿಸಲು 8 ತಂಡಗಳನ್ನು ರಚಿಸಲಾಗಿದ್ದು, ಪ್ರತೀ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು ನೇಮಿಸಲಾಗಿದೆ. ಅಲ್ಲದೇ ಇವುಗಳಿಗೆ ಪೊಲೀಸ್ ಭದ್ರತೆ ಸಹ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಜೂ.18ರಂದು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ಕೆಎಸ್ಸಾರ್ಟಿಸಿ ಉಚಿತ ಬಸ್ ವ್ಯವಸ್ಥೆ ಮಾಡಲಿದೆ. ಎಷ್ಟು ವಿದ್ಯಾರ್ಥಿಗಳು ಸ್ವಂತ ವಾಹನ, ಖಾಸಗಿ ವಾಹನದಲ್ಲಿ ಬರುತ್ತಾರೆ ಹಾಗೂ ಎಷ್ಟು ವಿದ್ಯಾರ್ಥಿಗಳಿಗೆ ಬಸ್‌ನ ಅವಶ್ಯಕತೆ ಇದೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಿ, ಅಗತ್ಯವಿರುವ ಕಡೆ ಬಸ್ ವ್ಯವಸ್ಥೆ ಮಾಡಲು ರೂಟ್ ಮ್ಯಾಪ್ ಸಿದ್ದಪಡಿಸುವಂತೆ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಜಿಲ್ಲೆಯ ಯಾವುದೇ ಒಬ್ಬ ವಿದ್ಯಾರ್ಥಿ ಬಸ್ ವ್ಯವಸ್ಥೆ ಇಲ್ಲವೆಂದು ಪರೀಕ್ಷೆಗೆ ಗೈರು ಹಾಜರಾಗದಂತೆ ಎಚ್ಚರ ವಹಿಸುವಂತೆ ಸೂಚಿಸಿದರು.

ಪಿಯು ಇಲಾಖೆಯಿಂದ ಸಿದ್ದಪಡಿಸುವ ರೂಟ್ ಮ್ಯಾಪ್‌ಗೆ ಅನುಗುಣ ವಾಗಿ ನಿಗದಿತ ಸಂಖ್ಯೆಯ ಬಸ್‌ಗಳನ್ನು ಒದಗಿಸಿ ಯಾವುದೇ ವಿದ್ಯಾರ್ಥಿ ಬಸ್ ನಿಂದ ವಂಚಿತನಾಗದಂತೆ ಎಚ್ಚರವಹಿಸಿ ಕರೆತರುವಂತೆ ಕೆಎಸ್ಸಾರ್ಟಿಸಿ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ವಿದ್ಯಾರ್ಥಿಗಳನ್ನು ಕರೆತರುವಾಗ ಬಸ್‌ಗಳಲ್ಲಿ ನಿಗದಿತ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನೀಡುವ ಮುನ್ನ ಎಲ್ಲಾ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರಿಶೀಲಿಸುವಂತೆ ಮತ್ತು ಮಾಸ್ಕ್ ಧರಿಸುವುದನ್ನು ಕಡ್ಡಾಯ ಗೊಳಿಸುವಂತೆ ಹಾಗೂ ಯಾವುದೇ ವಿದ್ಯಾರ್ಥಿಗೆ ಜ್ವರ, ಶೀತ ಇದ್ದಲ್ಲಿ ಮತ್ತು ಕಂಟೈನ್ಮೆಂಟ್ ಪ್ರದೇಶದಿಂದ ಬರುವವರಿಗಾಗಿ ಎಲ್ಲಾ ಕೇಂದ್ರಗಳಲ್ಲಿ ಪ್ರತ್ಯೇಕ ಕೊಠಡಿಯನ್ನು ಸಿದ್ಧಪಡಿಸಿಟ್ಟುಕೊಳ್ಳುವಂತೆ ನಿರ್ದೇಶಿಸಿದರು.

ಕಂಟೈನ್ಮೆಂಟ್ ಪ್ರದೇಶ ಅಥವಾ ಸೀಲ್‌ಡೌನ್ ಮನೆಗಳಲ್ಲಿರುವ ವಿದ್ಯಾರ್ಥಿ ಗಳನ್ನು ಗುರುತಿಸಿ ಅವರಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳಲು ಅನುಮತಿಯನ್ನು ನೀಡುವಂತೆ ಹಾಗೂ ವಾಹನ ವ್ಯವಸ್ಥೆ ಬಗ್ಗೆ ಮಾಹಿತಿ ನೀಡುವಂತೆ ಎಲ್ಲಾ ತಹಶೀಲ್ದಾರ್‌ಗಳಿಗೆ ಅವರು ತಿಳಿಸಿದರು.

ಪರೀಕ್ಷಾ ಕೇಂದ್ರಗಳನ್ನು ಕ್ವಾರಂಟೈನ್ ಕೇಂದ್ರಗಳನ್ನಾಗಿ ಬಳಸಿಕೊಂಡಿದ್ದಲ್ಲಿ ಅದನ್ನು ಸಂಪೂರ್ಣ ಸ್ಯಾನಿಟೈಸ್ ಮಾಡುವಂತೆ ತಹಶೀಲ್ದಾರ್‌ ಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಪ್ರತೀ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಸುರಕ್ಷತಾ ಅಂತರ ಕಾಯ್ದುಕೊಂಡು ಕೂರಲು ಅನುಕೂಲ ವಾಗುವಂತೆ ಕೊಠಡಿಯಲ್ಲಿ ಆಸನ ವ್ಯವಸ್ಥೆ ಮಾಡುವಂತೆ ಎಲ್ಲಾ ಕೇಂದ್ರಗಳ ಮೇಲ್ವಿಚಾರಕರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಯಾವುದೇ ವಿದ್ಯಾರ್ಥಿಗೆ ಅನಾನುಕೂಲವಾಗದಂತೆ, ಅತ್ಯಂತ ವ್ಯವಸ್ಥಿತವಾಗಿ ಎಲ್ಲಾ ಸುರಕ್ಷಾ ಕ್ರಮಗಳನ್ನು ಕೈಗೊಂಡು ಎಲ್ಲಾ ಅಧಿಕಾರಿ ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಿ ರಾಜ್ಯಕ್ಕೆ ಮಾದರಿಯಾಗುವಂತೆ ಪರೀಕ್ಷೆ ನಡೆಸುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಭಗವಂತ ಕಟ್ಟೀಮನಿ, ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು, ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News