ಕೊರೋನ ವೈರಸ್: ರಾಜ್ಯದಲ್ಲಿ ನಿಲ್ಲದ ಸಾವಿನ ಸರಣಿ; ಪಾಸಿಟಿವ್ ಪ್ರಕರಣದಲ್ಲೂ ಹೆಚ್ಚಳ
ಬೆಂಗಳೂರು, ಜೂ.11: ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 204 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಎರಡು ಮತ್ತು ರಾಯಚೂರು ಜಿಲ್ಲೆಯಲ್ಲಿ ಒಂದು ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 72ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಸಂಜೆ 5 ಗಂಟೆವರೆಗೆ ಮೂರು ಸಾವು, 204 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ.
ಬೆಂಗಳೂರು ನಗರ ಜಿಲ್ಲೆಯ 60 ವರ್ಷದ ಪುರುಷರೊಬ್ಬರು ಜೂ.9 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮೃತಪಟ್ಟಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ 35 ವರ್ಷದ ಪುರುಷರೊಬ್ಬರು ದೀರ್ಘಕಾಲದ ಲಿವರ್ ಸಮಸ್ಯೆಯೊಂದಿಗೆ ಜೂ.7 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜೂ.10 ರಂದು ಮೃತಪಟ್ಟಿದ್ದಾರೆ.
ರಾಯಚೂರು ಜಿಲ್ಲೆಯ 28 ವರ್ಷದ ಮಹಿಳೆಯೊಬ್ಬರು ಉಸಿರಾಟದ ತೊಂದರೆಯಿಂದ ಮೇ.30 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜೂ.8 ರಂದು ಮೃತಪಟ್ಟಿದ್ದಾರೆ. ಅವರ ಕೊರೋನ ವರದಿಯು ಇಂದು ಪಾಸಿಟಿವ್ ಬಂದಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಯಾದಗಿರಿ 66, ಉಡುಪಿ 22, ಬೆಂಗಳೂರು ನಗರ 17, ಕಲಬುರಗಿ 16, ರಾಯಚೂರು 15, ಬೀದರ್ 14, ಶಿವಮೊಗ್ಗ 10, ದಾವಣಗೆರೆ 9, ಕೋಲಾರ 6, ಮೈಸೂರು ಮತ್ತು ರಾಮನಗರದಲ್ಲಿ ತಲಾ 5, ವಿಜಯಪುರ 4, ಬಾಗಲಕೋಟೆ ಮತ್ತು ಉತ್ತರ ಕನ್ನಡ ತಲಾ 3, ಹಾಸನ, ದಕ್ಷಿಣ ಕನ್ನಡ ಮತ್ತು ಧಾರವಾಡದಲ್ಲಿ ತಲಾ 2, ಬೆಂಗಳೂರು ಗ್ರಾಮಾಂತರ, ಕೊಪ್ಪಳ ಮತ್ತು ಚಿಕ್ಕಮಗಳೂರಿನಲ್ಲಿ ತಲಾ ಒಂದು ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 6,245 ಕೊರೋನ ಸೋಂಕಿತರ ಪೈಕಿ 2,976 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 114 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 72 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 3,195 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.