×
Ad

ಜ್ವರದ ಲಕ್ಷಣವಿರುವವರು ಕೂಡಲೇ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಿ: ಸಚಿವ ಡಾ.ಸುಧಾಕರ್

Update: 2020-06-11 20:11 IST

ಬೆಂಗಳೂರು, ಜೂ.11: ಬೆಂಗಳೂರಿನಲ್ಲಿ ಒಟ್ಟು ಕೊರೋನ ಪ್ರಕರಣಗಳಲ್ಲಿ ಶೇ.50ರಷ್ಟು ಜನರು ಗುಣಮುಖರಾಗಿದ್ದು ಮನೆಗೆ ಹಿಂದಿರುಗಿದ್ದಾರೆ. ಇನ್ನು ಉಳಿದ ಶೇ.50ರಷ್ಟು ಪ್ರಕರಣಗಳಲ್ಲಿ ಶೇ.97ರಷ್ಟು ಜನರಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲ. ಉಳಿದ ಶೇ.3ರಷ್ಟು ಸೋಂಕಿತರಿಗೆ ಮಾತ್ರ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹೆಚ್ಚಿನ ಸೋಂಕಿತರು ರೋಗ ತೀವ್ರವಾಗಿ ಉಲ್ಬಣವಾದ ನಂತರ ಆಸ್ಪತ್ರೆಗೆ ಬರುತ್ತಿದ್ದಾರೆ. ಕೊನೆಯ ಹಂತದಲ್ಲಿ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾಧ್ಯವಾಗುವುದಿಲ್ಲ. ಆದುದರಿಂದ, ಐಎಲ್‍ಐ ಲಕ್ಷಣಗಳು(ಜ್ವರದ ಲಕ್ಷಣಗಳು) ಕಂಡುಬಂದಲ್ಲಿ ಕೂಡಲೇ ಹತ್ತಿರದ ಜ್ವರ ತಪಾಸಣಾ ಕೇಂದ್ರಗಳಿಗೆ ತೆರಳಿ ತೋರಿಸಿಕೊಳ್ಳುವಂತೆ ಸೂಚಿಸಿದರು.

ಅದರಲ್ಲೂ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಯಾವುದೇ ಲಕ್ಷಣ ಕಂಡುಬಂದಲ್ಲಿ ಮನೆಯಲ್ಲಿರುವ ಯುವಕರು ಜವಾಬ್ದಾರಿಯಿಂದ ತುರ್ತಾಗಿ ತಪಾಸಣೆ ಮಾಡಿಸುವಂತೆ ಮನವಿ ಮಾಡಿದ ಅವರು, ನಗರದಲ್ಲಿ ದೊಡ್ಡ ದೊಡ್ಡ ಸ್ಟೇಡಿಯಂಗಳನ್ನು ಕ್ವಾರಂಟೈನ್ ಕೇಂದ್ರವಾಗಿ ಮಾರ್ಪಾಡು ಮಾಡಲು ಸರಕಾರ ಚಿಂತನೆ ನಡೆಸಿದೆ ಎಂದರು.

ಬಿಬಿಎಂಪಿ ತಂಡ ರಚನೆ: ರೋಗ ಲಕ್ಷಣಗಳಿರುವವರನ್ನು ಪತ್ತೆ ಹಚ್ಚಿ ತಪಾಸಣೆಗೆ ಒಳಪಡಿಸಲು ಅನುವಾಗುವಂತೆ ಬಿಬಿಎಂಪಿ ವತಿಯಿಂದ 800 ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳು ಮನೆಮನೆಗೆ ತೆರಳಿ ರೋಗ ಲಕ್ಷಣವಿರುವವರ ಸಮೀಕ್ಷೆ ನಡೆಸಲಿದ್ದಾರೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು. ಇದರಿಂದಾಗಿ ಸೋಂಕಿತರ ಪತ್ತೆಗೆ ಅನುಕೂಲವಾಗಲಿದ್ದು, ಪ್ರಾಥಮಿಕ ಹಂತದಲ್ಲೆ ಚಿಕಿತ್ಸೆ ನೀಡಬಹುದು ಎಂದು ಅವರು ಹೇಳಿದರು.

ಬದಲಾದ ಕಂಟೈನ್‍ಮೆಂಟ್ ವ್ಯಾಖ್ಯಾನ: ನಗರದಲ್ಲಿ ಕಂಟೈನ್‍ಮೆಂಟ್ ಪ್ರದೇಶಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸುಧಾಕರ್, ಕಂಟೈನ್‍ಮೆಂಟ್ ಪ್ರದೇಶಗಳು ಈಗ ಮೊದಲಿನಂತಿಲ್ಲ. ಅದರ ವ್ಯಾಖ್ಯಾನ ಬದಲಾಗಿದೆ. ಮೊದಲು ಪೂರ್ಣ ವಾರ್ಡ್‍ಗಳನ್ನು ಅಥವಾ 1 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಕಂಟೈನ್‍ಮೆಂಟ್ ಆಗಿ ಘೋಷಿಸಲಾಗುತ್ತಿತ್ತು. ಈಗ ಅದು ಕೇವಲ ಸೋಂಕಿತ ವ್ಯಕ್ತಿಯ ಮನೆಗೆ ಮಾತ್ರ ಸೀಮಿತವಾಗಿದೆ. ಆದ್ದರಿಂದ 1.2 ಕೋಟಿ ಜನಸಂಖ್ಯೆ ಇರುವ ಬೆಂಗಳೂರಿನಲ್ಲಿ 60 ಕಂಟೈನ್‍ಮೆಂಟ್ ಝೋನ್‍ಗಳಿರುವುದು ಹೆಚ್ಚೇನು ಅಲ್ಲ ಎಂದು ಸ್ಪಷ್ಟನೆ ನೀಡಿದರು.

ನಗರದಲ್ಲಿ ಕೋವಿಡ್ ಅಲ್ಲದ ರೋಗಗಳಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಹಂತ ಹಂತವಾಗಿ ಕೋವಿಡ್ ಅಲ್ಲದ ಚಿಕಿತ್ಸೆಗಾಗಿ ಮುಕ್ತವಾಗಿಸಲು ನಿರ್ಧರಿಸಲಾಗಿದೆ. ಪ್ರಥಮ ಹಂತದಲ್ಲಿ ಬೌರಿಂಗ್ ಆಸ್ಪತ್ರೆಯನ್ನು ಕೋವಿಡ್ ಅಲ್ಲದ ರೋಗಗಳಿಗೆ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News