ರಾಜ್ಯದಲ್ಲಿ ಕೊರೋನ ನಾಗಾಲೋಟ: ಒಂದೇ ದಿನ ಏಳು ಸಾವು, 271 ಮಂದಿಗೆ ಸೋಂಕು ದೃಢ
ಬೆಂಗಳೂರು, ಜೂ.12: ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 271 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 6,516ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ನಾಲ್ಕು, ಕಲಬುರಗಿಯಲ್ಲಿ ಎರಡು ಮತ್ತು ಹಾಸನ ಜಿಲ್ಲೆಯಲ್ಲಿ ಒಂದು ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 79ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಗುರುವಾರ ಸಂಜೆ 5 ಗಂಟೆಯಿಂದ ಶುಕ್ರವಾರ ಸಂಜೆ 5 ಗಂಟೆವರೆಗೆ ಏಳು ಸಾವು, 271 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ.
ಬೆಂಗಳೂರು ನಗರ ಜಿಲ್ಲೆಯ 61 ವರ್ಷದ ಮಹಿಳೆ, 65 ವರ್ಷದ ಮಹಿಳೆ, 52 ವರ್ಷದ ಪುರುಷ ಮತ್ತು 49 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಕಲಬುರಗಿಯ 53 ವರ್ಷದ ಪುರುಷ ಮತ್ತು 48 ವರ್ಷದ ಪುರುಷ ಹಾಗೂ ಹಾಸನ ಜಿಲ್ಲೆಯ 60 ವರ್ಷದ ಪುರುಷರೊಬ್ಬರು ಕೊರೋನ ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದಾರೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬಳ್ಳಾರಿ 97, ಬೆಂಗಳೂರು ನಗರ 36, ಉಡುಪಿ 22, ಕಲಬುರಗಿ 20, ಧಾರವಾಡ 19, ದಕ್ಷಿಣ ಕನ್ನಡ 17, ಬೀದರ್ 10, ಹಾಸನ ಮತ್ತು ಮೈಸೂರಿನಲ್ಲಿ 9, ತುಮಕೂರು 7, ಶಿವಮೊಗ್ಗ 6, ರಾಯಚೂರು ಮತ್ತು ಉತ್ತರ ಕನ್ನಡ ತಲಾ 4, ರಾಮನಗರ ಮತ್ತು ಚಿತ್ರದುರ್ಗ ತಲಾ 3, ಮಂಡ್ಯ 2, ವಿಜಯಪುರ, ಕೋಲಾರ ಮತ್ತು ಬೆಳಗಾವಿಯಲ್ಲಿ ತಲಾ ಒಂದು ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 6,516 ಕೊರೋನ ಸೋಂಕಿತರ ಪೈಕಿ 3,440 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 464 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 79 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 2,995 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.