ಮುಂದಿನ ವರ್ಷ ನೂತನ ಡಿಸಿ ಕಚೇರಿ ಕಾರ್ಯಾರಂಭ: ಕೋಟ
ಮಂಗಳೂರು, ಜೂ.12: ನಗರದ ಹೊರವಲಯ ಪಡೀಲ್ನಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡವು ವೇಗ ಪಡೆದಿದ್ದು, ಮುಂದಿನ ವರ್ಷ ಕಾರ್ಯಾರಂಭ ಮಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ನಗರದ ಹೊರವಯಲದ ಪಡೀಲ್ನಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಸಂಕೀರ್ಣದ ಕಾಮಗಾರಿ ಪರಿಶೀಲನೆ ನಡೆಸಿ ಶುಕ್ರವಾರ ಮಾತನಾಡಿದ ಅವರು, ಕಾಮಗಾರಿಯನ್ನು ಅತ್ಯಂತ ವೇಗವಾಗಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ದರು. ಮುಂದಿನ ವರ್ಷದಲ್ಲಿ ಕಟ್ಟಡ ಪೂರ್ಣಗೊಳಿಸಲು ಎಲ್ಲ ಸಿದ್ಧತೆ ಮಾಡಲು ಅವರು ತಿಳಿಸಿದರು.
ಪಡೀಲ್ನಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡಕ್ಕೆ ಮೊದಲ ಹಂತದ ಯೋಜನೆಗೆ 41 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಮುಂದಿನ ಕಾಮಗಾರಿಗಳಿಗಾಗಿ ಹೆಚ್ಚುವರಿ ಅನುದಾನಕ್ಕಾಗಿ ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಅನುದಾನ ಬಿಡುಗಡೆಗೆ ಸಿದ್ಧತೆ ನಡೆಸುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.
ಕಟ್ಟಡವು ಜಿಲ್ಲೆಯ ಎಲ್ಲ ಇಲಾಖೆಗಳಿಗೆ ಕೇಂದ್ರಸ್ಥಾನವಾಗಲಿದ್ದು, ಬಹುತೇಕ ಇಲಾಖೆಗಳು ಇಲ್ಲಿಗೆ ಸ್ಥಳಾಂತರಗೊಳ್ಳಲಿವೆ. ಹೆಚ್ಚುವರಿ ಅನುದಾನ ಬಿಡುಗಡೆಗಾಗಿ ಬೆಂಗಳೂರಿನಲ್ಲಿ ಕಂದಾಯ ಸಚಿವರನ್ನು ಭೇಟಿಯಾಗುವುದಾಗಿ ಸಚಿವರು ತಿಳಿಸಿದರು.
ಕಟ್ಟಡದ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮತ್ತು ಇತರ ಇಲಾಖೆ ಅಧಿಕಾರಿಗಳು ಇದ್ದರು.