×
Ad

ಪರೀಕ್ಷೆ ಬರೆಯುವ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಸಾರಿಗೆ ಸಹಿತ ಸಕಲ ವ್ಯವಸ್ಥೆ ಮಾಡಿ: ಅಧಿಕಾರಿಗಳಿಗೆ ಖಾದರ್ ಸೂಚನೆ

Update: 2020-06-12 23:10 IST

ಬಂಟ್ವಾಳ, ಜೂ.‌12: ಎಸೆಸೆಲ್ಸಿ ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತಮುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ಲಾಕ್ ಡೌನ್ ಗೆ ಶಿಕ್ಷಣ ಇಲಾಖೆ ಕ್ರಮಕೈಗೊಳ್ಳಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಸಾರಿಗೆ ಸಹಿತ ಎಲ್ಲಾ‌ ವ್ಯವಸ್ಥೆಗಳನ್ನು ಅಧಿಕಾರಿ ಗಳು ಕಲ್ಪಿಸಬೇಕು ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಯು.ಟಿ.ಖಾದರ್ ಸೂಚಿಸಿದ್ದಾರೆ. 

ಜೂನ್ 25ರಿಂದ ಎಸೆಸೆಲ್ಸಿ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ಶುಕ್ರವಾರ ಬಿ.ಸಿ.ರೋಡ್ ನಲ್ಲಿರುವ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಯ ಕಚೇರಿ ಯಲ್ಲಿ ತನ್ನ ಕ್ಷೇತ್ರಕ್ಕೆ ಒಳಪಟ್ಟ ಬಂಟ್ವಾಳ ತಾಲೂಕಿನ ವಿದ್ಯಾರ್ಥಿಗಳ ಹಾಗೂ ಪರೀಕ್ಷಾ ಕೇಂದ್ರಗಳ ಪೂರ್ವ ತಯಾರಿ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಅವರು ವಿವರ ಪಡೆದುಕೊಂಡರು.

ಕೊರೋನ ಸಾಂಕ್ರಾಮಿಕ ರೋಗದ ನಡುವೆಯೂ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳ ಹಾಗೂ ಶಿಕ್ಷಕರು, ಸಿಬ್ಬಂದಿಗಳ ಆರೋಗ್ಯದ ಬಗ್ಗೆ ಅಧಿಕಾರಿಗಳು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಪ್ರತಿ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ನ ವ್ಯವಸ್ಥೆ ಮಾಡಬೇಕು. ಕರ್ತವ್ಯಕ್ಕೆ ನೇಮಿಸಿದ ಸಿಬ್ಬಂದಿಯನ್ನು ಹೊರೆತುಪಡಿಸಿ ಪರೀಕ್ಷಾ ಕೇಂದ್ರದ ಅವರಣದೊಳಗೆ ಯಾವುದೇ ವ್ಯಕ್ತಿಗಳ ಪ್ರವೇಶಕ್ಕೆ ಅವಕಾಶ ಕೊಡಬಾರದು ಎಂದು ಅವರು ಆದೇಶಿಸಿದರು.

ಸರಕಾರ ನಿಗದಿಪಡಿಸಿದಂತೆ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ.‌ ಪರೀಕ್ಷೆಗೆ ಬೇಕಾದ ಸಕಲ ವ್ಯವಸ್ಥೆಯನ್ನು ಸರಕಾರ ಮಾಡಿದೆ. ಅದನ್ನು ಅಧಿಕಾರಿಗಳು ಪಾಲಿಸಬೇಕು ಎಂದು ಆದೇಶಿಸಿದ ಅವರು, ಕರ್ನಾಟಕ - ಕೇರಳ ಗಡಿ ಭಾಗವಾದ ಬಾಕ್ರಬೈಲು, ಎಡಮಾರಿ ಮೊದಲಾದ ಪ್ರದೇಶಗಳ ಹಲವು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.‌ ಅವರಿಗೆ ಪರಿಕ್ಷಾ ಕೇಂದ್ರ ತಲುಪಲು ಸಾರಿಗೆಯ ಸಮಸ್ಯೆ ಇರುವುದರಿಂದ ಖಾಸಗಿ ಬಸ್ ಗಳನ್ನು ಕಲ್ಪಿಸಬೇಕು. ಎಲ್ಲಾ ಪರೀಕ್ಷೆಗಳ ದಿನದಂದು ಗಡಿ ಭಾಗದ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬಂದು ಪರೀಕ್ಷೆ ಮುಗಿದ ಬಳಿಕ‌ ಅದೇ ಬಸ್ ನಲ್ಲಿ ಮನೆಗೆ ತಲುಪಿಸುವ ವ್ಯವಸ್ಥೆಯನ್ನು ಮಾಡಬೇಕು ಎಂದು ಯು.ಟಿ.ಖಾದರ್ ಸೂಚಿಸಿದರು. 

ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆ ಬರೆಯಲು ಬೇಕಾದ ಸಂಪೂರ್ಣ‌ ತಯಾರಿಯನ್ನು ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಮಾಡಿದೆ. ವಿದ್ಯಾರ್ಥಿಗಳು ಭಯಪಡದೆ ಪರೀಕ್ಷೆ ಬರೆಯಬೇಕು ಎಂದು ಯು.ಟಿ.ಖಾದರ್ ಹೇಳಿದರು.‌

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್‌ ಮಾತನಾಡಿ, ಸರಕಾರದ ಸುತ್ತೋಲೆಯಂತೆ ಪರೀಕ್ಷೆ ನಡೆಯುವ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಬಗ್ಗೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಯಾರೂ ಭಯಪಡುವ ಅಗತ್ಯವಿಲ್ಲ. ಪರೀಕ್ಷೆಯ ಪೂರ್ವ ತಯಾರಿ ಬಗ್ಗೆ ತಹಶೀಲ್ದಾರ್ ಕಚೇರಿಯಲ್ಲಿ ಜೂನ್ 15ರಂದು ಸಭೆ ನಡೆಯಲಿದೆ ಎಂದು ತಿಳಿಸಿದರು. ‌

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತ ಗಟ್ಟಿ, ರವೀಂದ್ರ ಕಂಬಳಿ, ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ, ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಸದಸ್ಯ ಇಕ್ಬಾಲ್ ಸುಜೀರ್, ಯುವ ಕಾಂಗ್ರೆಸ್ ಮುಖಂಡ ಮಜೀದ್ ಪೇರಿಮಾರ್, ಪ್ರಮುಖರಾದ ಉಮ್ಮರ್ ಪಜೀರು, ಹೈದರ್ ಕೈರಂಗಳ ಮತ್ತಿತರರು ಉಪಸ್ಥಿತರಿದ್ಧರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News