ವಿ.ಪರಿಷತ್ ಚುನಾವಣೆ: ಸೋಮವಾರ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

Update: 2020-06-14 12:52 GMT

ಬೆಂಗಳೂರು, ಜೂ. 14: ತೀವ್ರ ಕುತೂಹಲ ಸೃಷ್ಟಿಸಿರುವ ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಆಯ್ಕೆ ಸಂಬಂಧ ನಾಳೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.

ಮೇಲ್ಮನೆಯಲ್ಲಿ ಜೆಡಿಎಸ್ ಪಾಲಿನ ಒಂದೇ ಒಂದು ಸ್ಥಾನಕ್ಕೆ ಹಾಲಿ ಸದಸ್ಯ ಶರವಣ, ರಾಜ್ಯಸಭೆಯಿಂದ ನಿವೃತ್ತಿ ಹೊಂದಿರುವ ಕುಪೇಂದ್ರ ರೆಡ್ಡಿ, ಮಾಜಿ ಶಾಸಕ ಕೋನರೆಡ್ಡಿ ಸೇರಿದಂತೆ ನಾಲ್ಕೈದು ಮಂದಿ ಆಕಾಂಕ್ಷಿಗಳಿದ್ದು, ಟಿಕೆಟ್‍ಗಾಗಿ ಲಾಬಿ ಆರಂಭಿಸಿದ್ದಾರೆ. ಹೀಗಾಗಿ ಪಕ್ಷದ ವರಿಷ್ಟರು ಯಾರಿಗೆ ಟಿಕೆಟ್ ನೀಡಲಿದ್ದಾರೆಂಬುದು ಕುತೂಹಲ ಮೂಡಿಸಿದೆ.

ಮೇಲ್ಮನೆ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲು ಜೂ.18 ಕೊನೆಯ ದಿನವಾಗಿದ್ದು, ನಾಳೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಾಧ್ಯತೆಗಳಿವೆ. ಆದರೆ, ಜೆಡಿಎಸ್ ವರಿಷ್ಟರು ಯಾರಿಗೆ ಮಣೆ ಹಾಕಲಿದ್ದಾರೆಂಬುದು ಸಭೆಯ ಬಳಿಕ ಗೊತ್ತಾಗಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News