×
Ad

ಅಗಸರು, ಕ್ಷೌರಿಕರು ಪರಿಹಾರಕ್ಕೆ ಅರ್ಜಿ ಸಲ್ಲಿಸಿ: ಜಿ.ಜಗದೀಶ್

Update: 2020-06-17 17:26 IST

ಉಡುಪಿ, ಜೂ.17: ಕೋವಿಡ್-19 ನಿಯಂತ್ರಣಕ್ಕಾಗಿ ದೇಶಾದ್ಯಂತ ಜಾರಿಗೊಳಿಸಿದ ಲಾಕ್‌ಡೌನ್ ಹಿನ್ನಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೊಳಗಾಗಿ ರುವ ಅಗಸ ಮತ್ತು ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ರಾಜ್ಯ ಸರಕಾರ ಘೋಷಿಸಿರುವ ಒಂದು ಬಾರಿಯ ಪರಿಹಾರ ವಾಗಿ 5,000 ಆರ್ಥಿಕ ನೆರವನ್ನು ಪಡೆಯುವ ಕುರಿತಂತೆ ಜೂನ್ 30ರೊಳಗೆ ಬಿಪಿಎಲ್ ಕಾರ್ಡ್ ಹೊಂದಿರುವ ಜಿಲ್ಲೆಯ ಎಲ್ಲಾ ಅಗಸ ಮತ್ತು ಕ್ಷೌರಿಕ ವೃತ್ತಿ ಯಲ್ಲಿ ತೊಡಗಿರುವವರು ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಬುಧವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಅಗಸರು ಮತ್ತು ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವವರು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಿದ ಜಿಲ್ಲಾಧಿ ಕಾರಿ, ಅರ್ಜಿದಾರರು 18ರಿಂದ 65 ವರ್ಷಗಳ ವಯೋಮಿತಿ ಯಲ್ಲಿದ್ದು, ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಪರಿಹಾರ ಪಡೆಯಲು ಅವಕಾಶ ವಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರು ಮಾತ್ರ ಅರ್ಜಿ ಸಲ್ಲಿಸ ಬಹುದಾಗಿದ್ದು, ಆಧಾರ್‌ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಹೊಂದಿರು ವುದು ಕಡ್ಡಾಯವಾಗಿದೆ ಎಂದು ಹೇಳಿದರು.

ಅರ್ಜಿ ಸಲ್ಲಿಸುವಾಗ ಅಗಸ/ಕ್ಷೌರಿಕ ವೃತಿ ನಿರ್ವಹಿಸುತ್ತಿರುವ ಕುರಿತು ನಿಗದಿತ ನಮೂನೆಯಲ್ಲಿ ಅಧಿಕಾರಿಗಳಿಂದ ಪಡೆದ ಉದ್ಯೋಗ ದೃಢೀಕರಣ ಪತ್ರ, ನಿಗದಿತ ನಮೂನೆಯಲ್ಲಿ ಸ್ವಯಂಘೋಷಣೆ ಪತ್ರ ಸಲ್ಲಿಸಬೇಕು. ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್, ಜನ್ಮ ದಿನಾಂಕ ದಾಖಲೆ, ಪಾಸ್ ‌ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ ಸಲ್ಲಿಸಬೇಕು. ಅರ್ಜಿಯೊಂದಿಗೆ ಸಲ್ಲಿಸಿರುವ ದಾಖಲೆಗಳು ಸಮರ್ಪಕವಾಗಿದ್ದಲ್ಲಿ, ಅರ್ಹ ಫಲಾನುಭವಿ ಗಳಿಗೆ ಆಧಾರ್ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಪರಿಹಾರವನ್ನು ವರ್ಗಾಯಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಉದ್ಯೋಗ ದೃಢೀಕರಣ ಪತ್ರ ಪಡೆಯಲು ನಗರ ಪ್ರದೇಶದಲ್ಲಿ ನಗರಸಭೆ/ಪಟ್ಟಣ ಪಂಚಾಯತಿಯ ಕಂದಾಯ ಅಧಿಕಾರಿಗಳು /ಕಂದಾಯ ನಿರೀಕ್ಷಕರು, ತಾಲೂಕು ಮಟ್ಟದಲ್ಲಿ ತಹಶೀಲ್ದಾರ್, ಉಪ ತಹಸೀಲ್ದಾರ್‌ಗಳು, ಕಂದಾಯ ನಿರೀಕ್ಷಕರು , ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ/ಕಾರ್ಯದರ್ಶಿ ಮತ್ತು ಕಾರ್ಮಿಕ ಇಲಾಖೆ ಕಾರ್ಮಿಕ ಅಧಿಕಾರಿ/ಹಿರಿಯ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ನಿರೀಕ್ಷಕರುಗಳನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಪ್ರಭಾರ ಜಿಲ್ಲಾ ಕಾರ್ಮಿಕ ಅಧಿಕಾರಿ ಅಮರೇಂದ್ರ, ಜಿಲ್ಲಾ ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಕ್ಷೌರಿಕ ಮತ್ತು ಅಗಸ ಸಮುದಾಯದ ಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News