×
Ad

ನಿರ್ಬಂಧ ಕಡಿಮೆಯಾಗಿ, ಚಟುವಟಿಕೆಗಳು ಚುರುಕಾಗಲಿ: ಸಿಎಂ ಯಡಿಯೂರಪ್ಪರಿಗೆ ಪ್ರಧಾನಿ ಮೋದಿ ಸಲಹೆ

Update: 2020-06-17 19:39 IST

ಬೆಂಗಳೂರು, ಜೂ. 17: 'ಕೊರೋನ ವೈರಸ್ ಸೋಂಕು ನಿಯಂತ್ರಣದೊಂದಿಗೆ ಆರ್ಥಿಕ ಚಟುವಟಿಕೆಗಳ ಪುನಶ್ಚೇತನಕ್ಕೆ ಒತ್ತು ನೀಡುತ್ತಿರುವುದು ಒಳ್ಳೆಯದು. ರಾಜ್ಯಗಳು ಅನ್‍ಲಾಕ್ ನತ್ತ ಹೆಜ್ಜೆಯಿಡಬೇಕು. ನಿರ್ಬಂಧ ಕಡಿಮೆಯಾಗಿ, ಚಟುವಟಿಕೆಗಳು ಚುರುಕಾಗಲಿ' ಎಂದು ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸಲಹೆ ಮಾಡಿದ್ದಾರೆ.

ಬುಧವಾರ ಹೊಸದಿಲ್ಲಿಯಿಂದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕೋವಿಡ್-19 ನಿಯಂತ್ರಣಕ್ಕಾಗಿ ರಾಜ್ಯಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. `ಆತ್ಮ ನಿರ್ಭರ್ ಪ್ಯಾಕೇಜ್ ಆರ್ಥಿಕ ಚಟುವಟಿಕೆ ಚುರುಕುಗೊಳ್ಳಲು ನೆರವಾಗಲಿದೆ ಎಂದು ತಿಳಿಸಿದರು.

ತಂತ್ರಜ್ಞಾನದ ಸದ್ಬಳಕೆ: ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, 'ರಾಜ್ಯದಲ್ಲಿ ಕೊರೋನ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ 5-ಟಿ ತತ್ವವನ್ನು ವಿರಿಸಿದರು. ರಾಜ್ಯದಲ್ಲಿ ಸೋಂಕಿತರು, ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆ ನಡೆಸಿ, ಚಿಕಿತ್ಸೆ ನೀಡುವುದರೊಂದಿಗೆ ತಂತ್ರಜ್ಞಾನದ ಸದ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸೌಲಭ್ಯ ಹೆಚ್ಚಳ: ರಾಜ್ಯದಲ್ಲಿ ಪ್ರಸ್ತುತ ಒಂದು ಲಕ್ಷ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯ ವಿರುವ ಮೂಲ ಸೌಕರ್ಯ ಒದಗಿಸಲಾಗಿದ್ದು, ಇದನ್ನು ಮುಂದಿನ ದಿನಗಳಲ್ಲಿ ಎರಡು ಲಕ್ಷಕ್ಕೆ ಹೆಚ್ಚಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದ ಯಡಿಯೂರಪ್ಪ, ರಾಜ್ಯದಲ್ಲಿ 673 ಫೀವರ್ ಕ್ಲಿನಿಕ್‍ಗಳನ್ನು ಸ್ಥಾಪಿಸುವ ಮೂಲಕ ಆಸ್ಪತ್ರೆಗಳು ಸೋಂಕು ಹರಡುವ ತಾಣವಾಗದಂತೆ ಮುನ್ನಚ್ಚರಿಕೆ ವಹಿಸಲಾಗಿದೆ ಎಂದು ವಿವರಿಸಿದರು.

ರಾಜ್ಯದಲ್ಲಿರುವ 1.68 ಕೋಟಿ ಕುಟುಂಬಗಳಲ್ಲಿ 1.50 ಕೋಟಿ ಕುಟುಂಬಗಳ ಸಮೀಕ್ಷೆ ನಡೆಸಿದ್ದು, ಕೋವಿಡ್ ಸೋಂಕಿನಿಂದ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವ ವ್ಯಕ್ತಿಗಳ ಮಾಹಿತಿಯನ್ನು ದಾಖಲಿಸಲಾಗಿದೆ. ಇದರಿಂದ ಮುನ್ನಚ್ಚರಿಕೆ ವಹಿಸಲು ಹಾಗೂ ಇಂತಹ ವ್ಯಕ್ತಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಲು ಸಾಧ್ಯವಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲಿ ಕೋವಿಡ್ ಸೋಂಕು ಪರೀಕ್ಷೆ ನಡೆಸುವ ಪ್ರಯೋಗಾಲಯಗಳ ಸಂಖ್ಯೆ-72ಕ್ಕೆ ಹೆಚ್ಚಿಸಿದ್ದು, ಪರೀಕ್ಷಾ ಸಾಮಥ್ರ್ಯ ದಿನಕ್ಕೆ 15 ಸಾವಿರಕ್ಕೆ ಏರಿಕೆ ಮಾಡಲಾಗಿದೆ. ಪ್ರತಿ ದಶಲಕ್ಷ ಜನಸಂಖ್ಯೆಗೆ ರಾಜ್ಯದಲ್ಲಿ 7,500 ಪರೀಕ್ಷೆ ನಡೆಸಲಾಗುತ್ತಿದ್ದು, ಶೇ.1.6ರಷ್ಟು ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ದೈನಂದಿನ ಬೆಳವಣಿಗೆ ದರ ಶೇ.3.6ರಷ್ಟಿದೆ ಎಂದು ಬಿಎಸ್‍ವೈ, ಪ್ರಧಾನಿಗೆ ವಿವರ ನೀಡಿದರು.

ಕೋವಿಡ್ ವಾರ್ ರೂಂ ಸ್ಥಾಪಿಸುವ ಮೂಲಕ ಸೋಂಕು ನಿಯಂತ್ರಣ ಪ್ರಕ್ರಿಯೆಯ ಮೇಲೆ ನಿರಂತರ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಮಾಹಿತಿ ಸಂಗ್ರಹ ನಡೆಸಲಾಗುತ್ತಿದೆ. ಎಲ್ಲ ಭಾಗಗಳಲ್ಲಿಯೂ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಟೆಲಿ ಐಸಿಯು ವ್ಯವಸ್ಥೆ ರೂಪಿಸಲಾಗಿದ್ದು, ತಜ್ಞ ವೈದ್ಯರೊಂದಿಗೆ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರ ನಿರಂತರ ಸಂಪರ್ಕದಲ್ಲಿದ್ದು ಸಲಹೆ, ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು.

ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಕೈಗೊಂಡಿರುವ ಕ್ರಮಗಳು, ತಂತ್ರಜ್ಞಾನದ ಬಳಕೆ, ತರಬೇತಿ ಕಾರ್ಯಕ್ರಮಗಳು, ಪಂಚಾಯತ್ ಮಟ್ಟದಲ್ಲಿ ಕೈಗೊಂಡಿರುವ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಪ್ರಧಾನಿ ಮೋದಿಯವರಿಗೆ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಸಂವಾದದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಬಿ.ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ವಸತಿ ಸಚಿವ ವಿ.ಸೋಮಣ್ಣ, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೇರಿದಂತೆ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದ ಆರಂಭದಲ್ಲೆ ಭಾರತ-ಚೀನಾ ಗಡಿ ಲಡಾಖ್ ಭಾಗದಲ್ಲಿ ವೀರ ಮರಣವನ್ನಪಿದ್ದ ವೀರ ಯೋಧರಿಗೆ ಎರಡು ನಿಮಿಷ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News