×
Ad

ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 9,721ಕ್ಕೆ ಏರಿಕೆ: ಗುಣಮುಖರಾದವರು 6 ಸಾವಿರಕ್ಕೂ ಅಧಿಕ

Update: 2020-06-23 18:56 IST

ಬೆಂಗಳೂರು, ಜೂ.23: ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 322 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 9,721ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಆರು, ಬಳ್ಳಾರಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 150ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಸೋಮವಾರ ಸಂಜೆ 5 ಗಂಟೆಯಿಂದ ಮಂಗಳವಾರ ಸಂಜೆ 5 ಗಂಟೆವರೆಗೆ ಎಂಟು ಸಾವು, 322 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಸಾವಿನ ಸರಣಿ ಮುಂದುವರಿದಿದ್ದು, ಇಂದು ಒಂದೇ ದಿನ ಆರು ಮಂದಿ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯ 47 ವರ್ಷದ ಮಹಿಳೆ, 85 ವರ್ಷದ ವೃದ್ಧೆ, 81 ವರ್ಷದ ವೃದ್ಧ, 32 ವರ್ಷದ ವ್ಯಕ್ತಿ, 67 ವರ್ಷದ ವ್ಯಕ್ತಿ ಮತ್ತು 40 ವರ್ಷದ ಪುರುಷರೊಬ್ಬರು ಮೃತಪಟ್ಟಿದ್ದಾರೆ. ಬಳ್ಳಾರಿ ಜಿಲ್ಲೆಯ 85 ವರ್ಷದ ವೃದ್ಧೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 70 ವರ್ಷದ ವೃದ್ಧರೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 107, ಬಳ್ಳಾರಿ 53, ಬೀದರ್ 22, ಮೈಸೂರು 21, ವಿಜಯಪುರ 16, ಯಾದಗಿರಿ 13, ಉಡುಪಿ 11, ಗದಗ 9, ದಕ್ಷಿಣ ಕನ್ನಡ 8, ಕೋಲಾರ 8, ಹಾಸನ 7, ಕಲಬುರಗಿ 6, ಚಿಕ್ಕಬಳ್ಳಾಪುರ ಮತ್ತು ಶಿವಮೊಗ್ಗದಲ್ಲಿ ತಲಾ 5, ಧಾರವಾಡ, ಕೊಪ್ಪಳ, ಚಾಮರಾಜನಗರ ಮತ್ತು ತುಮಕೂರಿನಲ್ಲಿ ತಲಾ 4, ರಾಯಚೂರು ಮತ್ತು ಉತ್ತರ ಕನ್ನಡ ತಲಾ 3, ಮಂಡ್ಯ, ಬೆಳಗಾವಿ, ದಾವಣಗೆರೆ ಮತ್ತು ಹಾವೇರಿಯಲ್ಲಿ ತಲಾ 2 ಮತ್ತು ಕೊಡಗು ಜಿಲ್ಲೆಯಲ್ಲಿ 1 ಪ್ರಕರಣ ಪಾಸಿಟಿವ್ ಬಂದಿದೆ.

ಒಟ್ಟಾರೆ ರಾಜ್ಯದಲ್ಲಿ 9,721 ಕೊರೋನ ಸೋಂಕಿತರ ಪೈಕಿ 6,004 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 274 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 150 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 3,563 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News