ಕರ್ನಾಟಕದಲ್ಲಿ 10 ಸಾವಿರದ ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ: ಒಟ್ಟು 164 ಸಾವು
ಬೆಂಗಳೂರು, ಜೂ.24: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಸೋಂಕಿತರು ಸಾವನ್ನಪ್ಪುತ್ತಿರುವ ಪ್ರಕರಣದಲ್ಲೂ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಇಂದು ಒಂದೇ ದಿನ ಮತ್ತೆ 397 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 10,118 ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಐದು, ಬಳ್ಳಾರಿಯಲ್ಲಿ ನಾಲ್ಕು, ರಾಮನಗರ ಎರಡು, ಕಲಬುರಗಿಯಲ್ಲಿ 2 ಹಾಗೂ ತುಮಕೂರು ಜಿಲ್ಲೆಯಲ್ಲಿ ಒಂದು ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 164ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಮಂಗಳವಾರ ಸಂಜೆ 5 ಗಂಟೆಯಿಂದ ಬುಧವಾರ ಸಂಜೆ 5 ಗಂಟೆವರೆಗೆ 14 ಸಾವು, 397 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಸಾವಿನ ಸರಣಿ ಮುಂದುವರಿದಿದ್ದು, ಇಂದು ಒಂದೇ ದಿನ ಐವರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯ 68 ವರ್ಷದ ಪುರುಷ, 70 ವರ್ಷದ ಮಹಿಳೆ, 50 ವರ್ಷದ ಮಹಿಳೆ, 59 ವರ್ಷದ ಮಹಿಳೆ, 54 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಬಳ್ಳಾರಿ ಜಿಲ್ಲೆಯ 59 ವರ್ಷದ ಪುರುಷ, 73 ವರ್ಷದ ವೃದ್ಧ, 43 ವರ್ಷದ ಪುರುಷ ಮತ್ತು 28 ವರ್ಷದ ಯುವಕ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆಯ 60 ವರ್ಷದ ಪುರುಷ, 53 ವರ್ಷದ ಪುರುಷ, ಕಲಬುರಗಿ ಜಿಲ್ಲೆಯ 78 ವರ್ಷದ ವೃದ್ಧ, 55 ವರ್ಷದ ಪುರುಷ ಹಾಗೂ ತುಮಕೂರು ಜಿಲ್ಲೆಯ 56 ವರ್ಷದ ವ್ಯಕ್ತಿಯೊಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 173, ಬಳ್ಳಾರಿ 34, ರಾಮನಗರ 22, ಕಲಬುರಗಿ 22, ಉಡುಪಿ 14, ಯಾದಗಿರಿ 13, ದಕ್ಷಿಣ ಕನ್ನಡ 12, ಧಾರವಾಡ 12, ಕೊಪ್ಪಳ 11, ಉತ್ತರ ಕನ್ನಡ 9, ರಾಯಚೂರು 9, ಚಿಕ್ಕಬಳ್ಳಾಪುರ 8, ದಾವಣಗೆರೆ 8, ಮೈಸೂರು 7, ಬೆಂಗಳೂರು ಗ್ರಾಮಾಂತರ 7, ಗದಗ 6, ಕೋಲಾರ 6, ಬೀದರ್ 5, ವಿಜಯಪುರ 4, ಶಿವಮೊಗ್ಗ 3, ಮಂಡ್ಯ, ಚಿತ್ರದುರ್ಗ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಯಲ್ಲಿ ತಲಾ 2, ಬೆಳಗಾವಿ, ಹಾಸನ, ಚಿಕ್ಕಮಗಳೂರು ಮತ್ತು ತುಮಕೂರು ಜಿಲ್ಲೆಯಲ್ಲಿ ತಲಾ 1 ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 10,118 ಕೊರೋನ ಸೋಂಕಿತರ ಪೈಕಿ 6,151 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 149 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 164 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 3,799 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.