ನೋಂದಾಯಿತ ಖಾಸಗಿ ಆಸ್ಪತ್ರೆಗಳು ಕೊರೋನ ರೋಗಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ: ಡಿಸಿ ಜಗದೀಶ್
ಉಡುಪಿ, ಜೂ.24: ಕೋವಿಡ್-19ಗೆ ಚಿಕಿತ್ಸೆ ನೀಡಲು ಜಿಲ್ಲೆಯಲ್ಲಿ ನೊಂದಾಯಿಸಿಕೊಂಡಿರುವ ಖಾಸಗಿ ಆಸ್ಪತ್ರೆಗಳು, ತಮ್ಮಲ್ಲಿ ಬರುವ ಕೋವಿಡ್ -19 ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಕೋವಿಡ್-19 ಚಿಕಿತ್ಸೆ ನೀಡಲು ನೊಂದಾಯಿಸಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯಲ್ಲಿ ಅಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ಯೋಜನೆ ಯಡಿಯಲ್ಲಿ ಕೋವಿಡ್ -19 ಚಿಕಿತ್ಸೆ ನೀಡಲು 19 ಆಸ್ಪತ್ರೆಗಳು ನೊಂದಾ ಯಿಸಿದ್ದು, ಈ ಆಸ್ಪತ್ರೆಗಳು ಕೋವಿಡ್ ಪೀಡಿತರಿಗೆ ಚಿಕಿತ್ಸೆ ನೀಡಲು ಅಗತ್ಯ ಬೆಡ್ಗಳನ್ನು ಮೀಸಲಿಡಬೇಕು. ಚಿಕಿತ್ಸೆಗೆ ಅಗತ್ಯವಿರುವ ಉಪಕರಣ ಗಳನ್ನು ಅಳವಡಿಸಿಕೊಳ್ಳಬೇಕು ಹಾಗೂ ಅಗತ್ಯವಿರುವ ದುರಸ್ತಿ ಕಾರ್ಯಗಳನ್ನು ಕೈಗೊಂಡು , ಯಾವುದೇ ಸಂದರ್ಭದಲ್ಲಿ ತಮ್ಮಲ್ಲಿಗೆ ಬರುವ ರೋಗಿಯ ಚಿಕಿತ್ಸಗೆ ಸಂಪೂರ್ಣ ಸಿದ್ದರಾಗಿರಬೇಕು. ಯಾವುದೇ ರೋಗಿಗೆ ಚಿಕಿತ್ಸೆಯನ್ನು ನಿರಾಕರಿಸು ವಂತಿಲ್ಲ ಎಂದು ಅವರು ಸೂಚಿಸಿದರು.
ನೊಂದಾಯಿತ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ, ಸರಕಾರದ ಮಾರ್ಗಸೂಚಿ ಯನ್ವಯ ಕೋವಿಡ್-19 ರೋಗಿಗಳ ದಾಖಲಾತಿ ಪ್ರಕ್ರಿಯೆ, ಚಿಕಿತ್ಸಾ ವಿಧಾನ ಗಳ ಬಗ್ಗೆ ಹಾಗೂ ಮತ್ತಿತರ ಅಗತ್ಯ ಮಾಹಿತಿಗಳನ್ನು ನೀಡಲಾಗುವುದು. ಖಾಸಗಿ ಆಸ್ಪತ್ರೆಯ ಸ್ವಚ್ಚತಾ ಸಿಬ್ಬಂದಿಗಳಿಗೆ ಹಾಗೂ ಇತರರಿಗೆ ಸೂಕ್ತ ತರಬೇತಿ ನೀಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಖಾಸಗಿ ಆಸ್ಪತ್ರೆಗಳು ಜ್ವರ ಪರೀಕ್ಷಾ ಕೇಂದ್ರ ಮತ್ತು ಐಸೋಲೇಶನ್ ಕೇಂದ್ರಗಳನ್ನು ತೆರೆಯಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್ಓ ಡಾ. ಸುಧೀರ್ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ.ಮಧುಸೂದನ ನಾಯಕ್, ಡಾ.ಸುರೇಂದ್ರ ಚಿಂಬಾಳ್ಕರ್, ಕೊವಿಡ್-19 ಜಿಲ್ಲಾ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ನೊಂದಾಯಿತ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಪರಿಶೀಲನೆಗೆ ತಜ್ಞರ ಸಮಿತಿ ರಚನೆ
ಜಿಲ್ಲೆಯಲ್ಲಿ ಪ್ರಸ್ತುತ 108 ಪಾಸಿಟಿವ್ ಪ್ರಕರಣಗಳು ಮಾತ್ರ ಇದ್ದು, ಅವು ಗಳಿಗೆ ಕುಂದಾಪುರ ಮತ್ತು ಕಾರ್ಕಳದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂದೆ ಪ್ರಕರಣಗಳು ಹೆಚ್ಚು ಕಂಡು ಬಂದಲ್ಲಿ ಖಾಸಗಿ ಆಸ್ಪತ್ರೆಗಳು ಕೂಡ ಚಿಕಿತ್ಸೆ ನೀಡಲು ಸಿದ್ದರಿರಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಅಗತ್ಯ ವಿರುವ ಸೌಲಭ್ಯಗಳು ಇರುವ ಕುರಿತು ಪರಿಶೀಲಿಸಲು ತಕ್ಷಣದಲ್ಲೇ ತಜ್ಞರ ಸಮಿತಿಯನ್ನು ರಚಿಸಸಲಾಗುವುದು. ಈ ಸಮಿತಿಯು ಆಸ್ಪತ್ರೆಗಳಿಗೆ ಭೇಟಿ ನೀಡಿ, ಆಸ್ಪತ್ರೆಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿ, ವರದಿ ನೀಡಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಉಡುಪಿ ಜಿಲ್ಲೆಯ ನೋಂದಾಯಿತ ಆಸ್ಪತ್ರೆಗಳು
ಉಡುಪಿಯ ಆದರ್ಶ ಆಸ್ಪತ್ರೆ, ನ್ಯೂಸಿಟಿ ಆಸ್ಪತ್ರೆ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ, ಹೈಟೆಕ್ ಮೆಡಿಕೇರ್ ಆಸ್ಪತ್ರೆ, ಮಿತ್ರಾ ಆಸ್ಪತ್ರೆ, ಸುನಾಗ್ ಆರ್ಥೋಕೇರ್ ಅಂಡ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ, ಡಾ.ಎ.ವಿ.ಬಾಳಿಗಾ ಆಸ್ಪತ್ರೆ, ಕುಂದಾಪುರದ ಶ್ರೀಮಾತಾ ಆಸ್ಪತ್ರೆ, ಚಿನ್ಮಯಿ ಆಸ್ಪತ್ರೆ, ಶ್ರೀದೇವಿ ಆಸ್ಪತ್ರೆ, ವಿವೇಕ್ ಆಸ್ಪತ್ರೆ, ಮಂಜುನಾಥ ಆಸ್ಪತ್ರೆ, ಆದರ್ಶ ಆಸ್ಪತ್ರೆ, ಕೋಟೇಶ್ವರ ಡಾ.ಎನ್.ಆರ್. ಆಚಾರ್ಯ ಸ್ಮಾರಕ ಆಸ್ಪತ್ರೆ, ಕೋಟೇಶ್ವರ ಸರ್ಜನ್ಸ್ ಆಸ್ಪತ್ರೆ, ಕಾರ್ಕಳದ ಸ್ಪಂದನಾ ಆಸ್ಪತ್ರೆ, ನಿಟ್ಟೆ ಗಜ್ರಿಯಾ ಆಸ್ಪತ್ರೆ, ಬ್ರಹ್ಮಾವರದ ಮಹೇಶ್ ಆಸ್ಪತ್ರೆ, ಪ್ರಣವ್ ಆಸ್ಪತ್ರೆ ಗಳಲ್ಲಿ ಕೋವಿಡ್-19 ರೋಗಿಗಳ ಚಿಕಿತ್ಸೆ ನೀಡಲು ಅನುಮತಿ ನೀಡಿದ್ದು, ಪ್ರಸ್ತುತ ಯಾವುದೇ ರೋಗಿಗಳು ಈ ಆಸ್ಪತ್ರೆಗಳಲ್ಲಿ ದಾಖಲಾಗಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.