ದೇವಸ್ಥಾನಗಳನ್ನು ಬಂದ್ ಮಾಡುವ ಯೋಚನೆ ಇಲ್ಲ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

Update: 2020-06-24 18:14 GMT

ಮೈಸೂರು,ಜೂ.24; ದೇವಸ್ಥಾನಗಳಲ್ಲಿ ಬೇರೆಯವರಿಗೆ ಪೂಜೆ ಪ್ರಕ್ರಿಯೆಗಳಿಗೆ ಅವಕಾಶ ಕೊಟ್ಟಿಲ್ಲ. ಸುರಕ್ಷಿತ ಅಂತರ ಕಾಯ್ದುಕೊಂಡು ದೇವರ ದರ್ಶನಕ್ಕೆ ಅವಕಾಶ ಕೊಟ್ಟಿದ್ದೇವೆ. ಸದ್ಯಕ್ಕೆ ದೇವಸ್ಥಾನಗಳನ್ನು ಬಂದ್ ಮಾಡುವ ಯೋಚನೆ ಇಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೂಚನೆ ಮೇರೆಗೆ ಮುಂದುವರಿಯಲಿದ್ದೇವೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.

ಮೈಸೂರಿನಲ್ಲಿ ಬುಧವಾರ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ್ದ ಅವರು ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗುತ್ತಿದೆ. ಇದರಿಂದ ದೇವಸ್ಥಾನಗಳನ್ನು ಬಂದ್ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಇಲ್ಲ ಕೊರೋನ ಒಂದು ಹಂತದಲ್ಲಿ ನಿಯಂತ್ರಣಕ್ಕೆ ಬರುತ್ತಿದೆ ಎಂಬ ನಿರೀಕ್ಷೆ ಇತ್ತು. ಆದರೆ ಈಗಿನ ಅಂಕಿ-ಅಂಶಗಳ ಪ್ರಕಾರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ದೇವಸ್ಥಾನಗಳಲ್ಲಿ ಬೇರೆಯವರಿಗೆ ಪೂಜೆ ಪ್ರಕ್ರಿಯೆಗಳಿಗೆ ಅವಕಾಶ ಕೊಟ್ಟಿಲ್ಲ. ಸುರಕ್ಷಿತ ಅಂತರ ಕಾಯ್ದುಕೊಂಡು ದೇವರ ದರ್ಶನಕ್ಕೆ ಅವಕಾಶ ಕೊಟ್ಟಿದ್ದೇವೆ ಎಂದರು. 

ಮಂಗಳೂರು ಮತ್ತು ಉಡುಪಿಯಲ್ಲಿ ಸ್ಥಳೀಯರಿಗಿಂತ ಹೊರ ರಾಜ್ಯದಿಂದ ಬಂದವರು, ವಿದೇಶದಿಂದ ಬಂದವರ ಸಂಖ್ಯೆ ಜಾಸ್ತಿ ಇದೆ. ಅವರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದ್ದು, ಅವರಲ್ಲಿ 1000ಕ್ಕೂ ಹೆಚ್ಚು ಮಂದಿ ಹೊರ ರಾಜ್ಯದಿಂದ ಬಂದವರಾಗಿದ್ದಾರೆ. ಅವರನ್ನು ಕ್ವಾರಂಟೈನ್ ಮಾಡಿದ ನಂತರ ಪ್ರಕರಣಗಳು ಕಡಿಮೆಯಾಗಿವೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News