ಕೊರೋನ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಸರಕಾರಕ್ಕೆ ಡಿ.ಕೆ.ಶಿವಕುಮಾರ್ ಆಗ್ರಹ

Update: 2020-06-25 13:27 GMT

ಬೆಂಗಳೂರು, ಜೂ.25: ಕೊರೋನ ವಿಚಾರದಲ್ಲಿ ಬಡವರು, ಶ್ರೀಮಂತರು, ಅಧಿಕಾರಿಗಳು, ಸಾಮಾನ್ಯ ಜನರು ಎಂದು ಭೇದ-ಭಾವ ಮಾಡದೇ ಎಲ್ಲರಿಗೂ ಸರಕಾರ ಸಮಾನವಾಗಿ ಉಚಿತ ಚಿಕಿತ್ಸೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಗುರುವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲರಿಗೂ ಆರೋಗ್ಯ ಸೇವೆ ಸಿಗಬೇಕು ಎಂಬ ದೃಷ್ಟಿಯಿಂದ 'ಆರೋಗ್ಯ ಕರ್ನಾಟಕ' ಯೋಜನೆಯನ್ನು ಕಾಂಗ್ರೆಸ್ ಸರಕಾರ ಜಾರಿಗೆ ತಂದಿತ್ತು. ಕೇಂದ್ರ ಸರಕಾರ ಆಯುಷ್ಮಾನ್ ಭಾರತ ಯೋಜನೆ ತಂದಿದೆ. ಇವೆಲ್ಲ ಇದ್ದರೂ ಸರಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನ ಚಿಕಿತ್ಸೆಗೆ ದರ ನಿಗದಿ ಮಾಡಿದೆ ಎಂದು ಕಿಡಿಗಾರಿದರು.

ಸರಕಾರ ಶಿಫಾರಸ್ಸು ಮಾಡುವ ಸೋಂಕಿತರಿಗೆ ವೆಂಟಿಲೇಟರ್ ರಹಿತ ಐಸಿಯು ವಾರ್ಡ್‍ಗೆ 8500 ರೂ., ವೆಂಟಿಲೇಟರ್ ಇರುವ ವಾರ್ಡ್ ಗೆ 10 ಸಾವಿರ ರೂ.ಜತೆಗೆ ವೈಯಕ್ತಿಕ ವಾರ್ಡ್ ಗೆ ಶೇ.25 ರಷ್ಟು ಹೆಚ್ಚುವರಿ ಶುಲ್ಕ ನಿಗದಿಪಡಿಸಿದೆ. ಇನ್ನು ಖಾಸಗಿ ಆಸ್ಪತ್ರೆಗೆ ನೇರ ದಾಖಲಾಗುವ ರೋಗಿಗಳಿಗೆ 25 ಸಾವಿರ ರೂ.ನಿಗದಿ ಮಾಡಿದೆ. ಮೊದಲೆ ಆರ್ಥಿಕ ಸಂಕಷ್ಟದಿಂದ ನರಳುತ್ತಿರುವ ಜನ ಈ ಹಣವನ್ನು ಎಲ್ಲಿಂದ ತರಬೇಕು? ಸರಕಾರ ಅವರ ಪ್ರಾಣದ ಜತೆ ಚೆಲ್ಲಾಟ ಆಡುತ್ತಿದೆ ಎಂದು ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ ವಿಚಾರದಲ್ಲಿ ಸರಕಾರ ಯಾವ ಕಾರಣಕ್ಕೆ ಬಡವರು, ಶ್ರೀಮಂತರು ಎಂಬ ಬೇಧ ಭಾವ ಮಾಡುತ್ತಿದೆಯೋ ಗೊತ್ತಿಲ್ಲ. ಬಡವರೇನಾದರೂ ಈ ರೋಗ ತಂದಿದ್ದಾರಾ? ಅವರಿಗೇಕೆ ಶಿಕ್ಷೆ? ಹೊರ ದೇಶಗಳಿಂದ ಬಂದವರನ್ನು ಸರಿಯಾಗಿ ನಿಯಂತ್ರಿಸದೆ, ತನ್ನ ವೈಫಲ್ಯಗಳಿಂದ ಜನರಿಗೆ ಸೋಂಕು ಹರಡಿಸಿರುವ ಸರಕಾರವೇ ಈಗ ಪ್ರತಿಯೊಬ್ಬ ಸೋಂಕಿತರಿಗೂ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ದೇಶದ ಜನರು, ಉದ್ಯಮಿಗಳು, ಕೈಗಾರಿಕೆಗಳು, ಸಂಸದರು ಪಿಎಂ ಕೇರ್ ನಿಧಿಗೆ ಹಣ ನೀಡಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಸರಕಾರದ ಬಳಿ ಹಣ ಇದೆ. ಹೀಗಾಗಿ ಅವರ ತಪ್ಪಿನಿಂದ ಹಬ್ಬಿರುವ ಸೋಂಕಿಗೆ ಅವರೇ ಉಚಿತ ಚಿಕಿತ್ಸೆ ನೀಡಲಿ ಎಂದು ಶಿವಕುಮಾರ್ ಹೇಳಿದರು.

ಕುಮಾರಕೃಪಾ ಅತಿಥಿ ಗೃಹದಲ್ಲಿ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳಿಗೆ ವಿಶೇಷ ಚಿಕಿತ್ಸೆ ವ್ಯವಸ್ಥೆ ಮಾಡಿರುವುದು ಸರಿಯಲ್ಲ. ಸರಕಾರ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಾಮಾನ್ಯ ಜನರಿಗೂ ಅವರಂತೆಯೇ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಹೇಳಿದರು.

ಬೀದಿಗಿಳಿದು ಹೋರಾಟ: ನಮ್ಮ ಜನರ ರಕ್ಷಣೆಗೆ ಈಗ ನಾವು ಬೀದಿಗೆ ಇಳಿದು ಹೋರಾಟ ಮಾಡಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ನಾವು ಸುರಕ್ಷಿತ ಅಂತರ ಕಾಯ್ದುಕೊಂಡು ಬೀದಿಗಿಳಿದು ಪ್ರತಿಭಟಿಸುತ್ತೇವೆ. ಇದೇ ಜೂ.29ರಂದು  ಹೋರಾಟ ಮಾಡುತ್ತೇವೆ ಎಂದು ಶಿವಕುಮಾರ್ ತಿಳಿಸಿದರು.

ಲಾಕ್‍ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸರಕಾರ ಘೋಷಿಸಿದ ಪರಿಹಾರ ಇನ್ನು ತಲುಪಿಲ್ಲ. ಸರಕಾರ ಕೇಳಿರುವ ದಾಖಲೆ ಒದಗಿಸಲು ಜನರಿಂದ ಸಾಧ್ಯವಾಗುತ್ತಿಲ್ಲ. ಆಟೋ ಮತ್ತು ಟ್ಯಾಕ್ಸಿ ಚಾಲಕರು ಪರದಾಡುತ್ತಿದ್ದಾರೆ. ಇವರ ಸಂಕಷ್ಟಕ್ಕೆ ಹಾಗೂ ಅವರ ಕುಂದು ಕೊರತೆಗೆ ಧ್ವನಿಯಾಗಲು ಬ್ಲಾಕ್ ಮಟ್ಟದಿಂದ ರಾಜ್ಯ ಮಟ್ಟದವರೆಗೂ ನಮ್ಮ ಪಕ್ಷದಿಂದ ವಿಶೇಷ ಘಟಕ ಆರಂಭಿಸಲು ತೀರ್ಮಾನಿಸಿದ್ದೇವೆ. ವೃತ್ತಿಪರ ಚಾಲಕರ ನೇತೃತ್ವದಲ್ಲಿ ಈ ಘಟಕವನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.

ಇನ್ನು ಶಿಕ್ಷಣ ವಿಚಾರಕ್ಕೆ ಬಂದರೆ, ಪೋಷಕರು ತಮ್ಮ ಮಕ್ಕಳ ಭವಿಷ್ಯ ವಿಚಾರದಲ್ಲಿ ಬಹಳ ಚಿಂತಿತರಾಗಿದ್ದಾರೆ. ಕೆಲವರಿಗೆ ಆನ್ ಲೈನ್ ತರಗತಿ, ಮತ್ತೆ ಕೆಲವರಿಗೆ ಇಲ್ಲ.  ಸರಕಾರ ಒಂದು ಸಾರಿ ತೆಗೆದುಕೊಂಡ ನಿರ್ಧಾರ ಮರುಕ್ಷಣ ಬದಲಾಗಿ ಹೋಗುತ್ತದೆ. ಯಾವುದೇ ಯೋಜನೆಯಾಗಲಿ, ಚಿಂತನೆಯಾಗಲಿ ಇಲ್ಲವೇ ಇಲ್ಲ ಎಂದು ಶಿವಕುಮಾರ್ ತಿಳಿಸಿದರು.

ಬಡವರು ತಮ್ಮ ಕಷ್ಟಕ್ಕೆ ನಿವೇಶನ ಮಾರಿದರೆ ಅದಕ್ಕೂ ಜಿಎಸ್‍ಟಿ ಕಟ್ಟಬೇಕಂತೆ. ಇಂತಹ ಪದ್ಧತಿ ಎಲ್ಲಾದರೂ ಇದೆಯಾ? ಇನ್ನು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇನ್ನು ಉದ್ಯೋಗ ಇಲ್ಲದೆ ನಿರುದ್ಯೋಗಿಗಳ ಪ್ರಮಾಣ ಹೆಚ್ಚುತ್ತಿದ್ದು, ಈ ಎಲ್ಲ ವಿಚಾರವಾಗಿ ನಾವು ಹೋರಾಟ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಮ್ ಅಹ್ಮದ್, ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಕೃಷ್ಣಭೈರೇಗೌಡ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಉಪಸ್ಥಿತರಿದ್ದರು.

ಸೈನಿಕರಿಗೆ ಗೌರವ

ಚೀನಾ ಜತೆ ಸಂಘರ್ಷ ವಿಚಾರದಲ್ಲೂ ದೇಶದ ಜನರ ದಿಕ್ಕು ತಪ್ಪಿಸಲಾಗುತ್ತಿದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ ಹುತಾತ್ಮರಾಗಿರುವ ವೀರ ಯೋಧರಿಗೆ ಗೌರವ ಸಲ್ಲಿಸಲು ನಾಳೆ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಬೆಳಗ್ಗೆ 11 ಗಂಟೆಯಿಂದ 12 ಗಂಟೆವರೆಗೂ ಮೌನಾಚರಣೆ ಮಾಡಲಾಗುವುದು. ಅದೇ ರೀತಿ ಜಿಲ್ಲಾ ಕೇಂದ್ರಗಳಲ್ಲೂ ಪ್ರಮುಖ ಸ್ಥಳಗಳಲ್ಲಿ ನಮ್ಮ ಯೋಧರಿಗೆ ಗೌರವ ಸಲ್ಲಿಸಲಾಗುವುದು. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನಿನ್ನೆ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರಾದ್ಯಂತ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಕೆ ಕಾರ್ಯಕ್ರಮ ಆಯೋಜಿಸುವಂತೆ ಸೂಚನೆ ನೀಡಿದ್ದಾರೆ.

-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News