‘ಆರ್ ಬಿಐ ವ್ಯಾಪ್ತಿಗೆ ಸಹಕಾರ ಸಂಘ’ ಪ್ರಧಾನಿ ಕ್ರಮ ಸ್ವಾಗತಾರ್ಹ: ಎಸ್.ಟಿ.ಸೋಮಶೇಖರ್

Update: 2020-06-26 13:20 GMT

ಕಲಬುರಗಿ, ಜೂ.26: ಸಹಕಾರ ಸಂಘಗಳಲ್ಲಿ ಸಾರ್ವಜನಿಕರ ಹಣ ದುರುಪಯೋಗಕ್ಕೆ ಕಡಿವಾಣ ಹಾಕಿ, ಅವರ ಹಣಕ್ಕೆ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಂಡ ನಿರ್ಧಾರ ಸ್ವಾಗತಾರ್ಹ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸಹಕಾರ ಇಲಾಖೆ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂಪಾಯಿ ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮಕ್ಕೆ ಚೆಕ್ ವಿತರಣೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಗರುರಾಘವೇಂದ್ರ ಸಹಕಾರಿ ಬ್ಯಾಂಕ್ ಸೇರಿದಂತೆ ಅನೇಕ ಸಹಕಾರಿ ಬ್ಯಾಂಕ್‍ಗಳಲ್ಲಿ ಇಂದು ಅಕ್ರಮಗಳು ನಡೆಯುತ್ತಿವೆ. ಇದರಿಂದ ಸಾರ್ವಜನಿಕರ ಆಸ್ತಿ ಹಾಗೂ ಹಣಕ್ಕೆ ಭದ್ರತೆ ಇಲ್ಲದಂತಾಗಿದೆ. ಅಲ್ಲದೆ, ಸಹಕಾರ ಸಂಘಗಳಲ್ಲಿ ನಡೆಯುವ ಇಂಥ ಅವ್ಯವಹಾರಗಳಿಗೆ ಕಡಿವಾಣ ಹಾಕುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‍ಗಳ ಮೇಲುಸ್ತುವಾರಿ ಹೊಣೆಯನ್ನು ಆರ್ ಬಿಐಗೆ ವಹಿಸಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಗುರುವಾರ(ಜೂ.25)ದವರೆಗೆ 5,42,991 ರೈತರಿಗೆ 3,807 ಕೋಟಿ ರೂಪಾಯಿ ಹಣವನ್ನು ಕೃಷಿ ಸಾಲವಾಗಿ ವಿತರಣೆ ಮಾಡಲಾಗಿದೆ. ರೈತರಿಗೆ ಸಾಲ ಕೊಡುವ ಸಂಬಂಧ ಪ್ರಸಕ್ತ ಸಾಲಿನಲ್ಲಿ 1,750 ಕೋಟಿ ರೂ.ಸಾಲವನ್ನು ಅಪೆಕ್ಸ್ ಬ್ಯಾಂಕಿಗೆ ನಬಾರ್ಡ್ ಕೊಟ್ಟಿದೆ. ಕಳೆದ ಬಾರಿ ರೈತರಿಗೆ 13,577 ಕೋಟಿ ರೂ.ಗಳನ್ನು ಕೊಡಲಾಗಿತ್ತು. ಈ ಬಾರಿ 14,500 ಕೋಟಿ ರೂ. ಬೆಳೆ ಸಾಲ ನೀಡಲು ಚಾಲನೆ ನೀಡಲಾಗಿದೆ ಎಂದು ಸೋಮಶೇಖರ್ ತಿಳಿಸಿದರು.

ರೈತರಿಗೆ ಹೆಚ್ಚಿನ ಸಾಲ ಸಿಗಬೇಕು. ಅವರಿಗೆ ಆರ್ಥಿಕವಾಗಿ ಯಾವುದೇ ಸಮಸ್ಯೆಯಾಗಬಾರದು ಎಂಬುದು ಮುಖ್ಯಮಂತ್ರಿಯ ಆಶಯವಾಗಿದ್ದು, ಅವರ ನಿರ್ದೇಶನದಂತೆ ಹೊಸ ರೈತರಿಗೆ ಸಾಲ ನೀಡಲು ಎಲ್ಲ ಜಿಲ್ಲಾ ಸಹಕಾರ ಬ್ಯಾಂಕ್‍ಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಕಲಬುರಗಿ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್: ಕಲಬುರಗಿ ಡಿಸಿಸಿ ಬ್ಯಾಂಕ್‍ನಲ್ಲಿ ಅನೇಕ ಅಕ್ರಮಗಳ ಆರೋಪಗಳು ಬಂದ ಹಿನ್ನೆಲೆಯಲ್ಲಿ ಇದನ್ನು ಸೂಪರ್ ಸೀಡ್ ಮಾಡಲಾಗಿದ್ದು, ನಬಾರ್ಡ್ ಅನುಮತಿಗಾಗಿ ಕಳುಹಿಸಲಾಗಿದೆ. ಅಲ್ಲಿಂದ ಒಪ್ಪಿಗೆ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಪ್ರತಿ ಜಿಲ್ಲೆಗಳ ಡಿಸಿಸಿ ಬ್ಯಾಂಕ್ ಪ್ರಗತಿ ಪರಿಶೀಲನೆ: ಶೀಘ್ರದಲ್ಲಿಯೆ ಪ್ರತಿ ಜಿಲ್ಲೆಗಳ ಡಿಸಿಸಿ ಬ್ಯಾಂಕ್ ಪ್ರಗತಿ ಪರಿಶೀಲನೆ ಮಾಡಲಾಗುವುದು. ರೈತರಿಗೆ, ಬಡವರಿಗೆ, ಮಹಿಳೆಯರಿಗೆ ಹಾಗೂ ಸ್ತ್ರೀಶಕ್ತಿ ಸಂಘಗಳು ಸೇರಿದಂತೆ ವಿವಿಧ ವರ್ಗಗಳಿಗೆ ಎಷ್ಟು ಸಾಲ ವಿತರಣೆ ಮಾಡಲಾಗಿದೆ ಎಂಬುದನ್ನು ಈ ವೇಳೆ ಪರಿಶೀಲಿಸಲಾಗುತ್ತದೆ. ರಾಜ್ಯದ ಒಟ್ಟು 21 ಡಿಸಿಸಿ ಬ್ಯಾಂಕಗಳಲ್ಲಿ 20 ಡಿಸಿಸಿ ಬ್ಯಾಂಕ್ ಗಳಲ್ಲಿ ಸಾಲ ನೀಡಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಸೋಮಶೇಖರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News