×
Ad

ಅಕ್ರಮ ಮರಳುಗಾರಿಕೆ ತಡೆಗೆ ತಂಡ ರಚನೆ: ಮಹೇಶ್ವರ ರಾವ್

Update: 2020-06-26 21:16 IST

ಉಡುಪಿ, ಜೂ. 26: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಯುವ ಕುರಿತಂತೆ ಕೂಡಲೇ ಎಸ್ಪಿ ಮತ್ತು ಕುಂದಾಪುರ ಎಸಿ ಅವರ ನೇತೃತ್ವದಲ್ಲಿ ತಂಡ ಗಳನ್ನು ರಚಿಸಿ, ಕಟ್ಟುನಿಟ್ಟಿನ ತಪಾಸಣಾ ಕಾರ್ಯ ಕೈಗೊಳ್ಳುವಂತೆ ಮತ್ತು ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಸೂಚಿಸಿದ್ದಾರೆ.

ಶುಕ್ರವಾರ ಸಂಜೆ ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಮರಳು ಸಮಸ್ಯೆ ಮತ್ತು ಕೋವಿಡ್-19ರ ಪ್ರಸ್ತುತ ಪರಿಸ್ಥಿತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಮತ್ತು ಮರಳು ಸಾಗಾಟ ತಡೆಯುವ ಕುರಿತಂತೆಎಸ್ಪಿ ಮತ್ತು ಎಸಿ ಅವರ ನೇತೃತ್ವದಲ್ಲಿ ತಂಡವನ್ನು ರಚಿಸಿ, ಮರಳುಗಾರಿಕೆ ನಡೆಯುವ ಪ್ರದೇಶಗಳ ಮೇಲೆ ದಿಢೀರ್ ದಾಳಿ ನಡೆಸುವ ಮೂಲಕ ಹಾಗೂ ನಿರಂತರವಾಗಿ ಪರಿಶೀಲನೆ ನಡೆಸುವುದರ ಮೂಲಕ ಜಿಲ್ಲೆಯಲ್ಲಿ ಯಾವುದೇ ಅಕ್ರಮ ಮರಳು ಸಾಗಾಟ ನಡೆಯದಂತೆ ಎಚ್ಚರ ವಹಿಸುವಂತೆ ಸೂಚಿಸಿದ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಂಡಗಳನ್ನು ರಚಿಸುವಂತೆ ಹಾಗೂ ತಂಡದಲ್ಲಿ ಪೊಲೀಸ್ ಮ್ತು ಕಂದಾಯ ಇಲಾಖೆ ಅಧಿಕಾರಿಗಳನ್ನು ನಿಯೋಜಿಸುವಂತೆ ಮಹೇಶ್ವರ ರಾವ್ ಸೂಚನೆ ನೀಡಿದರು.

ಸಿಆರ್‌ಝಡ್ ವ್ಯಾಪ್ತಿಯಲ್ಲಿ ಮರಳು ಸಾಗಾಟಕ್ಕೆ ಸಂಬಂಧಿಸಿದ ಯಾವುದೇ ವಾಹನ ಕಂಡುಬಂದಲ್ಲಿ ಕೂಡಲೇ ಮುಟ್ಟುಗೋಲು ಹಾಕಿಕೊಂಡು ಸಂಬಂಧ ಪಟ್ಟವರ ವಿರುದ್ದ ಎಫ್‌ಐಆರ್ ದಾಖಲಿಸುವಂತೆ ಹಾಗೂ ಮರಳುಗಾರಿಕೆ ನಡೆಸಲು ಅನುಮತಿ ಪಡೆದು ನಿಯಮ ಉಲ್ಲಂಸಿರುವ ವಾಹನಗಳ ವಿರುದ್ಧ ಸಹ ಕೂಡಲೇ ಕ್ರಮ ಕೈಗೊಳ್ಳುವಂತೆ ಮಹೇಶ್ವರ ರಾವ್ ಸೂಚಿಸಿದರು.

ಅಕ್ರಮ ಮರಳುಗಾರಿಕೆ ತಡೆಯುವ ಜವಾಬ್ದಾರಿ ಹೊಂದಿರುವ ಸಂಬಂಧ ಪಟ್ಟ ತಹಶೀಲ್ದಾರ್‌ಗಳು, ಪಿಡಿಓಗಳು, ಗಣಿ ಇಲಾಖೆ ಮತ್ತು ಇತರೆ ಇಲಾಖೆಗಳ ಅಧಿಕಾರಿಗಳು ಮರಳುಗಾರಿಕೆ ನಡೆಯುವ ಪ್ರದೇಶಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಪರಿಶೀಲನೆ ನಡೆಸಿ ಅಕ್ರಮ ನಡೆಯ ದಂತೆ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಕೋವಿಡ್ ಚೇತರಿಕೆ ಶೇ.92: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಚೇತರಿಕೆ ಪ್ರಮಾಣ ಶೇ.63 ಇದೆ. ಆದರೆ ಜಿಲ್ಲೆಯಲ್ಲಿ ಇದರ ಪ್ರಮಾಣ ಶೇ.92 ಇದೆ. ಸೋಂಕಿತರ ಮರಣ ಪ್ರಮಾಣ ರಾಜ್ಯದಲ್ಲಿ ಶೇ.1.6 ಇದ್ದರೆ, ಜಿಲ್ಲೆಯಲ್ಲಿ ಅದು ಕೇವಲ ಶೇ.0.2 ಇದೆ. ಜಿಲ್ಲೆಯಲ್ಲಿ ಕೋವಿಡ್-19 ವಿರುದ್ದ ಎಲ್ಲಾ ಅಧಿಕಾರಿ ಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೋನ ಸೋಂಕಿತರ ಸಂಪರ್ಕದವರ ಪತ್ತೆ ಹಚ್ಚುವ ಕಾರ್ಯ ಸಹ ಉತ್ತಮವಾಗಿ ನಡೆಯುತ್ತಿದೆ ಎಂದು ಜಿಲ್ಲಾಡಳಿತದ ಕಾರ್ಯವನ್ನು ಅಭಿನಂದಿಸಿದ ಮಹೇಶ್ವರ ರಾವ್, ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಜಿಲ್ಲೆಯಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಸಿದ 3 ಮಂದಿಯ ವಿರುದ್ದ ಎಫ್‌ಐಆರ್ ದಾಖಲಿಸಿದ್ದು, ಕ್ವಾರಂಟೈನ್‌ನಲ್ಲಿರುವವರ ಮನೆಗೆ ಪ್ರತಿದಿನ ಭೇಟಿ ನೀಡಿ, ಕ್ವಾರಂಟೈನ್ ಆ್ಯಪ್‌ನಲ್ಲಿ ದಾಖಲಿಸುವ ಕಾರ್ಯದಲ್ಲಿ ಜಿಲ್ಲೆಯಲ್ಲಿ ಶೇ.92 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಕೋವಿಡ್ -19 ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿಗಳ ಆರೋಗ್ಯ ತಪಾಸಣೆಗೆ ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್-19ರ ಚಿಕಿತ್ಸೆಗಾಗಿ ಒಟ್ಟು 2,400 ಹಾಸಿಗೆ ಸೌಲಭ್ಯ ವಿದ್ದು, 9 ಫಿವರ್ ಕ್ಲಿನಿಕ್‌ಗಳನ್ನು ತೆರೆಯಲಾಗಿದೆ. ಐಎಲ್‌ಐ ಮತ್ತು ಸಾರಿ ಪ್ರಕರಣಗಳ ಕುರಿತಂತೆ ಪ್ರತಿದಿನ ವರದಿ ಪಡೆಯಲಾಗುತ್ತಿದೆ. 13,840 ಮಂದಿಯ ಮಾದರಿಗಳನ್ನು ಈವರೆಗೆ ಸಂಗ್ರಹಿಸಲಾಗಿದ್ದು ಪ್ರಸ್ತುತ 116 ಸಕ್ರಿಯ ಪ್ರಕರಣಗಳು ಮಾತ್ರ ಇವೆ ಎಂದು ಕೋವಿಡ್-19 ಜಿಲ್ಲಾ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ಮಾಹಿತಿ ನೀಡಿದರು.

ಸಭೆಯಲ್ಲಿ ಎಸ್ಪಿ ವಿಷ್ಣುವರ್ಧನ್, ಕುಂದಾಪುರ ವಲಯ ಅರಣ್ಯ ಸಂರಕ್ಷ ಣಾಧಿಕಾರಿ ಆಶೀಶ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪಭಾಗಾಧಿಕಾರಿ ರಾಜು ಹಾಗೂ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News