ರಾಜ್ಯದ ಹಲವೆಡೆ ಕೈಗಾರಿಕಾ ಟೌನ್‍ಶಿಪ್‍ಗಳ ನಿರ್ಮಾಣಕ್ಕೆ ಕ್ರಮ: ಜಗದೀಶ್ ಶೆಟ್ಟರ್

Update: 2020-06-27 13:52 GMT

ಬೆಂಗಳೂರು, ಜೂ.27: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳು ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕಾ ಟೌನ್‍ಶಿಪ್‍ಗಳ ನಿರ್ಮಾಣಕ್ಕೆ ಸಂಬಂಧಿಸಿದ ವಿಷಯವನ್ನು ಶೀಘ್ರವೇ ಸಚಿವ ಸಂಪುಟಕ್ಕೆ ತಂದು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಕಾಸಿಯಾ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಎಮ್‍ಎಸ್‍ಎಂಇ ದಿನಾಚರಣೆ ಅಂಗವಾಗಿ ಕೋವಿಡ್-19 ಉದ್ಯೋಗ ಸಹಾಯವಾಣಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕಾ ಟೌನ್‍ಶಿಪ್‍ಗಳ ನಿರ್ಮಾಣ ಆಗಬೇಕೆನ್ನುವುದು ಬಹುದಿನದ ಬೇಡಿಕೆಯಾಗಿದೆ. ಈ ಬಗ್ಗೆ ನಗರಾಭಿವೃದ್ದಿ ಸಚಿವ ಹಾಗೂ ಪ್ರಧಾನ ಕಾರ್ಯದರ್ಶಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಹಾಗೂ ಈ ಕುರಿತು ವರದಿ ತಯಾರಿಸುವಂತೆ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆಂದು ತಿಳಿಸಿದರು.

ದೇಶ ಹಾಗೂ ರಾಜ್ಯದ ಪ್ರಗತಿಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಕೊರೋನ ಸಂಕಷ್ಟದಿಂದ ನಮ್ಮ ಆರ್ಥಿಕ ವ್ಯವಸ್ಥೆಗೆ ಚೇತರಿಕೆ ನೀಡುವ ಶಕ್ತಿ ಈ ಸಂಸ್ಥೆಗಳಿಗೆ ಇವೆ. ಹೀಗಾಗಿ ಈ ಕ್ಷೇತ್ರಕ್ಕೆ ಕೇಂದ್ರ ಸರಕಾರದಿಂದಲೂ ಅಗತ್ಯ ನೆರವು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಕರ್ನಾಟಕವನ್ನು ದೇಶದಲ್ಲೇ ಪ್ರಥಮ ಕೈಗಾರಿಕಾಸ್ನೇಹಿ ರಾಜ್ಯವನ್ನಾಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ. ಈ ನಿಟ್ಟಿನಲ್ಲಿ ಅಗತ್ಯವಿದ್ದ ಭೂ ಸುಧಾರಣೆ ಹಾಗೂ ಕೈಗಾರಿಕೆಗಳ ಸ್ಥಾಪನೆಗೆ ಅಡ್ಡಿಯಾಗಿದ್ದ ಹಲವಾರು ನಿಯಮಗಳನ್ನು ಸರಳೀಕರಿಸಲು ರಾಜ್ಯ ಸರಕಾರ ಈಗಾಗಲೇ ಕಾರ್ಯಪ್ರವೃತ್ತವಾಗಿದೆ ಎಂದು ಅವರು ಹೇಳಿದರು.

ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯ ಅಡಿಯಲ್ಲಿ ಹಂಚಿಕೆ ಮಾಡಲಾಗುವ ಭೂಮಿಯ ದರದ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸುವ ಹೊಸ ವೈಜ್ಞಾನಿಕ ನೀತಿಯನ್ನು ತರುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಅಲ್ಲದೆ, ನೂತನ ಕೈಗಾರಿಕಾ ನೀತಿ ಸಿದ್ಧವಾಗಿದ್ದು, ಆರ್ಥಿಕ ಇಲಾಖೆಯ ಅನುಮತಿಗೆ ಕಾಯುತ್ತಿದ್ದೇವೆ. ಈ ಕಾಯ್ದೆಯಲ್ಲಿ ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕಾಸಿಯಾ ಅಧ್ಯಕ್ಷ ಆರ್.ರಾಜು, ಉಪಾಧ್ಯಕ್ಷ ಕೆ.ಬಿ.ಅರಸಪ್ಪ ಸೇರಿದಂತೆ ರಾಜ್ಯದ ಹಲವು ಭಾಗಗಳಿಂದ ಅಗಮಿಸಿದ್ದ ಸಂಘದ ಸದಸ್ಯರು ಭಾಗವಹಿಸಿದ್ದರು. ಇದೇ ವೇಳೆ ಕರ್ನಾಟಕದ ಕೌಶಲ್ಯ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ ಕೆ.ರತ್ನಪ್ರಭಾ ವೆಬಿನಾರ್ ಮೂಲಕ ಪಾಲ್ಗೊಂಡಿದ್ದರು.

ಕಳೆದ ಸಚಿವ ಸಂಪುಟದಲ್ಲಿ ಈಗಾಗಲೇ 2002 ಕರ್ನಾಟಕ ಕೈಗಾರಿಕಾ ಸೌಲಭ್ಯ ಅಧಿನಿಯಮಕ್ಕೆ ತಿದ್ದುಪಡಿಯನ್ನು ತರಲು ಒಪ್ಪಿಗೆಯನ್ನು ಪಡೆಯಲಾಗಿದೆ. ಕೇವಲ ಕೈಗಾರಿಕಾ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿಯ ಆಧಾರದ ಮೇಲೆ ಕೈಗಾರಿಕೆಗಳ ಸ್ಥಾಪನೆಯ ಕಾರ್ಯವನ್ನು ಪ್ರಾರಂಭಿಸಲು ಈ ಅಧಿನಿಯಮ ಅವಕಾಶ ಒದಗಿಸಲಿದೆ. ಮೂರು ವರ್ಷಗಳು ಅಥವಾ ವಾಣಿಜ್ಯ ಉತ್ಪಾದನೆ ಪ್ರಾರಂಭವಾಗುವ ಮುನ್ನ ಬೇರೆ ಅಗತ್ಯವಿರುವ ಎಲ್ಲ ಅನುಮತಿಗಳನ್ನು ಪಡೆಯಲು ಅವಕಾಶ ಇದರಲ್ಲಿ ದೊರೆಯಲಿದೆ. ಹೀಗಾಗಿ ಈ ತಿದ್ದುಪಡಿಯನ್ನು ಶೀಘ್ರದಲ್ಲೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗುವುದು.

-ಜಗದೀಶ್ ಶೆಟ್ಟರ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News