ಶಿಷ್ಟಾಚಾರ ಉಲ್ಲಂಘಿಸಿದ ಸಿಎಂ, ಸಚಿವರ ವಿರುದ್ಧ ಮೊದಲು ಪ್ರಕರಣ ದಾಖಲಿಸಿ: ಡಿಕೆಶಿ ಸವಾಲು

Update: 2020-06-29 15:06 GMT

ಬೆಂಗಳೂರು, ಜೂ.29: ಕೋವಿಡ್ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಶಿಷ್ಟಾಚಾರ ಹಾಗೂ ಮಾರ್ಗಸೂಚಿ ಉಲ್ಲಂಘನೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಶ್ರೀರಾಮುಲು, ಈಶ್ವರಪ್ಪ ಅವರ ವಿರುದ್ಧ ಮೊದಲು ಪ್ರಕರಣ ದಾಖಲಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸವಾಲು ಹಾಕಿದ್ದಾರೆ.

ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಮನವಿಯನ್ನು ರಾಷ್ಟ್ರಪತಿಗಳಿಗೆ ತಲುಪಿಸುವಂತೆ ಪತ್ರ ಸಲ್ಲಿಸಿದರು. 

ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ಅವರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವುವ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. 'ಬೆಳಗಾವಿಯಲ್ಲಿ ನಡೆದ ಮದುವೆಗೆ ಮುಖ್ಯಮಂತ್ರಿಗಳು ಹೋದಾಗ ಎಷ್ಟು ಜನ ಸೇರಿದ್ದರು?, ಸಚಿವ ಶ್ರೀರಾಮುಲು ಅವರ ಕಾರ್ಯಕ್ರಮದಲ್ಲಿ, ಶಿವಮೊಗ್ಗದಲ್ಲಿ ಈಶ್ವರಪ್ಪ ಅವರ ಕಾರ್ಯಕ್ರಮದಲ್ಲಿ ಎಷ್ಟು ಜನ ಸೇರಿದ್ದರು? ಸುರಕ್ಷಿತ ಅಂತರ ಹೇಗೆ ಕಾಯ್ದುಕೊಳ್ಳಲಾಗಿತ್ತು, ಅವರು ಕೇಂದ್ರ ಹಾಗೂ ತಮ್ಮ ಸರ್ಕಾರದ ನಿಯಮಾವಳಿಗಳನ್ನು ಯಾವ ರೀತಿ ಉಲ್ಲಂಘನೆ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿದೆ ಎಂದು ಕಿಡಿಕಾರಿದರು.

ಮತ್ತೊಬ್ಬ ಸಚಿವರು ಈಜುಕೊಳದಲ್ಲಿ ಈಜಾಡಿದ್ದಾರೆ. ಸರ್ಕಾರದ ಮಾರ್ಗಸೂಚಿಯಲ್ಲಿ ಈಜಾಡಲು ಅವಕಾಶ ಇದೆಯೇ? ಮದುವೆ, ಮುಂಜಿ, ಖಾಸಗಿ ಕಾರ್ಯಕ್ರಮಗಳ ವೇಳೆ ಕಾನೂನು ಉಲ್ಲಂಘನೆ ಮಾಡಿರುವ ಸಚಿವರ ವಿರುದ್ಧ ಮೊದಲು ಪ್ರಕರಣ ದಾಖಲಿಸಿ. ಆನಂತರ ಜನರ ಪರ ಧ್ವನಿ ಎತ್ತಿದ ನಮ್ಮ ವಿರುದ್ಧ ಕೇಸ್ ಹಾಕಲಿ. ನಾವು ಯಾವುದೇ ಕೇಸ್ ಗಳಿಗೆ ಹೆದರುವುದಿಲ್ಲ. ನಾವು ನಮ್ಮ ಹೋರಾಟ ಮುಂದುವರಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನರನ್ನು ರಕ್ಷಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ

ಕೇಂದ್ರ ಸರ್ಕಾರ ಅವೈಜ್ಞಾನಿಕವಾಗಿ ತೈಲ ಬೆಲೆ ಏರಿಕೆ ಮಾಡುತ್ತಿರುವುದರ ವಿರುದ್ಧ ಹಾಗೂ ಜನ ಸಾಮಾನ್ಯರ ಪರವಾಗಿ ಇಂದು ರಾಷ್ಟ್ರಾದ್ಯಂತ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಹೋರಾಟ ಮಾಡಿದೆ. ಜನ ಸಾಮಾನ್ಯರನ್ನು ರಕ್ಷಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೇಂದ್ರದ ಬೆಲೆ ಏರಿಕೆಯಿಂದ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲಿದ್ದು, ಜನರು ಅನುಭವಿಸುತ್ತಿರುವ ಸಂಕಷ್ಟಗಳ ಕುರಿತ ಮಾಹಿತಿಯನ್ನು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ತಲುಪಿಸುತ್ತಿದ್ದೇವೆ. ಪತ್ರದಲ್ಲಿ ಯುಪಿಎ ಸರ್ಕಾರ ಸಬ್ಸಿಡಿ ನೀಡಿ ಹೇಗೆ ಕಡಿಮೆ ಬೆಲೆಗೆ ಜನ ಸಾಮಾನ್ಯರಿಗೆ ಇಂಧನ ಸಿಗುವಂತೆ ಮಾಡಿತ್ತು. ಈಗಿನ ಸರ್ಕಾರ ಹೇಗೆ ಸಬ್ಸಿಡಿ ನೀಡದೇ ದರ ಹೆಚ್ಚಳ ಮಾಡಿದೆ ಎಂಬುದನ್ನು ವಿವರಿಸಿದ್ದೇವೆ ಎಂದು ಡಿಕೆಶಿ ತಿಳಿಸಿದರು.

ಸರ್ಕಾರದ ನಿರ್ಧಾರ ಜನರ ಮೇಲೆ ಪರಿಣಾಮ ಬೀರುತ್ತಿದ್ದು, ಅವರನ್ನು ರಕ್ಷಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಯುಪಿಎ ಸರ್ಕಾರ ಇದ್ದಾಗ ಕೇಂದ್ರದಲ್ಲಿ ಪೆಟ್ರೋಲಿಯಂ ಬೆಲೆ ಏರಿಕೆ ಯಾವ ರೀತಿ ಮಾಡಬೇಕು ಎಂದು ಒಂದು ನೀತಿ ರಚಿಸಲಾಗಿತ್ತು. ಈಗ ಅವುಗಳನ್ನು ಗಾಳಿಗೆ ತೂರಿ ಅವರ ಖಜಾನೆ ಭರ್ತಿ ಮಾಡಲು ಪ್ರಯತ್ನಿಸುತ್ತಿದೆ. ಆ ಮೂಲಕ ಜನ ವಿರೋಧಿ ನೀತಿ ಅನುಸರಿಸಿದೆ ಎಂದು ಕಿಡಿಕಾರಿದರು. 

ಈ ಸಂದರ್ಭದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News