ರಾಜ್ಯದಲ್ಲಿ 5,66,542 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ: ಸಚಿವ ಸುಧಾಕರ್
ಬೆಂಗಳೂರು, ಜೂ 29: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕಿತರ ಗುಣಮುಖ ಪ್ರಮಾಣ ಹೆಚ್ಚಾಗುತ್ತಿದೆ. ಒಟ್ಟಾರೆ ಶೇಕಡ 57ರಷ್ಟು ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಈವರೆಗೆ 7,507 ಮಂದಿ ಸೋಂಕಿತರು ಗುಣಮುಖರಾಗಿದ್ದು, 5,472 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 5,66,542 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಶೇಕಡ 2.21 ರಷ್ಟು ಮಂದಿಗೆ ಮಾತ್ರ ಸೋಂಕು ಕಂಡುಬಂದಿದೆ. ರಾಷ್ಟ್ರಮಟ್ಟದಲ್ಲಿ ಶೇ.3ರಷ್ಟಿರುವ ಮರಣ ಪ್ರಮಾಣ ರಾಜ್ಯದಲ್ಲಿ ಕೇವಲ ಶೇ.1.56ರಷ್ಟಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ತಮ್ಮ ಕುಟುಂಬದಲ್ಲಿ ಕೊರೋನ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಕುಟುಂಬದ ಎಲ್ಲ ಸದಸ್ಯರು ಮತ್ತು ಸಿಬ್ಬಂದಿ ಕೋವಿಡ್-19 ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗಿದ್ದೇವೆ. ಸಚಿವನಾಗಿ ಅದಕ್ಕೂ ಮಿಗಿಲಾಗಿ ವೈದ್ಯನಾಗಿ ಸರಕಾರದ ಎಲ್ಲಾ ಮಾರ್ಗಸೂಚನೆಗಳನ್ನು ಪಾಲನೆ ಮಾಡಿದ್ದೇವೆ. ಸೋಂಕು ನಿಯಂತ್ರಣಕ್ಕೆ ಪ್ರತಿಯೊಬ್ಬರು ಸರಕಾರದ ಸೂಚನೆಗಳನ್ನು ಪಾಲಿಸಬೇಕೆಂದು ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.