ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ಭದ್ರತೆ: ಸಹಕಾರ ಸಂಘದಿಂದ ಸಾಲ ನೀಡಲು ಚಿಂತನೆ

Update: 2020-07-02 12:59 GMT

ಮಡಿಕೇರಿ ಜು.2 : ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ಭದ್ರತೆ ಒದಗಿಸುವಲ್ಲಿ ಸರ್ಕಾರದ ವತಿಯಿಂದ ಚಿಂತನೆ ನಡೆಯುತ್ತಿದೆ. ಸ್ವಸಹಾಯ ಸಂಘ ಹಾಗೂ ಸ್ತ್ರೀಶಕ್ತಿ ಸಂಘಗಳ ಮಾದರಿ ಸಾಲ ನೀಡುವ ಸಂಬಂಧ ಈಗಾಗಲೇ ಸರ್ಕಾರದ ಮಟ್ಟದಲ್ಲಿ 2-3 ಸುತ್ತಿನ ಸಭೆಗಳು ನಡೆದಿದ್ದು, ಶೀಘ್ರದಲ್ಲಿಯೇ ನಿರ್ಧಾರ ಪ್ರಕಟಿಸಲಾಗುವುದು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದ್ದಾರೆ.   

ಜಿಲ್ಲಾಡಳಿತ, ಸಹಕಾರ ಇಲಾಖೆ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮತ್ತು ಜಿಲ್ಲೆಯ ಸಹಕಾರ ಸಂಘಗಳ ಸಹಯೋಗದಲ್ಲಿ ನಗರದ ಜಿ.ಪಂ.ಭವನದಲ್ಲಿ ಗುರುವಾರ ನಡೆದ ಕೊಡಗು ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆ ಮೂಲಕ ತಲಾ 3 ಸಾವಿರ ರೂ. ಪ್ರೋತ್ಸಾಹ ಧನ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸ್ವಸಹಾಯ ಗುಂಪುಗಳಿಗೆ ಸಾಲ ನೀಡುವ ನಿಟ್ಟಿನಲ್ಲಿ ಈಗಾಗಲೇ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಎರಡು ಮೂರು ಬಾರಿ ಸಭೆ ನಡೆದಿದ್ದು, ಸದ್ಯದಲ್ಲೇ ಅಂತಿಮ ತೀರ್ಮಾನ ಹೊರ ಬೀಳಲಿದೆ ಎಂದು ಸಚಿವರು ನುಡಿದರು.  

ಬಡವರ ಬಂಧು ಯೋಜನೆ ಸೇರಿದಂತೆ ಸ್ತ್ರೀಶಕ್ತಿ ಗುಂಪುಗಳಿಗೆ ಸಹಾಯಧನ ಕಲ್ಪಿಸುವಲ್ಲಿ ಮುಂದಾಗುತ್ತಿದೆ ಎಂದು ಅವರು ಹೇಳಿದರು. 

ವಿಶ್ವದಾದ್ಯಂತ ಕೋವಿಡ್-19 ಹರಡಿದ್ದು, ಇದನ್ನು ನಿಯಂತ್ರಿಸುವಲ್ಲಿ ಆಶಾ ಕಾರ್ಯಕರ್ತರು ತಮ್ಮದೇ ಆದ ಪಾತ್ರ ವಹಿಸುತ್ತಿದ್ದಾರೆ. ಇವರಿಗೆ ಸರ್ಕಾರದ ವತಿಯಿಂದ ಸಹಕಾರ ಇಲಾಖೆ ಮೂಲಕ ಪ್ರೋತ್ಸಾಹ ಧನ ಕಲ್ಪಿಸಬೇಕು ಎಂಬ ಉದ್ದೇಶದಿಂದ ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂ. ಚೆಕ್ ವಿತರಿಸಲಾಗುತ್ತಿದೆ ಎಂದು ಸಚಿವರು ಹೇಳಿದರು. 

ರಾಜ್ಯದಲ್ಲಿ 42 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದು, ಇದುವರೆಗೆ 21 ಸಾವಿರ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ಕಲ್ಪಿಸಲಾಗಿದೆ ಎಂದು ಸಚಿವರು ವಿವರಿಸಿದರು. ಕೊಡಗು ಜಿಲ್ಲೆಯಲ್ಲಿ 480 ಆಶಾ ಕಾರ್ಯಕರ್ತೆಯರು ಇದ್ದು ಗುರುವಾರ ಹಲವರಿಗೆ ಸಾಂಕೇತಿಕವಾಗಿ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಯಿತು. 

ಕೊರೊನ ವೈರಸ್ ಎಲ್ಲೆಡೆ ಹರಡುತ್ತಿದ್ದು, ಇದನ್ನು ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸುವುದು, ಅಂತರ ಕಾಯ್ದುಕೊಳ್ಳುವುದು. ಅಗತ್ಯವಿದ್ದಲ್ಲಿ ಮಾತ್ರ ಮನೆಯಿಂದ ಹೊರ ಬರುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. 

ದೇಶ ವಿದೇಶದಿಂದ ಆಗಮಿಸುವವರಲ್ಲಿ ಮಾಹಿತಿ ನೀಡುವಲ್ಲಿ ಆಶಾ ಕಾರ್ಯಕರ್ತರ ಪಾತ್ರ ಮಹತ್ತರವಾಗಿದೆ. ಕೋವಿಡ್ ನಿಯಂತ್ರಿಸುವಲ್ಲಿ ಆಶಾ ಕಾರ್ಯಕರ್ತರು ಪ್ರಮುಖ ಪಾತ್ರ ವಹಿಸುತ್ತಿದ್ದು, ತಮ್ಮ ಆರೋಗ್ಯದ ಕಡೆಯು ಗಮನ ಹರಿಸುವಂತಾಗಬೇಕು ಎಂದು ಸಚಿವರು ಸಲಹೆ ಮಾಡಿದರು. 

ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಆಶಾ ಕಾರ್ಯಕರ್ತರು ನಿಸ್ವಾರ್ಥದಿಂದ ಸೇವೆ ಸಲ್ಲಿಸುತ್ತಿದ್ದು, ಇವರ ಕಾರ್ಯ ಸ್ಮರಣೀಯ ಎಂದರು. ವೈದ್ಯರು, ಆರೋಗ್ಯ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಕೋವಿಡ್-19 ಹೋಗಲಾಡಿಸಲು ಜೀವದ ಹಂಗನ್ನು ತೊರೆದು ಕಾರ್ಯನಿರ್ವಹಿಸುತ್ತಿದ್ದಾರೆ.  ಆಶಾ ಕಾರ್ಯಕರ್ತರು ನಿಜವಾದ ಕೊರೊನಾ ಸೈನಿಕರು ಎಂದು ಕೆ.ಜಿ.ಬೋಪಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. 

ಕೋವಿಡ್ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ದೊಡ್ಡ ಸವಾಲು ಎದುರಾಗಲಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಕೊಡಗು ಜಿಲ್ಲೆಯ ಚೆಕ್ ಪೋಸ್ಟ್ ಗಳನ್ನು ಬಿಗಿಗೊಳಿಸಬೇಕಿದೆ ಎಂದು ಕೆ.ಜಿ.ಬೋಪಯ್ಯ ಅವರು ಸಲಹೆ ಮಾಡಿದರು.

ಒಂದು ಕಡೆ ದೇಶದ ಗಡಿಭಾಗದಲ್ಲಿ ಸಮಸ್ಯೆ, ಮತ್ತೊಂದು ಕಡೆ ದೇಶದ ಒಳಗೆ ಹಲವು ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸಬೇಕಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. 

 ಸಹಕಾರ ಕ್ಷೇತ್ರದಲ್ಲಿ ರುಪೇ ಕಾರ್ಡ್ ಜಾರಿಗೊಳಿಸುವುದನ್ನು ಮಾನ್ಯ ಸಚಿವರು ತಡೆಹಿಡಿದಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಇಂತಹ ಹೊಸ ಸುತ್ತೋಲೆಗಳನ್ನು ವಾಪಸ್ಸು ಪಡೆದಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ ಕೋವಿಡ್ ನಿಯಂತ್ರಿಸುವಲ್ಲಿ ಆಶಾ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದಾರೆ. ಜಿಲ್ಲಾಡಳಿತದ ಜೊತೆ ಕೈಜೋಡಿಸಿ ಕಾರ್ಯನಿರ್ವಹಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಸಹ ಕೊರೊನಾ ವೈರಸ್ ಹೋಗಲಾಡಿಸುವಲ್ಲಿ ಆಶಾ ಕಾರ್ಯಕರ್ತರ ಪಾತ್ರ ಮಹತ್ತರವಾಗಿದೆ ಎಂದು ಅವರು ಹೇಳಿದರು. 

ಕೋವಿಡ್ ನಿಯಂತ್ರಿಸುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಹೆಚ್ಚಾಗಿದೆ. ಆ ನಿಟ್ಟಿನಲ್ಲಿ ಜಾಗೃತಿ ವಹಿಸಬೇಕು. ಕೊರೊನಾ ವೈರಸ್ ಹೋಗಲಾಡಿಸಲು ಪ್ರತಿಯೊಬ್ಬರ ಜವಾಬ್ದಾರಿ ಹೆಚ್ಚಿನದ್ದಾಗಿದ್ದು, ಸ್ವಪ್ರೇರಣೆಯಿಂದ ಇದನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ವಹಿಸಬೇಕು. ಜಿಲ್ಲೆಯ ಸಹಕಾರ ಸಂಘಗಳು ರೈತರಿಗೆ ಕಾಲ ಕಾಲಕ್ಕೆ ಸಾಲವನ್ನು ನೀಡುತ್ತಿರುವುದಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.    

ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ ಅವರು ಮಾತನಾಡಿ ಕೋವಿಡ್ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾಲ ಕಾಲಕ್ಕೆ ಹೊರಡಿಸುವ ಆದೇಶವನ್ನು ಚಾಚು ತಪ್ಪದೆ ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಅವರು ಸಲಹೆ ಮಾಡಿದರು. 

ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ಮಾತನಾಡಿ ಕೋವಿಡ್ ನಿಯಂತ್ರಿಸುವಲ್ಲಿ ಆಶಾ ಕಾರ್ಯಕರ್ತರು ತಳಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಕರ್ತವ್ಯ ನಿಷ್ಠೆಯನ್ನು ಪ್ರಶಂಸಿಸಬೇಕಿದೆ ಎಂದರು.  

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿ ಅವರು ಮಾತನಾಡಿ, ಕೊಡಗು ಡಿಸಿಸಿ ಬ್ಯಾಂಕ್ ಸಿ.ಎಂ. ಪರಿಹಾರ ನಿಧಿಗೆ 10 ಲಕ್ಷ ರೂ. ನೀಡಿದೆ. ಹಾಗೆಯೇ 8 ಲಕ್ಷ ರೂ.ವೆಚ್ಚದಲ್ಲಿ 2 ವೆಂಟಿಲೇಟರ್ ಖರೀದಿಸಿ ನೀಡಲಾಗುತ್ತದೆ. ವಿವಿಧ ಸಹಕಾರ ಸಂಘಗಗಳ ಮೂಲಕ ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ 33 ಲಕ್ಷ ರೂ. ಸಂಗ್ರಹಿಸಿ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. 

ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಕೇಟೋಳಿರ ಹರೀಶ್ ಪೂವಯ್ಯ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಮೈಸೂರು ವಿಭಾಗದ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಪ್ರಕಾಶ್ ರಾವ್, ಇತರರು ಇದ್ದರು. ಸಹಕಾರ ಸಂಘಗಳ ಉಪ ನಿಬಂಧಕರಾದ ಬಿ.ಕೆ.ಸಲೀಂ ನಿರೂಪಿಸಿ, ವಂದಿಸಿದರು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್‍ನ ಸಿಇಒ ಯೋಗೇಂದ್ರ ನಾಯಕ್ ಅವರು ಪ್ರಾರ್ಥಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News