ಸುರಕ್ಷಿತವಾಗಿ ನಡೆದ ಎಸೆಸೆಲ್ಸಿ ಪ್ರಥಮ ಭಾಷಾ ಪರೀಕ್ಷೆ: ಸಚಿವ ಸುರೇಶ್‍ ಕುಮಾರ್

Update: 2020-07-02 16:01 GMT

ಬೆಂಗಳೂರು, ಜು.2: ಗುರುವಾರ ನಡೆದ ಎಸೆಸೆಲ್ಸಿ ಪ್ರಥಮ ಭಾಷಾ ಪರೀಕ್ಷೆಗಳು ಸಾಮಾಜಿಕ ಸುರಕ್ಷಿತ ವಾತಾವರಣದಲ್ಲಿ ಅಚ್ಚುಕಟ್ಟಾಗಿ ನಡೆದಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ತಿಳಿಸಿದ್ದಾರೆ.

ಇಂದಿನ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದ ಅವರು, ಆರನೇ ದಿನವಾದ ಗುರುವಾರ ನಡೆದ ಕನ್ನಡ ಸೇರಿದಂತೆ ಪ್ರಥಮ ಭಾಷಾ ಪರೀಕ್ಷೆಗಳಿಗೆ ನೋಂದಾಯಿತ 7,78,618 ವಿದ್ಯಾರ್ಥಿಗಳ ಪೈಕಿ 7,64,006 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟಾರೆ ಶೇ. 98.12ರಷ್ಟು ಇಂದು ಹಾಜರಾತಿ ಇದೆ. 14,612 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಷಯದ ಪರೀಕ್ಷೆಗೆ ಕಳೆದ 2018-19ನೇ ಸಾಲಿಗೆ 7,75,988 ವಿದ್ಯಾರ್ಥಿಗಳ ಪೈಕಿ 7,67,756 ವಿದ್ಯಾರ್ಥಿಗಳು ಹಾಜರಾಗಿದ್ದು, 8232 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಶೇ. 98.93 ಹಾಜರಾತಿ ಇತ್ತು ಎಂದು ಅವರು ತಿಳಿಸಿದ್ದಾರೆ. 

ಮೊದಲ ಬಾರಿಗೆ 7,44,843 ಶಾಲಾ ವಿದ್ಯಾರ್ಥಿಗಳು ಹಾಗೂ 20,957 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಂಟೈನ್ಮೆಂಟ್ ಪ್ರದೇಶಗಳ 3890 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡೇತರ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 670 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ 04 ಪ್ರಕರಣಗಳು ನಡೆದಿದ್ದು, ಅವರನ್ನು ಪರೀಕ್ಷೆಯಿಂದ ಡಿಬಾರ್ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. 

ಸರಕಾರಿ ಅಥವಾ ಖಾಸಗಿ ವಸತಿ ನಿಲಯಗಳಲ್ಲಿ ಇದ್ದು 1448 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯಗಳಿಂದ 639 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದ್ದು, 45 ವಿದ್ಯಾರ್ಥಿಗಳು ಗೈರು ಹಾಜರಿಯಾಗಿ 594 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 12644 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, 12540 ವಿದ್ಯಾರ್ಥಿಗಳು ಹಾಜರಾಗಿದ್ದರೆ, 104 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸುರೇಶ್‍ಕುಮಾರ್ ತಿಳಿಸಿದ್ದಾರೆ. 

ಹೋಂ ಕ್ವಾರಂಟೈನಲ್ಲಿರುವ ಹಾಗೂ ಕೋವಿಡ್ ಪಾಸಿಟಿವ್ ಎಂದು ಗುರುತಿಸಲಾದ ವಿದ್ಯಾರ್ಥಿಗಳಿಗೆ ಈಗಿನ ಪರೀಕ್ಷೆಯನ್ನು ಬರೆಯುವುದರಿಂದ ವಿನಾಯ್ತಿ ನೀಡಲಾಗಿದೆ. ಈ ಎಲ್ಲರಿಗೂ ಸಕಾರಣದ ಆಧಾರದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಕ್ಕೆ 3212 ಬಸ್ ಹಾಗೂ ಇತರೆ ವಾಹನಗಳನ್ನು ಒಪ್ಪಂದದ ಮೇರೆಗೆ ಪಡೆದು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ಭೇಟಿ: ಗುರುವಾರ ತುಮಕೂರು, ಮಧುಗಿರಿ, ಬೆಂಗಳೂರು ಗ್ರಾಮಾಂತರ ಶೈಕ್ಷಣಿಕ ವಿವಿಧ ತಾಲೂಕುಗಳ ತಾಲೂಕುಗಳ 13 ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಅಲ್ಲೆಲ್ಲಾ ಅಚ್ಚುಕಟ್ಟಾದ ವ್ಯವಸ್ಥೆಗಳನ್ನು ಮಾಡಲಾಗಿದೆ. ಮಕ್ಕಳು ನೆಮ್ಮದಿ ಮತ್ತು ಆಹ್ಲಾದಕರ ವಾತಾವರಣದಲ್ಲಿ ಪರೀಕ್ಷೆ ಬರೆಯುತ್ತಿದ್ದುದು ಕಂಡುಬಂದಿದೆ ಎಂದು ಸಚಿವರು ತಿಳಿಸಿದ್ದಾರೆ. 

ಕೊಪ್ಪಳ ಜಿಲ್ಲೆಯಕಾರಟಗಿಯ ಶರಣಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪರೀಕ್ಷಾಕೇಂದ್ರದಲ್ಲಿ ಪರೀಕ್ಷಾರ್ಥಿಯಾಗಿದ್ದ ಕೋವಿಡ್ ಸೋಂಕು ದೃಢಪಟ್ಟ ವಿದ್ಯಾರ್ಥಿಯೊಂದಿಗೆ ಆ ಕೊಠಡಿಯಲ್ಲಿ ಪರೀಕ್ಷೆಗೆ ಹಾಜರಾಗಿದ್ದ 17 ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆಯಲ್ಲಿ ನೆಗೆಟೀವ್ ಫಲಿತಾಂಶ ಬಂದಿದ್ದು, ಅವರೆಲ್ಲ ಪ್ರತ್ಯೇಕಕೊಠಡಿಯಲ್ಲಿ ಇಂದು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. 

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ನೂತನ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿ ನಂದೀಶ್‍ಕುಮಾರನ ತಾಯಿ ಕ್ಯಾನ್ಸರ್ ರೋಗದಿಂದಾಗಿ ದಿನಾಂಕ 30-06-2020ರಂದು ನಿಧನರಾಗಿದ್ದರು. ಆದರೂ ಆ ವಿದ್ಯಾರ್ಥಿ ಮುಂದಿನ ಎಲ್ಲ ಪರೀಕ್ಷೆಗಳಿಗೆ ಹಾಜರಾಗುವ ಮೂಲಕ ಧೈರ್ಯ ತೋರಿದ್ದಾನೆ ಎಂದು ಸಚಿವರು ವಿವರಿಸಿದರು. ಕಲಬುರಿಗಿ ಜಿಲ್ಲೆಯ ಜೇವರ್ಗಿ ಬಳಿ ಸೇತುವೆ ಕುಸಿದಿದ್ದು, ಪರೀಕ್ಷೆಗೆ ಬರಬೇಕಾಗಿದ್ದ ಮಕ್ಕಳಿಗೆ ತೊಂದರೆಯಾಗಿ ಆಚೆಯೇ ನಿಲ್ಲುವಂತಾಗಿತ್ತು. ಈ ಸಂದರ್ಭದಲ್ಲಿ ಸಕಾಲಕ್ಕೆ ಅಗ್ನಿಶಾಮಕ ದಳದವರು ಬಂದು ತಾವೇ ತಮ್ಮ ಅಲ್ಯೂಮಿನಿಯಂನ ದೊಡ್ಡ ಏಣಿ ಮೂಲಕ ತಾತ್ಕಾಲಿಕ ಸೇತುವೆ ನಿರ್ಮಿಸಿ ಮಕ್ಕಳಿಗೆ ಅನುಕೂಲ ಮಾಡಿಕೊಟ್ಟರು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News