ಉಡುಪಿ: ಮಂಗಳವಾರ 28 ಮಂದಿಗೆ ಕೊರೋನ ಸೋಂಕು ದೃಢ

Update: 2020-07-07 16:07 GMT
ಸಾಂದರ್ಭಿಕ ಚಿತ್ರ

ಉಡುಪಿ, ಜು.5: ಜಿಲ್ಲೆಯ 28 ಮಂದಿಯಲ್ಲಿ ಮಂಗಳವಾರ ನೋವೆಲ್ ಕೊರೋನ ವೈರಸ್ (ಕೋವಿಡ್-19) ಸೋಂಕು ಪತ್ತೆಯಾಗಿದೆ. ಶಂಕಿತರ ಗಂಟಲುದ್ರವ ಮಾದರಿಯ ಪರೀಕ್ಷೆಯಲ್ಲಿ ಇಂದು 28 ಮಂದಿ ಸೋಂಕಿಗೆ ಪಾಸಿಟಿವ್ ಆಗಿದ್ದರೆ 216 ಮಂದಿಯ ಮಾದರಿ ನೆಗೆಟಿವ್ ಫಲಿತಾಂಶವನ್ನು ನೀಡಿದೆ. ಇಂದು ಮತ್ತೆ 1231 ಮಂದಿಯ ಮಾದರಿಯನ್ನು ಪರೀಕ್ಷೆಗಾಗಿ ಪಡೆಯಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 28 ಮಂದಿಯಲ್ಲಿ ಅಬುದಾಬಿಯಿಂದ ಬಂದ ಒಬ್ಬರು, ಮಹಾರಾಷ್ಟ್ರದಿಂದ ಬಂದ ಇಬ್ಬರು, ಬೆಂಗಳೂರು (4), ಮಂಗಳೂರು (2), ತುಮಕೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಬಂದ 8 ಮಂದಿ ಇದ್ದು, ಉಳಿದ 17 ಮಂದಿ ಜಿಲ್ಲೆಯಲ್ಲಿ ಈಗಾಗಲೇ ಪಾಸಿಟಿವ್ ಬಂದವರ ಸ್ಥಳೀಯ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ ಎಂದು ಡಾ.ಸೂಡ ವಿವರಿಸಿದರು.

ಸೋಂಕಿತರಲ್ಲಿ ಉಡುಪಿ ತಾಲೂಕಿನ 9 ಮಂದಿ, ಕುಂದಾಪುರ ತಾಲೂಕಿನ 17 ಮಂದಿ ಹಾಗೂ ಕಾರ್ಕಳ ತಾಲೂಕಿನ ಇಬ್ಬರು ಸೇರಿದ್ದಾರೆ. 19 ಮಂದಿ ಪುರುಷರು, 9 ಮಹಿಳೆಯರಿಗೆ ಪಾಸಿಟಿವ್ ಬಂದಿದ್ದು, ಇವರಲ್ಲಿ ಇಬ್ಬರು ಪುರುಷರು ಹಾಗೂ ಒಬ್ಬ ಮಹಿಳೆ ಹಿರಿಯ ನಾಗರಿಕರಾಗಿದ್ದಾರೆ.

ಮಂಗಳವಾರ ಪಾಸಿಟಿವ್ ಬಂದವರಲ್ಲಿ ಆಸ್ಪತ್ರೆಯೊಂದರ ಆರೋಗ್ಯ ಕಾರ್ಯಕರ್ತರು ಸೇರಿದ್ದಾರೆ. ಅಲ್ಲದೇ ಅಟೋರಿಕ್ಷಾ ಚಾಲಕರೊಬ್ಬರ ಸಂಪರ್ಕಿತರು, ಕೆಎಸ್ಸಾರ್ಟಿಸಿ ಬಸ್ ಚಾಲಕರ ಸಂಪರ್ಕಿತರಿಗೆ ಪಾಸಿಟಿವ್ ಬಂದಿದೆ. ಇಂದು ಪಾಸಿಟಿವ್ ಬಂದ ಎಲ್ಲರನ್ನೂ ಈಗಾಗಲೇ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಅಜ್ಜರಕಾಡು ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿಗೆ ದಾಖಲಾದ ಒಬ್ಬ ವೃದ್ಧ ರವಿವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು.

ಮಂಗಳವಾರ 28 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ 1390ಕ್ಕೇರಿದೆ. ಇದರಿಂದ ಉಡುಪಿ ಜಿಲ್ಲೆ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದೆ. ಬೆಂಗಳೂರು (11361) ಹಾಗೂ ಕಲಬುರಗಿ ಜಿಲ್ಲೆ (1750) ಮೊದಲೆರಡು ಸ್ಥಾನದಲ್ಲಿವೆ. ಬಳ್ಳಾರಿ (1388) ಹಾಗೂ ದಕ್ಷಿಣ ಕನ್ನಡ (1351) ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದರೆ, ಯಾದಗಿರಿ 1016 ಪ್ರಕರಣಗಳೊಂದಿಗೆ ಆರನೇ ಸ್ಥಾನದಲ್ಲಿದೆ.

28 ಮಂದಿ ಗುಣಮುಖ: ಜಿಲ್ಲೆಯಲ್ಲಿ ಪಾಸಿಟಿವ್ ಬಂದು ಚಿಕಿತ್ಸೆಯ ಬಳಿಕ ಗುಣಮುಖರಾದ 28 ಮಂದಿ ಇಂದು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿ ಡಾ.ಟಿಎಂಎ ಪೈ ಆಸ್ಪತ್ರೆಯ 9 ಮಂದಿ, ಕಾರ್ಕಳದ 7ಮಂದಿ ಹಾಗೂ ಕುಂದಾಪುರದ 12 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರಲ್ಲಿ ಸೇರಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 1182ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 205 ಮಂದಿ ಜಿಲ್ಲೆಯಲ್ಲಿ ಇನ್ನೂ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.

ಸೋಂಕಿನ ಪರೀಕ್ಷೆಗಾಗಿ ಮಂಗಳವಾರ ಇನ್ನೂ 1231 ಮಂದಿಯ ಗಂಟಲು ದ್ರವದ ಸ್ಯಾಂಪಲ್‌ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಸಂಪರ್ಕಿತರು 23 ಮಂದಿ, ಉಸಿರಾಟ ತೊಂದರೆಯ ಇಬ್ಬರು, ಶೀತಜ್ವರದಿಂದ ಬಳಲುವ 12 ಮಂದಿ ಹಾಗೂ ದೇಶದ ವಿವಿದೆಡೆಗಳ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಬಂದ 1194 ಮಂದಿಯ ಸ್ಯಾಂಪಲ್‌ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.

ಇಂದು ಪಡೆದ ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 19,773ಕ್ಕೇರಿದೆ. ಇವುಗಳಲ್ಲಿ ಈವರೆಗೆ 15,756 ನೆಗೆಟಿವ್, 1390 ಪಾಸಿಟಿವ್ ಬಂದಿವೆ. ಮೂವರು ಮೃತಪಟ್ಟಿದ್ದಾರೆ. ಇನ್ನು ಒಟ್ಟು 2627 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ. ಇಂದು 37 ಮಂದಿಯನ್ನು ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಇವರಲ್ಲಿ ಮೂವರು ಕೋವಿಡ್ ಶಂಕಿತರು, 13 ಮಂದಿ ಉಸಿರಾಟ ತೊಂದರೆಯವರು ಹಾಗೂ 21 ಮಂದಿ ಶೀತಜ್ವರದಿಂದ ಬಳಲುವವರು ಸೇರಿದ್ದಾರೆ ಎಂದರು.

ಜಿಲ್ಲೆಯ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್‌ಗಳಿಂದ ಇಂದು 21 ಮಂದಿ ಬಿಡುಗಡೆಗೊಂಡಿದ್ದು, 138 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕೊರೋನ ಸೋಂಕಿನ ಗುಣಲಕ್ಷಣದ 44 ಮಂದಿ ಸೇರಿದಂತೆ ಒಟ್ಟು 6045 ಮಂದಿಯನ್ನು ಕೊರೋನ ತಪಾಸಣೆಗಾಗಿ ನೊಂದಾಯಿಸಿ ಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗ 1170 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಡಾ.ಸೂಡ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News