ಉಡುಪಿ: ಕೋನಿಡ್-19 ಸರಕಾರಿ ಪರೀಕ್ಷಾ ಲ್ಯಾಬ್ ಉದ್ಘಾಟನೆ

Update: 2020-07-08 16:01 GMT

ಉಡುಪಿ, ಜು.8: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಿರುವ, ಕೋವಿಡ್-19 ಸರಕಾರಿ ಪರೀಕ್ಷಾ ಲ್ಯಾಬ್‌ನ್ನು ರಾಜ್ಯದ ಮುಜರಾಯಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲೇ ಕೊರೋನ ಪರೀಕ್ಷೆಗಾಗಿ ಪ್ರಾರಂಭದಲ್ಲಿ ಕೇವಲ ಒಂದು ಪರೀಕ್ಷಾ ಲ್ಯಾಬ್ ಮಾತ್ರ ಇದ್ದು, ಆದರೆ ಈಗ ರಾಜ್ಯದಲ್ಲಿನ ಕೋವಿಡ್ ಪರೀಕ್ಷಾ ಲ್ಯಾಬ್‌ಗಳ ಸಂಖ್ಯೆ 82 ಕ್ಕೇರಿದೆ ಎಂದರು.

ಜಿಲ್ಲೆಯ ಕೊರೋನ ಶಂಕಿತರ ಗಂಟಲುದ್ರವ ಮಾದರಿಯ ಪರೀಕ್ಷೆಗಾಗಿ ಈ ಮೊದಲು ಮಂಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳನ್ನು ಅವಲಂಬಿಸಬೇಕಿತ್ತು, ಈಗ ಇಲ್ಲಿಯೇ ಲ್ಯಾಬ್ ಆರಂಬಿಸಿರುವುದರಿಂದ ಇನ್ನು ಮುಂದೆ ಇಲ್ಲಿಯೇ ಶೀಘ್ರದಲ್ಲಿ ವರದಿ ಪಡೆಯಬಹುದಾಗಿದೆ ಎಂದರು.

ಜಿಲ್ಲೆಯಲ್ಲಿ ಇದುವರೆಗೆ 1390ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಬಂದಿದ್ದು, ಅದರಲ್ಲಿ ಮಹಾರಾಷ್ಟ್ರದಿಂದ ಬಂದವರ ಸಂಖ್ಯೆಯೇ1100 ಮೀರಿದೆ. ಹೊರ ರಾಜ್ಯ, ದೇಶಗಳಿಂದ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುವವರಿಗಾಗಿ ಇಲ್ಲಿ ಪ್ರಯೋಗಾಲಯ ಆರಂಭಿಸಬೇಕಾದ ಅವಶ್ಯಕತೆ ಮನಗಂಡು ಮುಖ್ಯಮಂತ್ರಿಗಳು ಈ ಲ್ಯಾಬ್‌ನ್ನು ಉಡುಪಿ ಜಿಲ್ಲೆಗೆ ವಿಶೇಷವಾಗಿ ಮಂಜೂರು ಮಾಡಿದ್ದಾರೆ ಎಂದು ಸಚಿವ ಕೋಟ ತಿಳಿಸಿದರು.

ಕೊರೋನ ನಿಯಂತ್ರಣ ಮತ್ತು ನಿರ್ವಹಣೆ ಕುರಿತಂತೆ ಉಡುಪಿ ಜಿಲ್ಲಾಡಳಿತ ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಇದಕ್ಕಾಗಿ ಜಿಲ್ಲೆಯ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು ಮತ್ತು ವಿಶೇಷವಾಗಿ ಜಿಲ್ಲಾಧಿಕಾರಿಗಳಿಗೆ ಸರಕಾರದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್-19 ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ವಿಳಂಬವಾಗದಂತೆ ರೂಪಿಸಿರುವ ಅಂಬುಲೆನ್ಸ್ ಮಾನಿಟರಿಂಗ್ ಸಿಸ್ಟಂ ಯೋಜನೆಯನ್ನು ಶಾಸಕ ಸುನೀಲ್ ಕುಮಾರ್ ಉದ್ಘಾಟಿಸಿದರು.

ಈ ಯೋಜನೆಗಾಗಿ ಜಿಲ್ಲೆಯ ಎಲ್ಲಾ ಸರಕಾರಿ ಅಂಬುಲೈನ್ಸ್‌ಗಳಿಗೆ ಜಿಪಿಎಸ್ ಅಳವಡಿಸಿದ್ದು, ಅಂಬುಲೆನ್ಸ್‌ಗಳು ಯಾವ ಸ್ಥಳದಲ್ಲಿವೆ ಎಂಬ ಮಾಹಿತಿ ಬೆರಳ ತುದಿಯಲ್ಲಿಯೇ ದೊರೆಯಲಿದೆ. ಇದರಿಂದ ಕೋವಿಡ್ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲು ವಿಳಂಬಕ್ಕೆ ಆಸ್ಪದ ನೀಡದಂತೆ ಸಮೀಪದ ಆಂಬುಲೆನ್ಸ್ ಬಳಸಿಕೊಳ್ಳಬಹುದಾಗಿದ್ದು, ರಾಜ್ಯದಲ್ಲೇ ಈ ಯೋಜನೆ ಪ್ರಥಮವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯಲ್ಲಿನ ಆಸ್ಪತ್ರೆಗಳಲ್ಲಿ ಕೊರೋನ ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ಬೆಡ್‌ಗಳ ಕುರಿತು ಮಾಹಿತಿ ನೀಡಲು ರೂಪಿಸಿರುವ ಬೆಡ್ ಮ್ಯಾನೇಜ್ ಮೆಂಟ್ ಸಿಸ್ಟಂ ನ್ನು ಶಾಸಕ ರಘುಪತಿ ಭಟ್ ಉದ್ಘಾಟಿಸಿದರು. ಈ ಯೋಜನೆಯ ಪ್ರಕಾರ ಜಿಲ್ಲೆಯಲ್ಲಿನ ಕೊರೋನ ರೋಗಿಗೆ ಸಮೀಪದ ಯಾವ ಆಸ್ಪತ್ರೆಯಲ್ಲಿ ಎಷ್ಟು ಬೆಡ್‌ಗಳು ಖಾಲಿ ಇವೆ, ಅಲ್ಲಿ ಏನು ಅಗತ್ಯ ಸೌಲಭ್ಯಗಳಿವೆ ಎಂಬ ಮಾಹಿತಿ ದೊರೆಯಲಿದೆ.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ಲಾಲಾಜಿ ಆರ್ ಮೆಂಡನ್, ಜಿಪಂ ಸಿಇಓ ಪ್ರೀತಿ ಗೆಹ್ಲೋಟ್, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಡಿಹೆಚ್‌ಓ ಡಾ.ಸುಧೀರ್‌ಚಂದ್ರ ಸೂಡಾ, ಕೋವಿಡ್-19 ಜಿಲ್ಲಾ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News