ಅಕ್ಟೋಬರ್ ನಲ್ಲಿ ಕೊರೋನ ವೈರಸ್ ಪರಾಕಾಷ್ಠೆ: ಡಿಸಿಎಂ ಡಾ.ಅಶ್ವಥ್ ನಾರಾಯಣ

Update: 2020-07-08 17:48 GMT

ಬೆಂಗಳೂರು, ಜು. 8: ಮಾಕರ ಕೋವಿಡ್-19 ಸೋಂಕು ಅಕ್ಟೋಬರ್ ತಿಂಗಳಿಗೆ ಪರಾಕಾಷ್ಟೆ ಮುಟ್ಟಲಿದೆ ಎಂದು ಐಸಿಎಂಆರ್ ಈಗಾಗಲೇ ಎಚ್ಚರಿಸಿದೆ. ಅದಕ್ಕೆ ತಕ್ಕಹಾಗೆ ಸರಕಾರ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮುಖ್ಯವಾಗಿ ಜನರು ವೈಯಕ್ತಿಕ ಸುರಕ್ಷತೆ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೋಂಕು ಹರಡದಂತೆ ತಡೆಗಟ್ಟಲು ಸರಕಾರ ನಡೆಸುತ್ತಿರುವ ಪ್ರಯತ್ನಕ್ಕೆ ಸಾರ್ವಜನಿಕರು ಕಾಣಿಕೆ ನೀಡಬೇಕು. ಹಾಗೆ ಮಾಡುವ ಮೂಲಕ ಸೋಂಕಿತರ ಸಂಖ್ಯೆ ಜಾಸ್ತಿಯಾಗದಂತೆ ನೋಡಿಕೊಳ್ಳಬಹುದು. ನಮ್ಮೆಲ್ಲರ ನಡುವೆ ವೈರಸ್ ಕೂಡ ಓಡಾಡುತ್ತಿದೆ ಎಂಬುದನ್ನು ಮರೆಯಬಾರದೆಂದು ಹೇಳಿದರು.

ಸದ್ಯಕ್ಕೆ ನಮ್ಮಲ್ಲಿ ಹಾಸಿಗೆಗಳ ಕೊರತೆ ಇಲ್ಲ. ಕೋವಿಡ್ ಕೇರ್ ಸೆಂಟರುಗಳನ್ನು ಸ್ಥಾಪನೆ ಮಾಡಿದ್ದೇವೆ. 30 ಸಾವಿರಕ್ಕೂ ಹೆಚ್ಚು ಹಾಸಿಗೆಗಳ ವ್ಯವಸ್ಥೆ ಮಾಡುವುದಕ್ಕೆ ನಾವು ಸಜ್ಜಾಗಿದ್ದೇವೆ. ವೈದ್ಯರು, ನರ್ಸ್ ಗಳು ಹಾಗೂ ಪೂರಕ ಸಿಬ್ಬಂದಿಯ ಕೊರತೆಯಾಗದಂತೆ ನೋಡಿಕೊಂಡಿದ್ದೇವೆ. ಇನ್ನು ಕೋವಿಡ್ ಕೇರ್ ಕೇಂದ್ರಗಳು ಸಮರ್ಪಕವಾಗಿ ನಡೆಯುತ್ತಿವೆ. ಮತ್ತಷ್ಟು ಕೇಂದ್ರಗಳನ್ನು ಸ್ಥಾಪನೆ ಮಾಡುವವರಿದ್ದೇವೆ. ಬೆಂಗಳೂರು ವಸ್ತು ಪ್ರದರ್ಶನ ಕೇಂದ್ರದಲ್ಲಿ 10 ಸಾವಿರಕ್ಕೂ ಹೆಚ್ಚು ಹಾಸಿಗೆಗಳ ಕೋವಿಡ್ ಕೇಂದ್ರವನ್ನು ತೆರೆದಿದ್ದೇವೆ. ಇದು ಜಗತ್ತಿನಲ್ಲಿ ಅತಿದೊಡ್ಡ ಕೋವಿಡ್ ಚಿಕಿತ್ಸಾ ಕೇಂದ್ರ. ಜತೆಗೆ ಹೋಮ್ ಕೇರ್ ವ್ಯವಸ್ಥೆ ಬಗ್ಗೆಯೂ ಹೆಚ್ಚು ಗಮನ ನೀಡುತ್ತಿದ್ದೇವೆ. ಹೀಗಾಗಿ ಯಾವುದೇ ಆತಂಕ ಬೇಡ ಎಂದು ಅವರು ತಿಳಿಸಿದರು.

ಸೋಂಕು ರಾಜ್ಯಕ್ಕೆ ಕಾಲಿಟ್ಟಾಗ ದಿನಕ್ಕೆ ನೂರಿನ್ನೂರು ಟೆಸ್ಟುಗಳಷ್ಟೇ ಆಗುತ್ತಿತ್ತು. ಈಗ ದಿನಕ್ಕೆ ಏನಿಲ್ಲವೆಂದರೂ 20 ಸಾವಿರಕ್ಕೂ ಹೆಚ್ಚು ಟೆಸ್ಟುಗಳು ನಡೆಯುತ್ತಿವೆ. ದಿನದಿಂದ ದಿನಕ್ಕೆ ನಮ್ಮ ವ್ಯವಸ್ಥೆ ಉತ್ತಮವಾಗುತ್ತಿದೆ. 2 ಇದ್ದ ಲ್ಯಾಬ್‍ಗಳು ಈಗ ನಗರವೊಂದರಲ್ಲೆ 100ರ ಸಂಖ್ಯೆ ದಾಟಿವೆ. ಇದರೊಂದಿಗೆ ಕೋವಿಡ್ ಕೇರ್ ಕೇಂದ್ರಗಳಲ್ಲಿ ಐಸಿಯು ಘಟಕಗಳನ್ನೂ ಮಾಡುತ್ತಿದ್ದೇವೆ ಎಂದವರು ಮಾಹಿತಿ ನೀಡಿದರು.

ಲಾಕ್‍ಡೌನ್ ಕಾಲದಲ್ಲಿಯೇ ಸರಕಾರ ಸರಿಯಾಗಿ ಎಚ್ಚೆತ್ತುಕೊಳ್ಳಲಿಲ್ಲ ಎಂಬ ಪ್ರತಿಪಕ್ಷಗಳು ಆರೋಪದ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಅವರು, ಕೋವಿಡ್ ಬಂದ ಮೇಲೆ ಒಂದು ಕ್ಷಣವೂ ಸರಕಾರ ಮೈಮರೆತಿಲ್ಲ. ಅದಕ್ಕೆ ಸಾಕ್ಷಿಯಾಗಿ ಇಂದು ಮಾಡಲಾಗಿರುವ ಎಲ್ಲ ಕೆಲಸಗಳೆ ಕಾಣುತ್ತಿವೆ. ಸೋಂಕು ಬಂದಾಗ ಅದನ್ನು ಎದುರಿಸುವ ಕನಿಷ್ಠ ಮೂಲಸೌಕರ್ಯಗಳೇ ನಮ್ಮಲ್ಲಿ ಇರಲಿಲ್ಲ. ಈಗ ಸರ್ವಸಿದ್ಧತೆ ಆಗಿದೆ. ಎಂತಹ ಪರಿಸ್ಥಿತಿ ಬಂದರೂ ಎದುರಿಸುತ್ತೇವೆ. ಹೀಗಾಗಿ ಇಂಥ ಅರೋಪದಲ್ಲಿ ಹುರುಳಿಲ್ಲ ಎಂದು ಸ್ಪಷ್ಪಡಿಸಿದರು.

ಊರು ತೊರೆಯಬೇಡಿ: ಕೋವಿಡ್-19 ಬಿಕ್ಕಟ್ಟನ್ನು ರಾಜ್ಯದಲ್ಲಿ ಸಮರ್ಥವಾಗಿ ಎದುರಿಸಲಾಗುತ್ತಿದೆ. ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಎಂತಹುದೇ ಪರಿಸ್ಥಿತಿ ಎದುರಾದರೂ ಎದುರಿಸಲು ನಾವು ಸಂಪೂರ್ಣವಾಗಿ ತಯಾರಿದ್ದೇವೆ ಎಂದ ಅವರು, ನಮ್ಮಲ್ಲಿ ಅನುಭವಿ, ದಕ್ಷ, ದೂರದೃಷ್ಟಿಯುಳ್ಳ ಅಧಿಕಾರಿಗಳಿದ್ದಾರೆ. ಹೀಗಾಗಿ ಕೋವಿಡ್ ಪರಿಸ್ಥಿತಿಯನ್ನು ಅತ್ಯುತ್ತಮವಾಗಿ ನಿರ್ವಹಿಸಲು ಸಾಧ್ಯವಾಗಿದೆ. ಜನರು ಸೋಂಕಿನ ಬಗ್ಗೆ ಆತಂಕಕ್ಕೊಳಗಾಗಬೇಕಾದ ಅಗತ್ಯವಿಲ್ಲ ಎಂದರು.

ನೆರೆ ರಾಜ್ಯಗಳ ಹೈದರಾಬಾದ್, ಚೆನ್ನೈ, ಮುಂಬೈ ಮತ್ತಿತರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಹೀಗಾಗಿ ಯಾರೂ ಅಧೈರ್ಯದಿಂದ ನಗರ ಬಿಟ್ಟು ತಮ್ಮ ಊರುಗಳ ಕಡೆ ಹೋಗುವುದು ಬೇಡ. ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ. ಈ ನಡುವೆ ಒಂದೆರಡು ದಿನ ಇದ್ದಕ್ಕಿದ್ದ ಹಾಗೆ ಸೋಂಕಿತರ ಪ್ರಮಾಣ ಹೆಚ್ಚಾಯಿತು, ಆಗ ಮಾತ್ರ ಕೊಂಚ ಗೊಂದಲವಾಗಿದ್ದು, ಬಿಟ್ಟರೆ ಉಳಿದಂತೆ ಎಲ್ಲವೂ ನಮ್ಮ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದರು.

ಸಮುದಾಯ ಹಂತಕ್ಕೆ ಬಂದಿಲ್ಲ

ಕೋವಿಡ್ ಬೆಂಗಳೂರಿನಲ್ಲಿ ವ್ಯಾಪಕವಾಗಿ ವ್ಯಾಪಿಸುತ್ತಿದೆ. ಆದರೆ ಅದಿನ್ನೂ ಸಮುದಾಯ ಮಟ್ಟಕ್ಕೆ ಬಂದಿಲ್ಲ. ಈಗೇನು 2ನೆ ಹಂತದಲ್ಲಿದ್ದೇವೆ, ಅದೇ ಹಂತದಲ್ಲಿಯೇ ಪರಿಸ್ಥಿತಿ ಮುಂದುವರೆದಿದೆ. ಈ ಹಂತ ದಾಟದ ಹಾಗೆ ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ. ಸರಕಾರದ ಈ ಪ್ರಯತ್ನಕ್ಕೆ ಜನರ ಸಹಕಾರವೂ ಬಹಳ ಮುಖ್ಯವಾಗಿರುತ್ತದೆ

-ಡಾ.ಅಶ್ವಥ್ ನಾರಾಯಣ, ಉಪಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News