ಚಿಕಿತ್ಸೆಗೆ ಸಹಕರಿಸದಿದ್ದರೆ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಯಡಿಯೂರಪ್ಪ ಸೂಚನೆ

Update: 2020-07-13 12:02 GMT

ಬೆಂಗಳೂರು, ಜು. 13: ಬೆಂಗಳೂರು ನಗರದಲ್ಲಿ ಕೋವಿಡ್-19 ಮತ್ತು ನಾನ್ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ಸಹಕರಿಸದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್-19 ನಿಯಂತ್ರಣ, ಕೃಷಿ ಚಟುವಟಿಕೆ, ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯಲು ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಓಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಯಾವುದೇ ಕಾರಣಕ್ಕೆ ಸಾರ್ವಜನಿಕ ಉತ್ಸವಗಳ ಆಚರಣೆಗೆ ಅವಕಾಶ ನೀಡಬೇಡಿ. ಹೊರಗಿನಿಂದ ವಲಸೆ ಬಂದವರ ಕ್ವಾರಂಟೈನ್ ಮತ್ತು ಹೆಚ್ಚಿನ ನಿಗಾ ವಹಿಸಲು ಸೂಚಿಸಬೇಕು. ಅಲ್ಲದೆ, ಕೋವಿಡ್‍ಯೇತರ ರೋಗಿಗಳ ಚಿಕಿತ್ಸೆಗೆ ಯಾವುದೇ ಅಡ್ಡಿಯಾಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ಮಾಡಿದ್ದಾರೆ.

ಕೊರೋನ ವೈರಸ್ ಸೋಂಕು ಪತ್ತೆಗೆ ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಲು ಆದ್ಯತೆ ನೀಡಬೇಕು. 1 ಲಕ್ಷ ಪರೀಕ್ಷಾ ಕಿಟ್ ಖರೀದಿಸಿದ್ದು, ಈಗಾಗಲೇ ಜಿಲ್ಲೆಗಳಿಗೆ ವಿತರಿಸಲಾಗಿದೆ. ತುರ್ತು ಪ್ರಕರಣಗಳಲ್ಲಿ ವಿವೇಚನೆಯಿಂದ ಪರೀಕ್ಷೆ ನಡೆಸಬೇಕು. ಬೆಂಗಳೂರು ನಗರ ಹಾಗೂ ದಕ್ಷಿಣ ಕನ್ನಡ, ಧಾರವಾಡ, ಬಳ್ಳಾರಿ, ಉಡುಪಿ, ಕಲಬುರಗಿಯಲ್ಲಿ ಹೆಚ್ಚು ಪ್ರಕರಣ ದಾಖಲಾಗಿದೆ. ಬೀದರ್, ಧಾರವಾಡ, ಗದಗ, ಮೈಸೂರು ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಮರಣದ ವರದಿ ನೀಡಲು ಸೂಚನೆ: ಬೀದರ್ ಜಿಲ್ಲೆ ಸಾವಿನ ಪ್ರಮಾಣದಲ್ಲಿ ದೇಶದ 5 ಜಿಲ್ಲೆಗಳಲ್ಲಿ ಒಂದಾಗಿದ್ದು, ಮರಣ ಪ್ರಮಾಣ ನಿಯಂತ್ರಿಸಬೇಕು. ಈವರೆಗೆ ಸಂಭವಿಸಿದ ಮರಣಗಳ ಕುರಿತು ತಜ್ಞರ ವಿಶ್ಲೇಷಣಾ ವರದಿಯನ್ನು ಕೂಡಲೇ ಕಳುಹಿಸಬೇಕು ಎಂದು ಸೂಚಿಸಿದ ಅವರು, ಕಂಟೈನ್ಮೆಂಟ್ ಝೋನ್‍ಗಳಲ್ಲಿ ಕಟ್ಟುನಿಟ್ಟಾಗಿ ಕ್ರಮ ವಹಿಸಬೇಕಾಗಿದೆ. ಅಲ್ಲದೆ, ಕ್ಷೇತ್ರ ಮಟ್ಟದ ಆರೋಗ್ಯ ಸಿಬ್ಬಂದಿ ಕೊರತೆ ಇರುವಲ್ಲಿ ಗುತ್ತಿಗೆ ಆಧಾರದಲ್ಲಿ 6 ತಿಂಗಳ ಅವಧಿಗೆ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಬೂತ್ ಮಟ್ಟದಲ್ಲಿ ಕ್ವಾರಂಟೈನ್, ಸಂಪರ್ಕಿತರ ಪತ್ತೆ ಹಚ್ಚುವುದು, ಮನೆ-ಮನೆ ಸಮೀಕ್ಷೆ ನಡೆಸುವ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಲು ಬೂತ್ ಮಟ್ಟದ ಸಮಿತಿಗಳನ್ನು ರಚಿಸಿ, ಜನಪ್ರತಿನಿಧಿಗಳು ಹಾಗೂ ಸ್ವಯಂ ಸೇವಕರ ಸಹಕಾರವನ್ನು ಪಡೆಯುವಂತೆ ಸೂಚಿಸಲಾಯಿತು. 60 ವರ್ಷ ಮೇಲ್ಪಟ್ಟವರು ಹಾಗೂ ಇತರ ತೀವ್ರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿರುವವರನ್ನು ಪ್ರತ್ಯೇಕವಾಗಿರಿಸಬೇಕು. ಐಎಲ್‍ಸಿ ಮತ್ತು ಉಸಿರಾಟದ ತೊಂದರೆ ಇರುವವರನ್ನು ಗುರುತಿಸಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಪಡಿಸಬೇಕು ಎಂದು ಅವರು ಸೂಚನೆ ನೀಡಿದರು. 

ಎಚ್ಚರ ವಹಿಸಿ: ಸೀಲ್‍ಡೌನ್ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಮಾಡಬೇಕು. ಈ ಪ್ರದೇಶಗಳಲ್ಲಿ ಹೆಚ್ಚು ಪರೀಕ್ಷೆ ನಡೆಸಬೇಕು. ಜನರು ಧಾರ್ಮಿಕ ಸ್ಥಳಗಳಲ್ಲಿ, ಮಾರುಕಟ್ಟೆ ಮೊದಲಾದ ಸ್ಥಳಗಳಲ್ಲಿ ಜನ ಗುಂಪುಗೂಡದಂತೆ ಎಚ್ಚರ ವಹಿಸಬೇಕು. ಕೋವಿಡ್ ಆಸ್ಪತ್ರೆಯಲ್ಲಿ ಸ್ವಚ್ಛತೆ ನಿರ್ವಹಣೆಯಲ್ಲಿ ತೊಡಗಿರುವ `ಡಿ' ಗ್ರೂಪ್ ನೌಕರರ ಪ್ರೋತ್ಸಾಹಧನ ಹೆಚ್ಚಳಕ್ಕೆ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.

ಆಂಬ್ಯುಲೆನ್ಸ್ ಮತ್ತು ಚಿಕಿತ್ಸೆಗೆ ಹಾಸಿಗೆಗಳ ಕೊರತೆಯಾಗದಂತೆ ಎಚ್ಚರ ವಹಿಸಬೇಕು. ಡಿಜಿಟಲ್ ಎಕ್ಸ್ ರೇ ಯಂತ್ರಗಳ ಮೂಲಕ ಶ್ವಾಸಕೋಶದ ಸೋಂಕನ್ನು ತ್ವರಿತವಾಗಿ ಪತ್ತೆ ಹಚ್ಚಲು ಸಾಧ್ಯವಿದ್ದು, ಈ ಉಪಕರಣಗಳ ಬಳಕೆಗೆ ಆದ್ಯತೆ ನೀಡುವಂತೆ ಸೂಚಿಸಲಾಯಿತು. ಕೋವಿಡ್ ಮಾರಣಾಂತಿಕ ಕಾಯಿಲೆ ಅಲ್ಲ, ಜನರು ಭಯಭೀತರಾಗುವ ಅಗತ್ಯವಿಲ್ಲ ಎಂದು ಜನರಿಗೆ ತಿಳುವಳಿಕೆ ನೀಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಲಹೆ ಮಾಡಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಹಾಗೂ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News