ಬ್ಯಾಡಗಿ ಮೆಣಸಿನಕಾಯಿ ಗುಣಮಟ್ಟ ಪರೀಕ್ಷೆಗೆ ಲ್ಯಾಬ್: ಸಚಿವ ಎಸ್.ಟಿ.ಸೋಮಶೇಖರ್

Update: 2020-07-15 18:22 GMT

ಹಾವೇರಿ, ಜು. 15: ರಾಜ್ಯವಷ್ಟೇ ಅಲ್ಲದೆ, ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಬ್ಯಾಡಗಿ ಮೆಣಸಿನಕಾಯಿಗೆ ಅದರದ್ದೇ ಆದ ವಿಶೇಷತೆ ಇದೆ. ಇದಕ್ಕೆ ಇನ್ನಷ್ಟು ಮನ್ನಣೆ ಸಿಗುವುದರ ಜೊತೆಗೆ ರೈತರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗುಣಮಟ್ಟ ಪರಿಶೀಲನೆಗೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ಒಂದು ಪ್ರಯೋಗಾಲಯ(ಲ್ಯಾಬೋರೇಟರಿ)ವನ್ನು ಮಂಜೂರು ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಬುಧವಾರ ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬ್ಯಾಡಗಿ ಮೆಣಸಿನಕಾಯಿ ಪರೀಕ್ಷೆಗೆಂದು ಲ್ಯಾಬೋರೇಟರಿಯನ್ನು ಮಾಡುವುದರಿಂದ ಮೆಣಸಿನಕಾಯಿ ಗುಣಮಟ್ಟವನ್ನು ಇಲ್ಲಿಯೇ ಪರೀಕ್ಷಿಸಲು ಅನುಕೂಲವಾಗಲಿದೆ. ಇದು ರೈತರ ಹಿತದೃಷ್ಟಿಯಿಂದ ಸಹಕಾರಿ. ಇನ್ನು ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯ ಮೂಲ ಸೌಲಭ್ಯಕ್ಕೆ ಈಗಾಗಲೇ 10ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ ಎಂದರು.

800 ಸಿಬ್ಬಂದಿ ನೇಮಕ: ರಾಜ್ಯದಲ್ಲಿ ಎಪಿಎಂಸಿ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ನೇಮಕಾತಿ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು. ಇದಕ್ಕಾಗಿ ರಾಜ್ಯಾದ್ಯಂತ ಸುಮಾರು 800 ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗುವುದು ಎಂದು ಸೋಮಶೇಖರ್ ಇದೇ ವೇಳೆ ಮಾಹಿತಿ ನೀಡಿದರು.

ನಮ್ಮ ಬೆಳೆ ನಮ್ಮ ಹಕ್ಕು ಅಧಿಕಾರ: ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೇ ಅನುಕೂಲವಾಗಿದೆ. ಇದು ಕೇಂದ್ರ ಸರಕಾರ ಉತ್ತಮ ಯೋಜನೆ. ರೈತ ತಾನು ಬೆಳೆದ ಬೆಳೆಯನ್ನು ಮುಕ್ತವಾಗಿ ಎಲ್ಲಿ ಬೇಕಾದರೂ ಮಾರಾಟ ಮಾಡುವ ಮುಕ್ತ ಹಕ್ಕನ್ನು ಹೊಂದಿದ್ದು, ಸ್ಪರ್ಧಾತ್ಮಕ ಬೆಲೆಗೆ ಮಾರಾಟ ಮಾಡಬಹುದಾಗಿದೆ. ಈ ಮೂಲಕ ನಮ್ಮ ಬೆಳೆ ನಮ್ಮ ಹಕ್ಕು ಎಂಬುದು ರೈತರ ಮಂತ್ರವಾಗಿದೆ. ಅವರ ಬೆಳೆಗಳಿಗೆ ಅವರೇ ಬೆಲೆಯನ್ನು ನಿರ್ಧರಿಸುವ ಕಾಲ ಈಗ ಬಂದಿದೆ ಎಂದರು.

ಅವರಲ್ಲೇ ಹೊಂದಾಣಿಕೆ ಇಲ್ಲ: `ಸಚಿವ ಸಂಪುಟದಲ್ಲಿ ಹೊಂದಾಣಿಕೆ ಇಲ್ಲ' ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯರ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ. ವಾಸ್ತವದಲ್ಲಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಹೊಂದಾಣಿಕೆ ಇಲ್ಲ. ನಮ್ಮ ಪಕ್ಷದ ಬಗ್ಗೆ ಸುಖಾ ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ನಾವೆಲ್ಲರೂ ಸಿಎಂ ನೇತೃತ್ವದಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದೇವೆ. ಪ್ರಚಾರಕ್ಕಾಗಿ ಜನರ ಗಮನ ಬೇರೆ ಕಡೆ ಸೆಳೆಯಲು ಕೊರೋನ ಸಂಕಷ್ಟದ ಕಾಲದಲ್ಲೂ ರಾಜಕೀಯ ಮಾಡುತ್ತಿದ್ದಾರೆಂದು ದೂರಿದರು.

ಸಿಎಂ ವಿವೇಚನೆಗೆ: ಮೇಲ್ಮನೆ ಸದಸ್ಯರಾದ ಎಂಟಿಬಿ ನಾಗರಾಜ್, ಆರ್.ಶಂಕರ್ ಸೇರಿ ಹೊಸಬರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವ ವಿಚಾರ ಸಿಎಂ ಬಿಎಸ್‍ವೈ ಅವರ ಪರಮಾಧಿಕಾರ. ಈ ನಿಟ್ಟಿನಲ್ಲಿ ಯಾರನ್ನು ಸೇರಿಸಿಕೊಳ್ಳಬೇಕು ಹಾಗೂ ಯಾರನ್ನು ಕೈಬಿಡಬೇಕೆಂಬ ಬಗ್ಗೆ ಅವರೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸೋಮಶೇಖರ್ ಇದೇ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News