ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಯನ್ನು ಹಿಂಪಡೆಯುವುದಿಲ್ಲ: ಡಾ.ಅಶ್ವಥ್ ನಾರಾಯಣ ಸ್ಪಷ್ಟನೆ

Update: 2020-07-16 16:07 GMT

ಬೆಂಗಳೂರು, ಜು. 16: ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ಹೊರಡಿಸಲಾಗಿರುವ ಸುಗ್ರೀವಾಜ್ಞೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಗತಿಗೆ ಪೂರಕವಾದ ಈ ತಿದ್ದುಪಡಿ ಕಾಯ್ದೆಯನ್ನು ಹಿಂದೆ ಸದನದಲ್ಲಿ ಕಾಂಗ್ರೆಸ್ ಸದಸ್ಯರೇ ಬೆಂಬಲಿಸಿದ್ದರು. ಈಗ ನೋಡಿದರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡುತ್ತಿರುವುದು ಅಚ್ಚರಿ ತಂದಿದೆ ಎಂದರು.

ಇಡೀ ದೇಶದಲ್ಲೇ ಒಂದು ಕಾಯ್ದೆ ಇದ್ದರೆ, ನಮ್ಮ ರಾಜ್ಯದಲ್ಲೇ ಒಂದು ಕಾಯ್ದೆ ಇತ್ತು. ಅದರಿಂದ ರೈತರಿಗೆ, ಜನರಿಗೆ ಅನುಕೂಲವಾಗಿದ್ದು ಏನೂ ಇಲ್ಲ. ಈವರೆಗೂ ಇದರ ದುರ್ಬಳಕೆ ಆಗಿ ವಿಪರೀತ ಭ್ರಷ್ಟಾಚಾರಕ್ಕೆ ಕಾರಣವಾಗಿತ್ತು. ಇದರಿಂದಾಗಿಯೇ ರಾಜ್ಯಕ್ಕೆ ಸಾಕಷ್ಟು ಹಾನಿಯಾಗಿದೆ. ಹಾಗೆ ನೋಡಿದರೆ ಈ ತಿದ್ದಪಡಿ ಕಾಯ್ದೆಯೂ ಪ್ರಗತಿಗೆ ಪೂರಕವಾದ ಕ್ರಮವಾಗಿದೆ ಎಂದು ಅವರು ಕಾಯ್ದೆಯನ್ನು ಸಮರ್ಥಿಸಿಕೊಂಡರು.

ವಿಧಾನಸಭೆಯಲ್ಲಿ ಚರ್ಚೆ ನಡೆಯಬೇಕಾದರೆ, ಇದೊಂದು ಅತ್ಯುತ್ತಮ ಕಾಯ್ದೆ. ಇದು ಜಾರಿಗೆ ಬರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ಹೇಳಿದ್ದರು. ಈ ಬಗ್ಗೆ ಬಗ್ಗೆ ಟೀಕೆ ಮಾಡುತ್ತಿರುವವರು ಎದೆ ಮುಟ್ಟಿಕೊಂಡು ಆತ್ಮಾವಲೋಕನ ಮಾಡಿಕೊಳ್ಳಲಿ. ಇದು ಖಂಡಿತಾ ರೈತ ವಿರೋಧಿಯಲ್ಲ. ಕೆಲವರು ತಮ್ಮ ಏನೇನೋ ರಾಜಕೀಯ ಹುನ್ನಾರಗಳ ಕಾರಣಕ್ಕೆ ಭಿನ್ನ ಸ್ವರ ಎತ್ತುತ್ತಿದ್ದಾರೆ. ಜನರನ್ನು ಹಾಳು ಮಾಡುವುದೇ ಕೆಲವರ ನಿತ್ಯ ಕೆಲಸವಾಗಿದೆ ಎಂದು ಹರಿಹಾಯ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News