×
Ad

ಕೋವಿಡ್ ಸೋಂಕಿತರ ಮನೆಯೆದುರು ಎಚ್ಚರಿಕೆ ಫಲಕ ಹಾಕುವುದನ್ನು ತಕ್ಷಣ ಕೈಬಿಡಿ: ಸರಕಾರಕ್ಕೆ ಕುಮಾರಸ್ವಾಮಿ ಆಗ್ರಹ

Update: 2020-07-19 13:44 IST

ಬೆಂಗಳೂರು, ಜು.19: ಕೋವಿಡ್-19 ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ. ಆದ್ದರಿಂದ ಹಾಕುವ ಪರಿಪಾಠವನ್ನು ಸರಕಾರ ಕೂಡಲೇ ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕೋವಿಡ್ ಸೋಂಕಿತರ ಮನೆಯೆದುರು ಹಾಕುವ ಫಲಕಗಳು ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರಕಾರ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಮೆಡಿಕಲ್ ಕಾಲೇಜುಗಳನ್ನು ವಿಶ್ವಾಸಕ್ಕೆ ಪಡೆದು ಮುಂದುವರಿಯಿರಿ
ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಚಿಕಿತ್ಸೆ ನಿರಾಕರಿಸುವುದು ಯಾವುದೇ ಆಸ್ಪತ್ರೆಯ ತಪ್ಪು. ಆದರೆ ಅದೇ ಕಾರಣಕ್ಕೆ ಸರಕಾರ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಬೆದರಿಕೆ ಹಾಕುವುದು ಸರಿಯಲ್ಲ. ಆರೋಗ್ಯದ ಈ ತುರ್ತುಪರಿಸ್ಥಿತಿಯಲ್ಲಿ ಅದರಿಂದ ಲಾಭವೂ ಇಲ್ಲ. ಅಷ್ಟಕ್ಕೂ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಅಧಿಕಾರ ಇರುವುದು ಎಂಸಿಐಗೆ. ಸರ್ಕಾರಕ್ಕಲ್ಲ ನೆನಪಿರಲಿ ಎಂದು ಹೇಳಿದ್ದಾರೆ.

ಸದ್ಯದ ಪರಿಸ್ಥಿಯಲ್ಲಿ ಮೆಡಿಕಲ್ ಕಾಲೇಜುಗಳ ಮೇಲೆ ರೋಷಾವೇಶ ತೋರುವುದನ್ನು ಬಿಟ್ಟು ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡು ಅವರ ಸೇವೆ ಪಡೆಯುವತ್ತ ಸರಕಾರ ಗಮನಹರಿಸಲಿ. ಅವರ ಅಗತ್ಯಗಳನ್ನು ಪೂರೈಸುವತ್ತ ಗಮನಹರಿಸಲಿ. ಈ ಮೂಲಕ ಕೊರೋನ ವೈರಸ್ ವಿರುದ್ಧ ಸಾಂಘಿಕ ಹೋರಾಟ ನಡೆಸಲಿ ಎಂದು ಅವರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News