ಕೊರೋನ, ಉದ್ಯೋಗ ಕಳೆದುಕೊಳ್ಳುವ ಆತಂಕ: ಪತ್ನಿ, ಮಕ್ಕಳಿಗೆ ವಿಷ ನೀಡಿ ಉದ್ಯೋಗಿ ಆತ್ಮಹತ್ಯೆ

Update: 2020-07-25 13:41 GMT

ಧಾರವಾಡ, ಜು.25: ಲಾಕ್‍ಡೌನ್ ಪರಿಣಾಮದಿಂದ ಉದ್ಯೋಗ ಕಳೆದುಕೊಳ್ಳುವ ಹಾಗೂ ಕೊರೋನ ಭೀತಿಯಿಂದಾಗಿ ಉದ್ಯೋಗಿಯೋರ್ವ ಪತ್ನಿ, ಮಗಳಿಗೆ ವಿಷ ನೀಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆಯೊಂದು ನಗರದ ಕವಳಿಕಾಯಿ ಚಾಳದಲ್ಲಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ.

ಮೌನೇಶ್ ಪತ್ತಾರ(36) ಮೃತ ಉದ್ಯೋಗಿಯಾಗಿದ್ದು, ಪತ್ನಿ ಅರ್ಪಿತಾ(28), ಮಗಳು ಸುಕೃತಾ(4) ಕೂಡಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೌನೇಶ್ ಅವರು ಕಂಪೆನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಂಪೆನಿಯಲ್ಲಿ ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಮೌನೇಶ್ ಮೂಲತಃ ಗದಗ ಜಿಲ್ಲೆ ರೋಣ ತಾಲೂಕಿನ ಅಸೂಟಿ ಗ್ರಾಮದವರಾಗಿದ್ದು, ಕೆಲಸದ ನಿಮಿತ್ತ ಧಾರವಾಡದಲ್ಲಿ ನೆಲೆಸಿದ್ದರು ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲ್ಲಿನ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News