ವಿಜಯಪುರ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿಯಿಂದ ಶೀಘ್ರವೇ ಶಂಕುಸ್ಥಾಪನೆ: ಗೋವಿಂದ ಕಾರಜೋಳ
ವಿಜಯಪುರ, ಜು. 26: ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಟೆಂಡರ್ ಪ್ರಕ್ರಿಯೆಯಲ್ಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಶೀಘ್ರವೇ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ತಿಳಿಸಿದ್ದಾರೆ.
ರವಿವಾರ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವಪರಂಪರೆಯ ತಾಣ, ಶೈಕ್ಷಣಿಕ, ತೋಟಗಾರಿಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶೇಷ ಛಾಪನ್ನು ಹೊಂದಿರುವ ಈ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ನಮ್ಮೆಲ್ಲರ ಆಶಯವಾಗಿದೆ ಎಂದರು.
ನಿಲ್ದಾಣ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಕಾಮಗಾರಿಯನ್ನು ತ್ವರಿತವಾಗಿ ಕೈಗೊಳ್ಳಲಾಗುವುದು. ಈಗಾಗಲೇ ಮಣ್ಣು ಪರೀಕ್ಷೆ ಸೇರಿದಂತೆ ಪೂರಕ ಕ್ರಮಕೈಗೊಳ್ಳಲಾಗಿದೆ. ಈ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಈ ವಿಮಾನ ನಿಲ್ದಾಣವನ್ನು ಉಡಾನ್ ಯೋಜನೆಯ ವ್ಯಾಪ್ತಿಗೊಳಡಿಸಲು ಶ್ರಮಿಸಲಾಗುತ್ತಿದೆ. ವಿಮಾನ ನಿಲ್ದಾಣವು ಈ ಪ್ರದೇಶದ ಅಭಿವೃದ್ದಿಗೆ ನಾಂದಿಯಾಗಲಿದೆ ಎಂದು ಅವರು ತಿಳಿಸಿದರು. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.