ಕೋವಿಡ್ ವಿರುದ್ಧದ ಹೋರಾಟದಲ್ಲಿ ಸರಕಾರದೊಂದಿಗೆ ಎಲ್ಲರೂ ಕೈಜೋಡಿಸಬೇಕು: ಸಿಎಂ ಯಡಿಯೂರಪ್ಪ

Update: 2020-07-28 12:02 GMT

ಬೆಂಗಳೂರು, ಜು. 28: ಮಾರಕ ಕೋವಿಡ್-19 ಸೋಂಕಿನ ವಿರುದ್ಧದ ಹೋರಾಟದಲ್ಲಿ ಸರಕಾರದೊಂದಿಗೆ ಖಾಸಗಿ ಕಂಪೆನಿಗಳು ಕೈಜೋಡಿಸಿರುವುದು ನಿಜಕ್ಕೂ ಸ್ವಾಗತಾರ್ಹ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದಿಲ್ಲಿ ತಿಳಿಸಿದ್ದಾರೆ.

ಮಂಗಳವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮೈಕ್ರೋಸಾಫ್ಟ್ ಕಂಪೆನಿಯೊಂದಿಗೆ ನಡೆದ ವರ್ಚುಯಲ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಖಾಸಗಿ ಕಂಪನಿಗಳು ಕೋವಿಡ್-19ರ ವಿರುದ್ಧದ ಹೋರಾಟದಲ್ಲಿ ಸರಕಾರದ ಜತೆ ಸಹಕರಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಕ್ರೋಸಾಫ್ಟ್ ಕಂಪೆನಿಯ ವತಿಯಿಂದ ಇಂದು ಮೂರು ಆರ್.ಟಿ.ಪಿ.ಸಿ.ಆರ್.ಟಿ ಪರೀಕ್ಷಾ ಯಂತ್ರಗಳನ್ನು ಕೊಡುಗೆಯಾಗಿ ನೀಡಿದೆ. ಕೊರೋನ ವೈರಸ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಸಾರ್ವಜನಿಕರು ಸೇರಿದಂತೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಮನವಿ ಮಾಡಿದರು. 

ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ, ಮೈಕ್ರೋಸಾಫ್ಟ್ ಕಂಪೆನಿಯ ಕಾರ್ಪೋರೇಟ್ ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಕುಮಾರ್, ಸಿಬ್ಬಂದಿ ಮುಖ್ಯಸ್ಥ ಸಂದೀಪ್ ಶ್ರೀವಾಸ್ತವ್, ಹಣಕಾಸು ವಿಭಾಗದ ನಿರ್ದೇಶಕ ಅಮರೇಶ್ ರಾಮಸ್ವಾಮಿ, ಅರವಿಂದ ಪ್ರಕಾಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News