ಸೋಂಕಿತರಿಗೆ ಚಿಕಿತ್ಸೆ ಸಹಿತ ತ್ವರಿತ ಮಾಹಿತಿ ನೀಡಲು ಕೇಂದ್ರೀಕೃತ ವ್ಯವಸ್ಥೆ: ಸಚಿವ ಡಾ.ಕೆ.ಸುಧಾಕರ್

Update: 2020-07-28 18:38 GMT

ಬೆಂಗಳೂರು, ಜು. 28: ಕೋವಿಡ್ ಸೋಂಕು ದೃಢಪಟ್ಟ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಬೇಕೆ, ಮನೆ ಆರೈಕೆಗೆ ಒಳಪಡಬೇಕೆ ಅಥವಾ ಕೋವಿಡ್ ಕೇರ್ ಸೆಂಟರ್‍ಗೆ ದಾಖಲಾಗಬೇಕೆ ಎಂದು ಕೂಡಲೇ ನಿರ್ಧರಿಸಲು ಸಾಧ್ಯವಾಗುವಂತಹ ತಂತ್ರಜ್ಞಾನ ಆಧಾರಿತ ಕೇಂದ್ರೀಕೃತ ವ್ಯವಸ್ಥೆ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಮಂಗಳವಾರ ಹಿರಿಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ವೀಡಿಯೋ ಸಂವಾದ ನಡೆಸಿದ ಅವರು, ಕೋವಿಡ್‍ಗೆ ಸಂಬಂಧಿಸಿದಂತೆ ಸರಕಾರ ಬಳಸುತ್ತಿರುವ ಎಲ್ಲ ಆಪ್, ತಂತ್ರಜ್ಞಾನಗಳನ್ನು ಒಟ್ಟು ಮಾಡಿ ಕೇಂದ್ರೀಕೃತ ವ್ಯವಸ್ಥೆ ನಿರ್ಮಿಸುವುದರಿಂದ ಕೋವಿಡ್ ರೋಗಿಯು ಎಲ್ಲಿ ದಾಖಲಾಗಬೇಕು ಅಥವಾ ಯಾವ ರೀತಿಯ ಚಿಕಿತ್ಸೆಗೆ ಒಳಪಡಬೇಕು ಎಂಬುದನ್ನು ತಕ್ಷಣ ತೀರ್ಮಾನಿಸಬಹುದು. ಇದರಿಂದಾಗಿ ಚಿಕಿತ್ಸೆ ಪಡೆಯುವಲ್ಲಿನ ಗೊಂದಲ ನಿವಾರಣೆಯಾಗಲಿದೆ ಎಂದರು.

ಸದ್ಯಕ್ಕೆ ಆಪ್ತಮಿತ್ರ ಸೇರಿದಂತೆ ಹಲವು ಆಪ್‍ಗಳು ಬಳಕೆಯಲ್ಲಿವೆ. ರಾಜ್ಯದಲ್ಲಿ ಕೋವಿಡ್ ಅಂಕಿ-ಅಂಶವನ್ನು ನೀಡುವ ಡ್ಯಾಶ್ ಬೋರ್ಡ್ ಇದೆ. ಆದರೆ, ಡ್ಯಾಶ್ ಬೋರ್ಡ್ ನಲ್ಲಿ ರಿಯಲ್ ಟೈಮ್‍ನಲ್ಲಿ ಮಾಹಿತಿ ದೊರೆಯುವಂತಾಗಬೇಕು. ಯಾವ ಆಸ್ಪತೆಯಲ್ಲಿ ಎಷ್ಟು ಹಾಸಿಗೆ ಖಾಲಿ ಇದೆ, ಪ್ರತಿ ಆಸ್ಪತ್ರೆಯಲ್ಲಿರುವ ಕೋವಿಡ್ ಮತ್ತು ನಾನ್ ಕೋವಿಡ್ ರೋಗಿಗಳೆಷ್ಟು ಎಂಬುದು ಡ್ಯಾಶ್ ಬೋರ್ಡ್‍ ನಲ್ಲಿ ತಿಳಿಯುವಂತಾಗಬೇಕು. ಕೋವಿಡ್ ಖಚಿತಪಟ್ಟ ನಂತರ ವ್ಯಕ್ತಿಯು ದೂರವಾಣಿ ಕರೆ ಮಾಡಿದ ಕೂಡಲೇ ಆಸ್ಪತ್ರೆ ಅಥವಾ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಾಗುವಂತೆ ಸಹಾಯ ದೊರೆಯಬೇಕು. ಇಂತಹ ಕೇಂದ್ರೀಕೃತ ವ್ಯವಸ್ಥೆಯನ್ನು ರಾಜ್ಯದಲ್ಲಿ ತರಬೇಕು ಎಂದು ಸೂಚಿಸಿದರು.

ದಿಲ್ಲಿ ಮತ್ತು ಮಧ್ಯಪ್ರದೇಶದಲ್ಲಿ ಸ್ಟೆಪ್-1 ಎಂಬ ಸಂಸ್ಥೆ ಯಶಸ್ವಿಯಾಗಿ ಸೇವೆ ನೀಡುತ್ತಿದೆ. ಈ ಸಂಸ್ಥೆ ತನ್ನದೇ ಆದ ವೈದ್ಯ, ನರ್ಸ್ ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ಹೊಂದಿದ್ದು, ಕೋವಿಡ್ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಲಭ್ಯವಾಗುವಂತೆ ಮಾಡುತ್ತಿದೆ. ಈ ಸಂಸ್ಥೆಯಿಂದ ಮಾಹಿತಿ ಪಡೆದುಕೊಂಡು ಆ ಮಾದರಿಯನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಬಹುದು ಎಂದು ಸುಧಾಕರ್ ತಿಳಿಸಿದರು.

ಕೊರೋನ ರೋಗಿಯ ರೋಗದ ಗಂಭೀರತೆಯನ್ನು ನಿರ್ಧರಿಸಿ ಆತನನ್ನು ಕೋವಿಡ್ ಆರೈಕೆ ಕೇಂದ್ರ ಅಥವಾ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಲಕ್ಷಣ ರಹಿತ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಬಾರದು ಎಂದು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ವಿವರಿಸಿದರು. ರೋಗದ ಗಂಭೀರತೆಯನ್ನು ಅರಿತು ಅವರನ್ನು ಕೋವಿಡ್ ಆರೈಕೆ ಕೇಂದ್ರ ಅಥವಾ ಆಸ್ಪತ್ರೆಗೆ ದಾಖಲಿಸಲಾಗುವುದು. ರೋಗಿಯನ್ನು ಗೂಗಲ್ ಮ್ಯಾಪ್ ಸಹಾಯದಿಂದಲೇ ಪತ್ತೆ ಮಾಡಿ ಅವರಿರುವಲ್ಲಿಗೆ ವೈದ್ಯರನ್ನು ಕಳುಹಿಸಿ ರೋಗದ ಗಂಭೀರತೆಯನ್ನು ಪರೀಕ್ಷಿಸಲಾಗುವುದು. ನಂತರ ವೈದ್ಯರು ಅವರನ್ನು ಆಸ್ಪತ್ರೆ ಅಥವಾ ಆರೈಕೆ ಕೇಂದ್ರಕ್ಕೆ ದಾಖಲಿಸುವ ಕುರಿತು ನಿರ್ಧರಿಸುತ್ತಾರೆ. ಹೊಸ ಕೇಂದ್ರೀಕೃತ ವ್ಯವಸ್ಥೆಯು ಇದನ್ನು ಒಳಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಬೇರೆ ಜಿಲ್ಲೆಗಳಲ್ಲಿ ಕೊರೋನ ಸೋಂಕಿನ ಪರೀಕ್ಷೆ ಸಂಖ್ಯೆ ಹೆಚ್ಚಿದೆ. ಆದರೆ, ಬೆಂಗಳೂರಿನಲ್ಲಿ ಪರೀಕ್ಷೆ ಸಂಖ್ಯೆ ಕಡಿಮೆಯಾಗುತ್ತಿದೆ. ಪರೀಕ್ಷೆ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಸುಧಾಕರ್ ಸೂಚನೆ ನೀಡಿದರು. ಐಟಿ-ಬಿಟಿ ಇಲಾಖೆ ಕಾರ್ಯದರ್ಶಿ ಅಜಯ್ ಸೇಠ್, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ನಿಯಮಗಳ ಪಾಲನೆಗೆ ಸೂಚನೆ: `ಪ್ರತಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಮೀಸಲಿಡುವ ಸಂಬಂಧ ಇರುವ ನಿಯಮಗಳನ್ನು ಪಾಲಿಸಬೇಕು. ಲಕ್ಷಣ ರಹಿತ ರೋಗಿಗಳನ್ನು (`ಎ' ಸಿಂಪ್ಟಮೆಟಿಕ್) ಆಸ್ಪತ್ರೆಗೆ ಸೇರಿಸದಿರಲು ಕ್ರಮ ವಹಿಸಬೇಕು'

-ಡಾ.ಕೆ.ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News