ಹಳೇ ದೋಸ್ತಿಗಳ ನಡುವೆ ಮತ್ತೆ ಶುರುವಾದ 'ಮೈತ್ರಿ' ತಿಕ್ಕಾಟ: ಕುಮಾರಸ್ವಾಮಿ- ಕಾಂಗ್ರೆಸ್ ನಡುವೆ ಟ್ವೀಟ್ ಸಮರ

Update: 2020-07-29 12:44 GMT
File Photo

ಬೆಂಗಳೂರು, ಜು. 29: `ಕಾಂಗ್ರೆಸ್ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿ ಕುರ್ಚಿ ಮೇಲೆ ಕೂತು ಅಧಿಕಾರ ನಡೆಸುವಾಗ ನಿಮಗೆ ಕಾಂಗ್ರೆಸ್ ಪಕ್ಷದ ನೈತಿಕತೆ ಚೆನ್ನಾಗಿತ್ತು. ಅಧಿಕಾರ ಇಲ್ಲದಿದ್ದಾಗ ನೈತಿಕತೆ ಪ್ರಶ್ನೆ ಬರುತ್ತದೆಯೇ? ರಾಜ್ಯ ಸಂಕಷ್ಟದಲ್ಲಿರುವಾಗ ಅದೃಶ್ಯರು ಅಪ್ರಸ್ತುತರು ಆಗಿರುವ ನಿಮ್ಮ ಪಕ್ಷದ ನೈತಿಕತೆ ಏನು?' ಎಂದು ರಾಜ್ಯ ಕಾಂಗ್ರೆಸ್ ಟ್ವೀಟರ್ ನಲ್ಲಿ ಪ್ರಶ್ನಿಸಿದೆ. 

'ಶಾಸಕರ ಖರೀದಿ ಮತ್ತು ಸರಕಾರ ಉರುಳಿಸುವುದರಲ್ಲಿ ಕಾಂಗ್ರೆಸ್ ನಿಪುಣತೆ ಹೊಂದಿದೆ. ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ನೈತಿಕತೆ ಆ ಪಕ್ಷದ ಮುಖಂಡರಿಗೆ ಇಲ್ಲ' ಎಂದು ಕುಮಾರಸ್ವಾಮಿ ಟೀಕಿಸಿದ್ದರು. ಹೀಗಾಗಿ ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

"ಕುಮಾರಸ್ವಾಮಿ ಅವರೇ ಆಡಳಿತ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು ಸ್ವಯಂ ಸೇರುವುದಕ್ಕೂ ಸಂವಿಧಾನ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಆಪರೇಷನ್ ಕಮಲದ ಮೂಲಕ ಚುನಾಯಿತ ಸರಕಾರವನ್ನು ಕೆಡವುದಕ್ಕೂ ಇರುವ ವ್ಯತ್ಯಾಸ ಗೊತ್ತಿಲ್ಲದಷ್ಟು ಅತಿಮುಗ್ಧರಾಗಿ ಬಿಟ್ಟಿರಾ?" ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ನೇರವಾಗಿ ಪ್ರಶ್ನಿಸಲಾಗದೆ ಕಾಂಗ್ರೆಸ್‍ನ ಅತಿರಥರ ಪಲಾಯನ: ಎಚ್.ಡಿ.ಕುಮಾರಸ್ವಾಮಿ

‘ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸಿಎಂ ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ನನ್ನನ್ನು ನೇರವಾಗಿ ಪ್ರಶ್ನಿಸಲಾಗದ ಕಾಂಗ್ರೆಸ್‍ನ ಅತಿರಥ ಮಹಾರಥರು ಪಕ್ಷದ ಟ್ವಿಟರ್ ಖಾತೆ ಮೂಲಕ ದಾಳಿ ಮಾಡಿ ಓಡಿ ಹೋಗಿದ್ದಾರೆ. ಆಯ್ತು, ಚರ್ಚೆ ಆರಂಭವಾಗಿದೆ. ಅದನ್ನು ನಾನು ಪೂರ್ತಿಗೊಳಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್‍ಗಳನ್ನು ಮಾಡಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯದ ನಾಯಕರು ಜೆಡಿಎಸ್ ಎದುರು ನಡು ಬಗ್ಗಿಸಿ ನಾವು ಬೇಡವೆಂದರೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಿದಿರಿ. ಆನಂತರ ಒತ್ತಡಗಳನ್ನು ಹೇರಿ ಬ್ಯಾಕ್ ಸೀಟ್ ಡ್ರೈವಿಂಗ್ ಮಾಡಿದಾಗ ಕಾಂಗ್ರೆಸ್‍ನ ನೈತಿಕತೆ ಎಲ್ಲಿತ್ತು? ಎಂದು ಅವರು ಪ್ರಶ್ನಿಸಿದ್ದಾರೆ.

ರೈತರ ಸಾಲ ಮನ್ನಾ ಮಾಡಿ ರಾಜಧರ್ಮ ಪಾಲಿಸಬೇಕಿತ್ತು. ನಿಮ್ಮೆಲ್ಲಾ ಆಟಗಳು ಗೊತ್ತಿದ್ದು ಕೂಡ ರಾಜ್ಯದ ಜನತೆಯ ಹಿತಕ್ಕಾಗಿ ನಾನು ಕೂಡ ಚಾಣಕ್ಯ ನೀತಿಯನ್ನು ಪ್ರದರ್ಶಿಸಿ ರೈತರ ಹಿತ ರಕ್ಷಿಸಿದೆ. ಇದರಲ್ಲಿ ನನ್ನ ವೈಯಕ್ತಿಕ ಲಾಭವೇನಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಬೇಡವೆಂದರೂ ನಮ್ಮ ಮನೆ ಬಾಗಿಲಿಗೆ ಬಂದವರು ನೀವು. ನಾನು ಅಮಾಯಕನಾಗಿರಲಿಲ್ಲ. ಕಾಂಗ್ರೆಸ್‍ನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ. ಆದರೆ ನಾಡಿನ ರೈತರ ಹಿತ ಕಾಯಲು ನಾನು ಜಾಣತನ ಪ್ರದರ್ಶಿಸಿದೆ ಎಂಬುದು ನೆನಪಿರಲಿ ಎಂದು ಅವರು ಹೇಳಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಕಾಂಗ್ರೆಸ್‍ನ ರಾಷ್ಟ್ರ, ರಾಜ್ಯ ನಾಯಕರು ಇದ್ದ ಸಭೆಯಲ್ಲಿ ದೇವೇಗೌಡರು ಕಾಂಗ್ರೆಸ್‍ಗೆ ಸಲಹೆ ನೀಡಿ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿ ಎಂದರು. ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದರು ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಆ ನಾಯಕರು ಯಾರು ಯಾರು ಎಂದು ಕಾಂಗ್ರೆಸ್ ಹುಡುಕಿಕೊಳ್ಳಲಿ. ಆಗ ಅವರ ನೈತಿಕತೆ ಪ್ರಶ್ನೆಗೆ ಅವರದೇ ನಾಯಕರಿಂದ ಉತ್ತರ ಸಿಗಬಹುದು. ಕುಮಾರಸ್ವಾಮಿ ಅಜ್ಞಾತ, ಅಪ್ರಸ್ತುತರಾಗಿದ್ದಾರೆ ಎಂದೂ ಕಾಂಗ್ರೆಸ್‍ನ ನಾಯಕರು ಪಕ್ಷದ ಟ್ವಿಟರ್ ಮೂಲಕ ದಾಳಿ ಮಾಡಿದ್ದಾರೆ. ದೇಶದ ಎಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಸ್ತುತವಾಗಿದೆ?  ಪ್ರತ್ಯಕ್ಷವಾಗಿ ರಾಜಕಾರಣ ಮಾಡುತ್ತಿದೆ? ಅನಾಥವಾಗಿದೆ? ಇದಕ್ಕೆ ಉತ್ತರಿಸಲು ನಾಯಕರು ಯಾರಾದರೂ ಇದ್ದಾರೋ? ಇಲ್ಲ ಕಾಂಗ್ರೆಸ್‍ನ ಟ್ವಿಟರ್ ಖಾತೆಗೆ ಸೀಮಿತವೋ? ಎಂದು ಅವರು ವ್ಯಂಗ್ಯವಾಡಿದ್ದಾರೆ.

ಬೇರೆ ಪಕ್ಷದ ಶಾಸಕರಿಗೆ ಸ್ವಯಂ ಸೇರ್ಪಡೆಯ 'ಮಾರುವೇಶ' ಹಾಕಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಕ್ಕೂ ಬಿಜೆಪಿ ಅವರು ಆಪರೇಷನ್ ಅಸ್ತ್ರ ಬಳಸಿ ಸರಕಾರವೊಂದನ್ನು ಬುಡಮೇಲು ಮಾಡುವುದಕ್ಕೂ ಅಂತಹ ವ್ಯತ್ಯಾಸವೇನಿಲ್ಲ. ಒಂದು ತೆಳುಗೆರೆಯಷ್ಟೇ ಅಂತರ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕಾಂಗ್ರೆಸ್ ಇದರ ಅರ್ಥ ತಿಳಿಯದಷ್ಟು ಕುಬ್ಜ ಸ್ಥಿತಿ ತಲುಪಿರುವುದು ಚೋದ್ಯವೆನಿಸಿದೆ. ಟೀಕೆಗಾಗಿ ಟೀಕೆ ಮಾಡುವ ಇಂತಹ ಮನಸ್ಥಿತಿಯಿಂದಾಗಿಯೇ ಕಾಂಗ್ರೆಸ್ ಇಂದು ಇಂತಹ ದುಃಸ್ಥಿತಿಗೆ ತಲುಪಿದೆ. ಕಪಟ ರಾಜಕಾರಣವನ್ನು ಯಾವ ಬಾಗಿಲಿನಿಂದ ಮಾಡಿದರೂ ಅದು ಅನೀತಿಯೇ ಆಗಿದೆ ಎಂದು ಅವರು ಹೇಳಿದ್ದಾರೆ.

"ತನ್ನರಿದೆ ಅರಿವೆಂತುಂಟೊ? ತನ್ನ ಮರೆದ ಮರೆಹೆಂತಂಟೊ? ಅರೆದು ಮರೆದವರು, ನಿಮ್ಮ ಪ್ರತಿಬಿಂಬದಂತಿಪ್ಪರು ಕಾಣಾ, ಗುಹೇಶ್ವರಾ" ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News