ಮಂಗಳೂರು: ಸಿಇಟಿ ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ

Update: 2020-07-29 13:28 GMT

ಮಂಗಳೂರು, ಜು.29: ಮಂಗಳೂರು ಕಮಿಷನರೇಟ್ ಘಟಕದ ವ್ಯಾಪ್ತಿಯ ಪರೀಕ್ಷಾ ಕೇಂದ್ರ ಸಿಇಟಿ 2020ರ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಇದೇ ಜು.30 ಮತ್ತು 31ರಂದು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಹೊರಡಿಸಿ ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್‌ಕುಮಾರ್ ಆದೇಶಿಸಿದ್ದಾರೆ.

ಅಲ್ಲದೆ, ಆ.1ರಂದು ಹೊರನಾಡು ಮತ್ತು ಗಡಿನಾಡು ಆಭ್ಯರ್ಥಿಗಳಿಗೆ ಸಿಇಟಿ 2020ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿವೆ. ಈ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಜು.30ರಿಂದ ಆ.1ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ 144 ರಂತೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ನಿಷೇಧಾಜ್ಞೆ ಜಾರಿಯಾದ ಅವಧಿಯಲ್ಲಿ ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಆಭ್ಯರ್ಥಿಗಳ ಹೊರತುಪಡಿಸಿ ಸಾರ್ವಜನಿಕರು ಐವರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಮತ್ತು ತಿರುಗಾಡುವುದನ್ನು ನಿಷೇಧಿಸಲಾಗಿದೆ.

ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಮೊಬೈಲ್, ದೂರವಾಣಿ ಹಾಗೂ ಪೇಜರ್ ಇತ್ಯಾದಿ ಇಲೆಕ್ಟ್ರಾನಿಕ್ ಸಂಪರ್ಕ ಉಪಕರಣಗಳ ಬಳಕೆಯನ್ನು ಪೊಲೀಸ್ ಆಯುಕ್ತರು ಸಂಪೂರ್ಣವಾಗಿ ನಿಷೇಧಿಸಿ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News