ಕ್ವಾರಂಟೈನ್ ಪ್ರದೇಶದಲ್ಲಿ ಜೀವ ಬೆದರಿಕೆ: ಅಧಿಕಾರಿಗಳ ಮುಂದೆ ಕಣ್ಣೀರಿಟ್ಟ ಕೊರೋನ ಯೋಧರು
ಗುಂಡ್ಲುಪೇಟೆ, ಜು.29: ಆರೋಗ್ಯ ಇಲಾಖೆಯ ಅಧಿಕಾರಿಗಳ ಮುಂದೆ ಕೊರೋನ ಯೋಧರು ಕಣ್ಣೀರಿಟ್ಟ ಘಟನೆ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.
ಗುಂಡ್ಲುಪೇಟೆಯ ತಾಲೂಕು ಕಚೇರಿ ಸಭಾಂಗಣದಲ್ಲಿ ಕೊರೋನ ವಾರಿಯರ್ಸ್ ಗೆ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿತ್ತು.
ಈ ವೇಳೆ ಆತಂಕ ವ್ಯಕ್ತಪಡಿಸಿದ ಕೊರೋನ ವಾರಿಯರ್ಸ್, ಕ್ವಾರಂಟೈನ್ ಪ್ರದೇಶದಲ್ಲಿ ಜೀವ ಬೆದರಿಕೆ ಇದೆ. ಕ್ವಾರಂಟೈನ್ ಏರಿಯಾದಲ್ಲಿ ಅರಿವು ಮೂಡಿಸಲು ತೆರಳುವಾಗ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು. ಜೀವ ಬೆದರಿಕೆ ಇರುವ ಕಂಟೈನ್ಮೆಂಟ್ ಪ್ರದೇಶಗಳಿಗೆ ತೆರಳಲು ಜೀವ ಭಯವಾಗುತ್ತಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಸಭೆಯಲ್ಲಿ ಆತಂಕ ವ್ಯಕ್ತ ಪಡಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಂ.ನಂಜುಂಡಯ್ಯ, ಆರೋಗ್ಯ ಇಲಾಖೆಯ ಅಧಿಕಾರಿಗಳು, ಮಾನಸಿಕ ತಜ್ಞರು, ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.