ಕೋವಿಡ್-19 ನಿರ್ವಹಣೆಯಲ್ಲಿ ಲೋಪವಾಗದಿರಲಿ: ಮಹೇಶ್ವರ ರಾವ್

Update: 2020-07-30 13:56 GMT

ಉಡುಪಿ, ಜು.30: ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿದ್ದು, ಸೋಂಕಿತರ ಚಿಕಿತ್ಸೆಯಲ್ಲಿ ಯಾವುದೇ ಲೋಪ ಹಾಗೂ ಸೌಲಭ್ಯಗಳ ಕೊರತೆಯಾಗದಂತೆ ಯೋಜನೆಯನ್ನು ರೂಪಿಸಿ, ಕಾರ್ಯ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಿದ್ದಾರೆ.

ಗುರುವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕೋವಿಡ್-19ರ ಇತ್ತೀಚಿನ ವಸ್ತು ಸ್ಥಿತಿ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸೋಂಕಿತರರಿಗೆ ಆಸ್ಪತ್ರೆಯಲ್ಲಿ ಬೆಡ್‌ಗಳ ಕೊರತೆಯಾದಂತೆ, ಹೆಚ್ಚಿನ ಸಂಖ್ಯೆಯಲ್ಲಿ ಬೆಡ್‌ಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಪ್ರಕರಣಗಳ ಸಮರ್ಪಕ ನಿರ್ವಹಣೆಗಾಗಿ ಯೋಜನೆ ರೂಪಿಸಿ ಅದರಂತೆ ಕಾರ್ಯನಿರ್ವಹಿಸಿ. ಯಾವುದೇ ಕಾರಣಕ್ಕೂ ಸೋಂಕಿತರ ಚಿಕಿತ್ಸೆ ಮತ್ತು ಬೆಡ್‌ಗಳ ಕೊರತೆ ಕುರಿತಂತೆ ಸಾರ್ವಜನಿಕರಿಂದ ದೂರು ಬಾರದಂತೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಸಿದ್ದವಾಗಿಟ್ಟುಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು.

ಜಿಲ್ಲೆಯಲ್ಲಿ ಐಎಲ್‌ಐ ಮತ್ತು ಸಾರಿ ಪ್ರಕರಣಗಳಲ್ಲಿ ಹೆಚ್ಚಿನ ಸೋಂಕು ಕಂಡು ಬರುತ್ತಿರುವುದರ ಕುರಿತು ಪರಿಶೀಲಿಸಿ. ಮೆಡಿಕಲ್ ಶಾಪ್‌ಗಳಲ್ಲಿ ಔಷಧ ಪಡೆದವರ ವಿವರಗಳನ್ನು ದಾಖಲಿಸಿ. ಅವರ ಆರೋಗ್ಯದ ಮಾಹಿತಿಯನ್ನು ಪಡೆಯಿರಿ. ಇತರೆ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳುವಾಗ ಕೋವಿಡ್ ಪರೀಕ್ಷೆಗೆ ಒತ್ತಾಯಪಡಿಸದಂತೆ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿ ಎಂದು ಎಂ. ಮಹೇಶ್ವರರಾವ್ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರನ್ನು ಆಸ್ಪತೆಗೆ ದಾಖಲಿಸಲು ಬೆಡ್ ಮೆನೇಜ್‌ಮೆಂಟ್ ವ್ಯವಸ್ಥೆ ಮತ್ತು ಜಿಪಿಎಸ್ ಅಳವಡಿಸಿದ ಆಂಬುಲೆನ್ಸ್ ಟ್ರಾಕಿಂಗ್ ವ್ಯವಸ್ಥೆ ಇದ್ದು, ಪ್ರಾಕೃತಿಕ ವಿಕೋಪ ನಿಧಿಯಲ್ಲಿ ಹಣದ ಕೊರತೆ ಇಲ್ಲ, ಹೆಚ್ಚು ಪ್ರಕರಣಗಳು ಕಂಡುಬಂದಲ್ಲಿ ರೋಗಿಗಳ ಚಿಕಿತ್ಸೆಗೆ ಬೇಕಾದ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಖರೀದಿ ಮತ್ತು ಇತರೆ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಕುರಿತು ಪರಿಶೀಲಿಸಿದ ಕಾರ್ಯದರ್ಶಿಗಳು ಕೃಷಿಗೆ ಭಿತ್ತನೆ ಬೀಜ ಹಾಗೂ ರಸಗೊಬ್ಬರ, ಕೀಟನಾಶಕದ ಯಾವುದೇ ಕೊರತೆಯಾಗದಂತೆ ಮುಂಜಾಗ್ರತೆ ವಹಿಸುವಂತೆ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಅಕ್ರಮ ಮರಳುಗಾರಿಕೆ ಕುರಿತಂತೆ ದೂರುಗಳು ಬರುತ್ತಿದ್ದು, ಜಿಪಿಎಸ್ ಉಲ್ಲಂಘನೆ, ಟ್ರಿಪ್ ಉಲ್ಲಂಘನೆ, ಧಕ್ಕೆ ನಿಯಮಗಳ ಉಲ್ಲಂಘನೆ ಕುರಿತಂತೆ ಪ್ರಕರಣ ದಾಖಲಿಸಿ ಹಾಗೂ ಚೆಕ್‌ಪೋಸ್ಟ್ ಗಳಲ್ಲಿ ಮರಳು ಸಾಗಾಟ ಮಾಡುವ ವಾಹನಗಳಿಗೆ ಜಿಪಿಎಸ್ ಅಳವಡಿಸಿರುವ ಕುರಿತಂತೆ ಪರಿಶೀಲನೆ ನಡೆಸುವಂತೆ ಮತ್ತು ರಾತ್ರಿ ವೇಳೆ ಹೆಚ್ಚು ನಿಗಾವಹಿಸುವಂತೆ ಪೊಲೀಸ್ ಇಲಾಖೆಗೆ ಕಾರ್ಯದರ್ಶಿ ಸೂಚಿಸಿದರು.

ಜಿಲ್ಲೆಯಲ್ಲಿನ ಕೋವಿಡ್-19ರ ಪ್ರಸಕ್ತ ಸ್ಥಿತಿಗತಿ ಕುರಿತು ಕೋವಿಡ್-19 ಜಿಲ್ಲಾ ನೋಡೆಲ್ ಅಧಿಕಾರಿ ಪ್ರಶಾಂತ್ ಭಟ್ ಮಾಹಿತಿಗಳನ್ನು ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋತ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News