ಉಡುಪಿ ಜಿಲ್ಲೆಯಲ್ಲಿ 136 ಮಂದಿಯಲ್ಲಿ ಕೊರೋನ ಸೋಂಕು ದೃಢ

Update: 2020-08-01 14:19 GMT

ಉಡುಪಿ, ಆ.1: ಉಡುಪಿ ಜಿಲ್ಲೆಯಲ್ಲಿ ಶನಿವಾರ 136 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ದಿನದಲ್ಲಿ 716 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಕೊರೋನ ಸೋಂಕು ಪತ್ತೆಯಾದ 136 ಮಂದಿಯಲ್ಲಿ ಉಡುಪಿ ತಾಲೂಕಿನ 65 ಮಂದಿ, ಕುಂದಾಪುರ ತಾಲೂಕಿನ 37 ಹಾಗೂ ಕಾರ್ಕಳ ತಾಲೂಕಿನ 33 ಮಂದಿ ಸೇರಿದ್ದಾರೆ. 65 ಮಂದಿ ಪುರುಷರು, 62 ಮಂದಿ ಮಹಿಳೆಯರು ಹಾಗೂ 10 ವರ್ಷದೊಳಗಿನ ಪ್ರಾಯದ 5 ಬಾಲಕರು ಹಾಗೂ 4 ಮಂದಿ ಬಾಲಕಿಯರು ಸೇರಿ 9 ಮಂದಿ ಮಕ್ಕಳು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇಂದಿನ 136 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ 4492ಕ್ಕೇರಿದೆ ಎಂದರು.

100 ಮಂದಿ ಗುಣಮುಖ

ಜಿಲ್ಲೆಯಲ್ಲಿ ಶನಿವಾರ ಒಟ್ಟು 100 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡು ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆ ಗೊಂಡಿದ್ದಾರೆ. ಇವರಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಯ 67, ಕಾರ್ಕಳ ಆಸ್ಪತ್ರೆಯ 10, ಉಡುಪಿ ಟಿಎಂಎ ಪೈ ಆಸ್ಪತ್ರೆಯ 16 ಹಾಗೂ ಎಂಐಟಿ ಕೇಂದ್ರದ 7 ಮಂದಿ ಸೇರಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿ ನಿಂದ ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 2646ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 1811 ಮಂದಿ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಬಂದರೂ, ರೋಗದ ಗುಣಲಕ್ಷಣಗಳಿಲ್ಲದ 753 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 90 ಮಂದಿ ಹೋಮ್ ಐಸೋಲೇಷನ್ ಚಿಕಿತ್ಸೆಯಲ್ಲಿ ಗುಣಮುಖರಾಗಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

736 ಸ್ಯಾಂಪಲ್ ಸಂಗ್ರಹ

ಸೋಂಕಿನ ಪರೀಕ್ಷೆಗಾಗಿ ಶನಿವಾರ 736 ಮಂದಿಯ ಗಂಟಲು ದ್ರವದ ಸ್ಯಾಂಪಲ್‌ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 437 ಮಂದಿ, ಕೋವಿಡ್ ಸಂಪರ್ಕಿತರು 202 ಮಂದಿ ಇದ್ದರೆ, ಉಸಿರಾಟ ತೊಂದರೆಯ ನಾಲ್ವರು, ಶೀತಜ್ವರದಿಂದ ಬಳಲುವ 71 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಆಗಮಿಸಿದ 22 ಮಂದಿಯ ಸ್ಯಾಂಪಲ್‌ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.

ಇಂದು ಪಡೆದ 736 ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 32,401ಕ್ಕೇರಿದೆ. ಇವುಗಳಲ್ಲಿ ಈವರೆಗೆ 27,463 ನೆಗೆಟಿವ್, 4492 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 38 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 446 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.

ಜಿಲ್ಲೆಯಲ್ಲಿ ಶನಿವಾರ 30 ಮಂದಿಯನ್ನು ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಇವರಲ್ಲಿ 5 ಮಂದಿ ಕೋವಿಡ್ ಶಂಕಿತರು, 10 ಮಂದಿ ಉಸಿರಾಟ ತೊಂದರೆಯವರು ಹಾಗೂ 15 ಮಂದಿ ಶೀತಜ್ವರದಿಂದ ಬಳಲುವವರು ಎಂದರು.

ಜಿಲ್ಲೆಯ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್‌ಗಳಿಂದ ಇಂದು 35 ಮಂದಿ ಬಿಡುಗಡೆಗೊಂಡಿದ್ದು, 306 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಇಂದು ಕೊರೋನ ಸೋಂಕಿನ ಗುಣಲಕ್ಷಣದ 43 ಮಂದಿ ಸೇರಿದಂತೆ ಒಟ್ಟು 8080 ಮಂದಿಯನ್ನು ಕೊರೋನ ತಪಾಸಣೆಗಾಗಿ ನೊಂದಾಯಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗ 1316 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

ದಿನದಲ್ಲಿ ಒಂದು ಸಾವು

ಕೋವಿಡ್‌ನಿಂದ ಶನಿವಾರ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟ ಬಗ್ಗೆ ವರದಿ ಇದೆ. ಮಣಿಪಾಲ ಕೆಎಂಸಿಯಲ್ಲಿ ಅನ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತಿದ್ದ ಪರ್ಕಳದ 72 ವರ್ಷ ಪ್ರಾಯದ ಹಿರಿಯ ನಾಗರಿಕರೊಬ್ಬರು ಇಂದು ಕೋವಿಡ್ ಸೋಂಕಿನೊಂದಿಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News