ವಿಪಕ್ಷಗಳಿಗೆ ಸಮರ್ಥ ಉತ್ತರ ನೀಡಲು ಬಿಜೆಪಿಯ ನೂತನ ತಂಡ: ಸಚಿವ ಸೋಮಶೇಖರ್

Update: 2020-08-01 17:09 GMT

ಬೆಂಗಳೂರು, ಆ. 1: ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿರುವ ವಿಪಕ್ಷಗಳಿಗೆ ಬಿಜೆಪಿಯ ನೂತನ ಪದಾಧಿಕಾರಿಗಳು ಪಕ್ಷದ ವೇದಿಕೆಯಲ್ಲಿ ತಕ್ಕ ಮತ್ತು ಸಮರ್ಥ ರೀತಿಯಲ್ಲಿ ಉತ್ತರವನ್ನು ಕೊಡುವ ನಿಟ್ಟಿನಲ್ಲಿ ಅರ್ಹರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

`ವ್ಯಕ್ತಿ ಪೂಜೆಗಿಂತ ಪಕ್ಷದ ಪೂಜೆ ಮುಖ್ಯ ಎಂಬ ನಿಟ್ಟಿನಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಸರಕಾರ ರಚನೆಯಾಗಲು, ಪಕ್ಷದ ತಂಡದೊಂದಿಗೆ ನಾವೆಲ್ಲ ಸಚಿವರು ಕಾರ್ಯನಿರ್ವಹಿಸುತ್ತೇವೆಂದು ಹೇಳಲಿಚ್ಚಿಸುತ್ತೇನೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪಕ್ಷ ಸಂಘಟನೆ ದೃಷ್ಟಿಯಿಂದ ಹಾಗೂ ಮೋದಿ ನೇತೃತ್ವದ ಕೇಂದ್ರ ಹಾಗೂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಕೈಗೊಂಡ ಜನಪರ ಯೋಜನೆಗಳನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಪಕ್ಷ ಉತ್ತಮ ಸಂಘಟನಾ ತಂಡವನ್ನು ರಚನೆ ಮಾಡಿದೆ ಎಂದು ಸೋಮಶೇಖರ್ ಹೇಳಿದ್ದಾರೆ.

ಪಕ್ಷದ ಸಂಘಟನೆಗೆ ಸದೃಢ ಮತ್ತು ಕ್ರಿಯಾಶೀಲ ಪದಾಧಿಕಾರಿಗಳಾಗಿ ಆಯ್ಕೆಯಾಗಿರುವ ಎಲ್ಲರನ್ನು ಅಭಿನಂದಿಸುತ್ತೇನೆ. ಬಿಎಸ್‍ವೈ ನೇತೃತ್ವದಲ್ಲಿ ಸರಕಾರ ಪ್ರವಾಹ, ಕೋವಿಡ್-19 ನಿರ್ವಹಣೆಯಲ್ಲಿ ಅತ್ಯಂತ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ, ಕೊರೋನ ಹಿನ್ನೆಲೆಯಲ್ಲಿ ರಾಜ್ಯ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದರೂ ಸಮರ್ಥವಾಗಿ ನಿಭಾಯಿಸುವ ಮೂಲಕ ಆರ್ಥಿಕ ಚಟುವಟಿಕೆ ನಿಲ್ಲದಂತೆ ನೋಡಿಕೊಂಡು ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿದ್ದಾರೆಂದು ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News