ಆ.5ರಂದು ರಾಮ ಮಂದಿರದ ಭೂಮಿ ಪೂಜೆ: ರಾಜ್ಯದೆಲ್ಲೆಡೆ ಪೊಲೀಸ್ ಕಟ್ಟೆಚ್ಚರ

Update: 2020-08-04 12:57 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.4: ಇಂದು(ಆ.5) ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಸಂಬಂಧ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಮಂಗಳವಾರ ಹಿರಿಯ ಪೊಲೀಸ್ ಅಧಿಕಾರಿಯೊಂದಿಗೆ ವಿಡಿಯೋ ಸಂವಾದ ನಡೆಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಭದ್ರತೆ ಕುರಿತು ಮಾಹಿತಿ ಪಡೆದು, ತೀವ್ರ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ವಲಯವಾರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗೃಹ ಸಚಿವರ ಸೂಚನೆಗಳು

* ಕೋಮು ಸೂಕ್ಷ್ಮ ಜಿಲ್ಲೆಗಳಲ್ಲಿ ತೀವ್ರ ನಿಗಾ ಇಡಬೇಕು

* ಹಿಂದುತ್ವ ಪರ, ವಿರೋಧ ಸಂಘಟನೆಗಳ ಮೇಲೆ ನಿಗಾ

* ಭೂಮಿ ಪೂಜೆ ವೇಳೆ ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಸಂಭವವಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು

* ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕು

* ಭೂಮಿ ಪೂಜೆ ದಿನ ಮತೀಯ ಸಂಘಟನೆಗಳು, ಸಿಎಎ ಹಾಗೂ ಎನ್‍ಆರ್‍ಸಿ ಹೋರಾಟಗಾರರ ಮೇಲೆ ಕಣ್ಣಿಡಬೇಕು

* ಯಾವುದೇ ಮೆರವಣಿಗೆ, ವಿಜಯೋತ್ಸವ, ಪ್ರತಿಭಟನೆಗೆ ಅನುಮತಿ ನೀಡಬಾರದು

* ಯಾವುದೇ ದೇವಸ್ಥಾನ, ಮಸೀದಿಗಳಲ್ಲಿ ಬಾವುಟ ಕಟ್ಟುವಂತಿಲ್ಲ

* ಜನನಿಬಿಡ ಪ್ರದೇಶಗಳು, ದೇವಸ್ಥಾನ, ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸುವುದು

* ಕಮೀಷನರೇಟ್ ಹಾಗು ಜಿಲ್ಲೆಗಳಲ್ಲಿ 144 ಸೆಕ್ಷನ್ ಹಾಕಿ ಭದ್ರತೆ ಕೈಗೊಳ್ಳುವ ಬಗ್ಗೆ ಚಿಂತನೆ ಮಾಡಬೇಕು ಸೇರಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರಕ್ಕೆ ಗೃಹ ಸಚಿವರು ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News