ಕೊರೋನ ಸೋಂಕಿನಿಂದ ಸಾವು: ಆಡಿಟ್‍ಗೆ ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಸೂಚನೆ

Update: 2020-08-04 13:22 GMT

ಬೆಂಗಳೂರು, ಆ. 4: ಕೋವಿಡ್-19 ಕಾರಣದಿಂದ ನಗರ ವ್ಯಾಪ್ತಿಯಲ್ಲಿ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅವುಗಳ ನಿಖರ ಕಾರಣ ತಿಳಿಯಲು ಪ್ರತ್ಯೇಕವಾದ ಉನ್ನತ ಮಟ್ಟದ ಸಮಿತಿ ರಚಿಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬಿಬಿಎಂಪಿ ಆಯುಕ್ತರಿಗೆ ಇಂದಿಲ್ಲಿ ಸೂಚನೆ ನೀಡಿದ್ದಾರೆ.

ಮಂಗಳವಾರ ಕೋವಿಡ್-19 ಸಂಬಂಧ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಅವರ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಚಿಸುವ ಸಮಿತಿ, ಸಾವಿನ ಪ್ರಕರಣಗಳು ಹೆಚ್ಚಾಗಲು ಕಾರಣ ಏನು? ಚಿಕಿತ್ಸೆ ತಡವಾಗಿದ್ದಕ್ಕೆ ಸಾವು ಸಂಭವಿಸಿತೇ? ಅಥವಾ ಚಿಕಿತ್ಸಾ ವಿಧಾನದಲ್ಲಿ ಏನಾದರೂ ಲೋಪಗಳು ಇತ್ತೇ? ಇತ್ಯಾದಿ ಅಂಶಗಳ ಬಗ್ಗೆ ಅಧ್ಯಯನ ನಡೆಸಬೇಕು ಎಂದು ಹೇಳಿದರು.

ಅನಂತರ ಸಮಿತಿ ಕೊಡುವ ವರದಿಯನ್ನಾಧರಿಸಿ, ಲೋಪಗಳನ್ನು ಸರಿಪಡಿಸಿಕೊಂಡು ಸಾವಿನ ಪ್ರಮಾಣ ಶೂನ್ಯಕ್ಕೆ ಇಳಿಸಲು ಪ್ರಯತ್ನಿಸಬೇಕು ಎಂದ ಅವರು, ನಿಯಮಗಳ ಪ್ರಕಾರ ಚಿಕಿತ್ಸೆ ದೊರೆಯುತ್ತಿದೆಯೇ ಎಂಬುದನ್ನೂ ನಿರಂತರವಾಗಿ ಪರಿಶೀಲನೆ ನಡೆಸಬೇಕು. ಖಾಸಗಿಯೇ ಇರಲಿ ಸರಕಾರಿ ಆಸ್ಪತ್ರೆಗಳೇ ಇರಲಿ, ಎಲ್ಲ ಕಡೆ ಪರಿಶೀಲನೆ ಮಾಡುವ ಕೆಲಸ ಆಗಬೇಕು. ನಿಯಮಗಳನ್ನು ಪಾಲಿಸದವರ ವಿರುದ್ಧ ಚಾಟಿ ಬೀಸಬೇಕು ಎಂದು ಸಲಹೆ ನೀಡಿದರು.

ರಿಯಲ್ ಟೈಮ್ ಅಪ್‍ಡೇಟ್: ಯಾವ ಆಸ್ಪತ್ರೆಯಲ್ಲಿ ಎಷ್ಟು ಬೆಡ್ ಖಾಲಿ ಇವೆ? ಎಷ್ಟು ರೋಗಿಗಳು ವೆಂಟಿಲೇಟರ್ ಮೇಲಿದ್ದಾರೆ? ಎಷ್ಟು ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ಹೋಗಿದ್ದಾರೆ? ಇತ್ಯಾದಿ ಎಲ್ಲ ಮಾಹಿತಿಯೂ ಕ್ಷಣ ಕ್ಷಣಕ್ಕೂ ಆನ್‍ಲೈನ್‍ನಲ್ಲಿ ಅಪ್‍ಡೇಟ್ ಆಗಬೇಕು. ಈ ಮಾಹಿತಿ ಸಾರ್ವಜನಿಕರಿಗೂ ಆನ್‍ಲೈನ್‍ನಲ್ಲಿ ಸಿಗುವ ಹಾಗೆ ಮಾಡಬೇಕು ಎಂದು ಡಾ.ಅಶ್ವತ್ಥ ನಾರಾಯಣ ತಿಳಿಸಿದರು.

ಕಾನೂನು ಕ್ರಮಕ್ಕೆ ಸಲಹೆ: ಕೆಲ ಖಾಸಗಿ ಆಸ್ಪತ್ರೆಗಳು ಬೆಡ್‍ಗಳ ಸಂಖ್ಯೆಯನ್ನು ಸರಿಯಾಗಿ ನೀಡುತ್ತಿಲ್ಲ, ಕೊಡುವುದೊಂದು ಇರುವುದೊಂದಾಗಿದ್ದು, ಅದನ್ನು ಸರಿಪಡಿಸಬೇಕು. ವ್ಯತ್ಯಾಸಗಳು ಕಂಡುಬಂದಲ್ಲಿ, ನೇರವಾಗಿ ಕಾನೂನು ಕ್ರಮ ತೆಗೆದುಕೊಳ್ಳುವ ಕೆಲಸ ಆಗಬೇಕು ಎಂದು ಅವರು ಬಿಬಿಎಂಪಿ ಆಯುಕ್ತರಿಗೆ ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.

ನಗರದಲ್ಲಿ ಆಶಾ ಕಾರ್ಯಕರ್ತೆಯರ ಕೊರತೆ ಇದ್ದು, ತಕ್ಷಣ ನೇಮಕ ಮಾಡಿಕೊಳ್ಳುವ ಕೆಲಸ ಆಗಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯರನ್ನು ತಕ್ಷಣ ನೇಮಕ ಮಾಡಿಕೊಳ್ಳಬೇಕು. ಎಎನ್‍ಎಂ ಸಿಬ್ಬಂದಿಗೂ ಕೋವಿಡ್-19 ಭತ್ಯೆ ನೀಡುವುದಲ್ಲದೆ, ಅವರ ವೇತನ ಹೆಚ್ಚಳಕ್ಕೂ ಕ್ರಮ ತೆಗೆದುಕೊಳ್ಳಬೇಕು ಎಂದ ಅವರು, ಸಾರಿ/ಐಎಲ್‍ಐ ಪ್ರಕರಣಗಳಿದ್ದಲ್ಲಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಪಡಿಸಬೇಕು. ಕೋವಿಡ್ ಪರೀಕ್ಷೆಗಳ ಪ್ರಮಾಣ ಹೆಚ್ಚಿಸಬೇಕು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News