ಉಡುಪಿ ಜಿಲ್ಲೆಯಲ್ಲಿ 170 ಮಂದಿಗೆ ಕೊರೋನ ಸೋಂಕು ದೃಢ
ಉಡುಪಿ, ಆ.4: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 170 ಮಂದಿಯಲ್ಲಿ ಕೋವಿಡ್ -19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ದಿನದಲ್ಲಿ 1352 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿಗಳು ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಕೊರೋನ ಸೋಂಕು ಪತ್ತೆಯಾದ 170 ಮಂದಿಯಲ್ಲಿ ಉಡುಪಿ ತಾಲೂಕಿನ 74 ಮಂದಿ, ಕುಂದಾಪುರ ತಾಲೂಕಿನ 55 ಹಾಗೂ ಕಾರ್ಕಳ ತಾಲೂಕಿನ 39 ಮಂದಿ ಸೇರಿದ್ದಾರೆ. ಉಳಿದ ಇಬ್ಬರು ಮಂದಿ ಹೊರಜಿಲ್ಲೆಯವರಾಗಿದ್ದು, ಜಿಲ್ಲೆಯಲ್ಲಿ ಚಿಕಿತ್ಸೆಗೆ ಬಂದು ಪಾಸಿಟಿವ್ ಆಗಿದ್ದಾರೆ. 109 ಮಂದಿ ಪುರುಷರು, 61 ಮಂದಿ ಮಹಿಳೆಯರಿದ್ದು, ಇವರಲ್ಲಿ 10 ವರ್ಷದೊಳಗಿನ ಬಾಲಕ, ಬಾಲಕಿಯರು ಸಹ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇಂದಿನ 170 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ 4970ಕ್ಕೇರಿದೆ ಎಂದರು.
136 ಮಂದಿ ಗುಣಮುಖ: ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 136 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡು ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆ ಗೊಂಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 2948ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 1980 ಮಂದಿ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್ಓ ಹೇಳಿದರು.
ಉಡುಪಿ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಬಂದರೂ, ರೋಗದ ಗುಣಲಕ್ಷಣಗಳಿಲ್ಲದ 1127 ಮಂದಿ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
1700 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಇಂದು 1700 ಮಂದಿಯ ಗಂಟಲು ದ್ರವದ ಸ್ಯಾಂಪಲ್ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 1195 ಮಂದಿ, ಕೋವಿಡ್ ಸಂಪರ್ಕಿತರು 250 ಮಂದಿ ಇದ್ದರೆ, ಉಸಿರಾಟ ತೊಂದರೆಯ 12 ಮಂದಿ, ಶೀತ ಜ್ವರದಿಂದ ಬಳಲುವ 70 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್ಸ್ಪಾಟ್ಗಳಿಂದ ಆಗಮಿಸಿದ 173 ಮಂದಿಯ ಸ್ಯಾಂಪಲ್ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.
ಇಂದು ಪಡೆದ 1700 ಸ್ಯಾಂಪಲ್ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 36,200ಕ್ಕೇರಿದೆ. ಇವುಗಳಲ್ಲಿ ಈವರೆಗೆ 30,526 ನೆಗೆಟಿವ್, 4970 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 46 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 704 ಸ್ಯಾಂಪಲ್ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.
ಜಿಲ್ಲೆಯಲ್ಲಿ ಮಂಗಳವಾರ 53 ಮಂದಿಯನ್ನು ಐಸೋಲೇಷನ್ ವಾರ್ಡ್ಗೆ ದಾಖಲಿಸಲಾಗಿದೆ. ಇವರಲ್ಲಿ 18 ಮಂದಿ ಕೋವಿಡ್ ಶಂಕಿತರು, 12 ಮಂದಿ ಉಸಿರಾಟ ತೊಂದರೆಯವರು ಹಾಗೂ 23 ಮಂದಿ ಶೀತಜ್ವರದಿಂದ ಬಳಲುವವರು ಸೇರಿದ್ದಾರೆ ಎಂದರು.
ಜಿಲ್ಲೆಯ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್ಗಳಿಂದ ಇಂದು 22 ಮಂದಿ ಬಿಡುಗಡೆಗೊಂಡಿದ್ದು, 341 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಇಂದು ಕೊರೋನ ಸೋಂಕಿನ ಗುಣಲಕ್ಷಣದ 90 ಮಂದಿ ಸೇರಿದಂತೆ ಒಟ್ಟು 8297 ಮಂದಿಯನ್ನು ಕೊರೋನ ತಪಾಸಣೆಗಾಗಿ ನೊಂದಾಯಿಸಿ ಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗ 1193 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಡಾ.ಸೂಡ ತಿಳಿಸಿದರು.
ಮಂಗಳವಾರ ಇಬ್ಬರ ಸಾವು, ಮೃತರ ಸಂಖ್ಯೆ 46ಕ್ಕೆ
ಬೇರೆ ಬೇರೆ ಕಾಯಿಲೆಗಳಿಂದ ನರಳುತಿದ್ದ ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಉಡುಪಿಯ ಇಬ್ಬರು ಹಿರಿಯ ನಾಗರಿಕರು ಮಂಗಳವಾರ ಕೋವಿಡ್ ಸೊಂಕಿನೊಂದಿಗೆ ಮೃತಪಟ್ಟಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಮಧುಮೇಹ ಸೇರಿದಂತೆ ವಿವಿಧ ಸಮಸ್ಯೆಗಳಿಗಾಗಿ ಮಣಿಪಾಲ ಕೆಎಂಸಿಗೆ ಚಿಕಿತ್ಸೆಗೆ ದಾಖಲಾಗಿದ್ದ ಕುಂದಾಪುರ ಶಿರೂರಿನ 60+ರ ಹರೆಯ ವೃದ್ಧರೊಬ್ಬರು ಇಂದು ಮೃತಪಟ್ಟಿದ್ದಾರೆ. ಅದೇ ರೀತಿ ಮಧುಮೇಹ, ಹೃದಯ ಸಮಸ್ಯೆಯನ್ನು ಹೊಂದಿದ್ದ ಉಡುಪಿ ಒಳಕಾಡಿನ 72ರ ಹರೆಯದ ವೃದ್ಧರೂ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತ ಪಟ್ಟಿದ್ದಾರೆ.
ಉಳಿದಂತೆ ಚಿತ್ರದುರ್ಗ ಹಾಗೂ ಶಿವಮೊಗ್ಗದ ಇಬ್ಬರು ಹಿರಿಯ ನಾಗರಿಕರು ಇಂದು ಮಣಿಪಾಲದ ಕೆಎಂಸಿಯಲ್ಲಿ ಕೋವಿಡ್ ಪಾಸಿಟಿವ್ನೊಂದಿಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.