ಅಪಾಯಕಾರಿ ಸ್ಥಳದಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ : ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ

Update: 2020-08-05 17:07 GMT

ಮಂಗಳೂರು, ಆ. 5: ಜಿಲ್ಲೆಯಲ್ಲಿ ಅಪಾಯಕಾರಿ ಜಾಗಗಳಲ್ಲಿ ಮನೆ, ಕಟ್ಟಡ, ವಾಣಿಜ್ಯ ಸಂಕೀರ್ಣ ಸೇರಿದಂತೆ ಯಾವುದೇ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆ, ನೆರೆ ಸೇರಿದಂತೆ ಪ್ರಾಕೃತಿಕ ದುರ್ಘಟನೆಗಳು ನಡೆದಾಗ ಇಂತಹ ಸ್ಥಳಗಳಲ್ಲಿ ನಿರ್ಮಿಸಿದ ಕಟ್ಟಡಗಳೇ ಕುಸಿದು, ಜೀವಹಾನಿಗೂ ಕಾರಣ ವಾಗುತ್ತಿವೆ. ಗುಡ್ಡವನ್ನು ಅವೈಜ್ಞಾನಿಕವಾಗಿ ಕಡಿದು ಕಟ್ಟಡ ನಿರ್ಮಾಣ ಮಾಡುವ ಪ್ರವೃತಿ ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿವೆ. ಇವು ಹೆಚ್ಚು ಅಪಾಯಕಾರಿಯಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ನಿರ್ಮಾಣ ಚಟುವಟಿಕೆಗೆ ಪರವಾನಿಗೆ ನೀಡದಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಮಳೆ ತೀವ್ರವಾಗುತ್ತಿದ್ದು, ಅಪಾಯಕಾರಿ ಮನೆ, ತಡೆಗೋಡೆ, ಕಟ್ಟಡ, ವಿದ್ಯುತ್ ಕಂಬಗಳನ್ನು ಗುರುತಿಸಿ ಅವುಗಳ ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮುಂದೆ ತಲೆದೋರಬಹುದಾದ ಅಪಾಯಗಳನ್ನು ಕಂಡುಹಿಡಿದರೆ, ಅನಿರೀಕ್ಷಿತ ಘಟನೆಗಳನ್ನು ಯಶಸ್ವಿಯಾಗಿ ಎದುರಿ ಸಬಹುದಾಗಿದೆ. ಪರಿಹಾರ ಕಾರ್ಯಾಚರಣೆಯಲ್ಲಿ ಯಾವುದೇ ವಿಳಂಬಗತಿ ಸಹಿಸಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಳೆದ ವರ್ಷ ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ಸಿಕ್ಕಿದರೂ, ಇನ್ನು ಮನೆ ಪೂರ್ಣಗೊಳ್ಳದಿರುವುದು ಕಂಡುಬಂದಿದೆ. ಈ ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಫಲಾನುಭವಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಪರಿಹಾರ ಮೊತ್ತವನ್ನು ಸಕಾಲದಲ್ಲಿ ವಿತರಿಸುವಂತೆ ಸೂಚಿಸಿದರು.

ಮಳೆಗಾಲದಲ್ಲಿ ಡೆಂಗ್, ಚಿಕನ್‌ಗುನ್ಯಾ, ಇಲಿಜ್ವರದಂತಹ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಕೋವಿಡ್ ವ್ಯಾಪಿಸಿದ್ದರೂ ಇತರ ಕಾಯಿಲೆಗಳ ನಿಯಂತ್ರಣಕ್ಕೂ ಆದ್ಯತೆ ನೀಡುವಂತೆ ಡಾ. ಕೆ.ವಿ. ರಾಜೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಕರಿಕಲನ್, ಡಿಸಿಪಿ ಅರುಣಾಂಶ ಗಿರಿ, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News