ಉಡುಪಿ ಜಿಲ್ಲೆಯಲ್ಲಿ ಮತ್ತೆ ದ್ವಿಶತಕಕ್ಕೇರಿದ ಕೋವಿಡ್-19 ಪಾಸಿಟಿವ್ ಪ್ರಕರಣಗಳು

Update: 2020-08-06 14:32 GMT

ಉಡುಪಿ, ಆ.6: ಜಿಲ್ಲೆಯಲ್ಲಿ ಗುರುವಾರ ಮತ್ತೆ ಕೋವಿಡ್-19 ಸೋಂಕಿಗೆ ಪಾಸಿಟಿವ್ ಆದವರ ಸಂಖ್ಯೆ ದ್ವಿಶತಕದ ಗಡಿ ದಾಟಿದೆ. ಇಂದು ಒಟ್ಟು 217 ಮಂದಿಯಲ್ಲಿ ಕೊರೋನ ವೈರಸ್‌ನ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದಿನದಲ್ಲಿ 1685 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿಗಳು ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಕೊರೋನ ಸೋಂಕು ಪತ್ತೆಯಾದ 217 ಮಂದಿಯಲ್ಲಿ ಉಡುಪಿ ತಾಲೂಕಿನ 90 ಮಂದಿ, ಕುಂದಾಪುರ ತಾಲೂಕಿನ 81 ಹಾಗೂ ಕಾರ್ಕಳ ತಾಲೂಕಿನ 44 ಮಂದಿ ಸೇರಿದ್ದಾರೆ. ಉಳಿದ ಇಬ್ಬರು ಹೊರಜಿಲ್ಲೆಯವರಾಗಿದ್ದು, ಜಿಲ್ಲೆಯಲ್ಲಿ ಚಿಕಿತ್ಸೆಗೆ ಬಂದು ಪಾಸಿಟಿವ್ ಆಗಿದ್ದಾರೆ. ಮಕ್ಕಳು ಸೇರಿದಂತೆ 129 ಮಂದಿ ಪುರುಷರು ಹಾಗೂ 88 ಮಂದಿ ಮಹಿಳೆಯರಲ್ಲಿ ಸೋಂಕು ಕಂಡು ಬಂದಿದೆ. ಇವರಲ್ಲಿ 67 ಪುರುಷರು ಹಾಗೂ 65 ಮಹಿಳೆಯರಲ್ಲಿ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಇಂದಿನ 217 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ 5360ಕ್ಕೇರಿದೆ ಎಂದು ಡಾ.ಸೂಡ ತಿಳಿಸಿದರು.

ಇಂದು ಕೊರೋನ ಪಾಸಿಟಿವ್ ದೃಢಗೊಂಡ 217 ಮಂದಿಯಲ್ಲಿ 93 ಮಂದಿ ಪಾಸಿಟಿವ್ ಬಂದವರ ಸಂಪರ್ಕದಿಂದ, 62 ಮಂದಿ ಶೀತಜ್ವರ ದಿಂದ, 9 ಮಂದಿ ಉಸಿರಾಟ ತೊಂದರೆಯಿಂದ ಬಳಲುತಿದ್ದು ಅವರಲ್ಲಿ ಸೋಂಕು ಕಾಣಿಸಿ ಕೊಂಡಿದೆ. ಇಬ್ಬರು ಪ್ರವಾಸದಿಂದ ಮರಳಿದಾಗ ಪಾಸಿಟಿವ್ ಬಂದರೆ, 51 ಮಂದಿಯ ಸೋಂಕಿ ಸಂಪರ್ಕ ತನಿಖೆಯಲ್ಲಿದೆ ಎಂದರು.

85 ಮಂದಿ ಗುಣಮುಖ: ಜಿಲ್ಲೆಯಲ್ಲಿ ಗುರುವಾರ ಒಟ್ಟು 85 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡು ಬಿಡುಗಡೆಗೊಂಡಿದ್ದಾರೆ. ಇವರಲ್ಲಿ 34 ಮಂದಿ ಕೋವಿಡ್ ಆಸ್ಪತ್ರೆಗಳಿಂದ, 51 ಮಂದಿ ಹೋಮ್ ಐಸೋಲೇಷನ್ ನಲ್ಲಿದ್ದು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 3157ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 2153 ಮಂದಿ ಚಿಕಿತ್ಸೆಯಲ್ಲಿದ್ದು, ಇವರಲ್ಲಿ 1054 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 1099 ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ಹೇಳಿದರು.

1991 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಇಂದು 1991 ಮಂದಿಯ ಗಂಟಲುದ್ರವದ ಸ್ಯಾಂಪಲ್‌ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 1389 ಮಂದಿ, ಕೋವಿಡ್ ಸಂಪರ್ಕಿತರು 169 ಮಂದಿ ಇದ್ದರೆ, ಉಸಿರಾಟ ತೊಂದರೆಯ ಏಳು ಮಂದಿ, ಶೀತಜ್ವರದಿಂದ ಬಳಲುವ 30 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಆಗಮಿಸಿದ 396 ಮಂದಿಯ ಸ್ಯಾಂಪಲ್‌ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.

ಇಂದು ಪಡೆದ 1991 ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 40,044ಕ್ಕೇರಿದೆ. ಇವುಗಳಲ್ಲಿ ಈವರೆಗೆ 33,455 ನೆಗೆಟಿವ್, 5360 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 50 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 1229 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.

ಜಿಲ್ಲೆಯಲ್ಲಿ ಗುರುವಾರ 217 ಮಂದಿಯನ್ನು ಆಸ್ಪತ್ರೆಗಳ ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಇವರಲ್ಲಿ 12 ಮಂದಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ, 84 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ, 42 ಮಂದಿ ಕೋವಿಡ್ ಹೆಲ್ತ್ ಸೆಂಟರ್‌ಗಳಲ್ಲಿ ಹಾಗೂ 79 ಮಂದಿ ಹೋಮ್ ಐಸೋಲೇಷನ್ ‌ನಲ್ಲಿ ಇದ್ದಾರೆ. ಜಿಲ್ಲೆಯಲ್ಲಿ ಈಗ ಒಟ್ಟು 1396 ಮಂದಿ ಹೋಮ್ ಐಸೋಲೇಷನ್ ನಲ್ಲಿದ್ದಾರೆ ಎಂದು ಅವರು ಹೇಳಿದರು.

ಗುರುವಾರ ಜಿಲ್ಲೆಯಲ್ಲಿ ಮತ್ತೆ ನಾಲ್ವರು ಮೃತ್ಯು

ಉಡುಪಿ ಜಿಲ್ಲೆಯಲ್ಲಿ ಗುರುವಾರ ಒಟ್ಟು ನಾಲ್ವರು ಕೋವಿಡ್-19 ಸೋಂಕಿನಿಂದ ಮೃತಪಟ್ಟಿರುವ ಮಾಹಿತಿ ಇದೆ. ಬಾರಕೂರು ಹೊಸಾಳದ 76 ವರ್ಷ ಪ್ರಾಯದ ವ್ಯಕ್ತಿ ನಿನ್ನೆ ರಾತ್ರಿ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ, ಉಡುಪಿಯ 76ರ ಹಿರಿಯ ನಾಗರಿಕರು ಕೆಎಂಸಿಯಲ್ಲಿ, ಬೈಂದೂರಿನ 75 ವರ್ಷ ಪ್ರಾಯದ ವೃದ್ಧರು ಕೆಎಂಸಿಯಲ್ಲಿ ಮೃತಪಟ್ಟರೆ, ಪಾಸಿಟಿವ್ ಬಂದ ಸಾಯ್ಬರಕಟ್ಟೆ ಶಿರಿಯಾರದ 76 ವರ್ಷ ಪ್ರಾಯದ ವೃದ್ಧರು ಆಸ್ಪತ್ರೆಗೆ ಕರೆ ತರುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 54ಕ್ಕೇರಿದೆ. ಮಂಗಳವಾರ ಮತ್ತು ಬುಧವಾರ ಜಿಲ್ಲೆಯಲ್ಲಿ ಆರು ಮಂದಿ ಮೃತಪಟ್ಟಿರು ವುದಾಗಿ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ. ಇವರಲ್ಲಿ ಕುಂದಾಪುರದ 82 ಮತ್ತು 52 ವರ್ಷ ಪ್ರಾಯದ ಪುರುಷರು, ಕಾರ್ಕಳದ 75ರ ಪುರುಷ, ಉಡುಪಿಯ 55, 36 ಮತ್ತು 70ರ ಪುರುಷರು ಸೇರಿದ್ದಾರೆ.

ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪಾಸಿಟಿವ್

ಉಡುಪಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಯನ್ನೂ ಕೊರೋನ ಸೋಂಕು ಬಿಟ್ಟಿಲ್ಲ. ಉಡುಪಿ ಜಿಲ್ಲಾ ಕೋವಿಡ್-19 ನೋಡೆಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಪ್ರಶಾಂತ್ ಭಟ್ ಇಂದು ಕೊರೋನ ಸೋಂಕಿಗೆ ಪಾಸಿಟಿವ್ ಆಗಿದ್ದಾರೆ.

ಕೊರೋನ ಪ್ರಾರಂಭದ ದಿನದಿಂದಲೂ ಇವರು ನೋಡೆಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದರು. ಡಾ.ಭಟ್ ನಾಲ್ಕೂವರೆ ತಿಂಗಳಿನಿಂದ ನೋಡೆಲ್ ಅಧಿಕಾರಿಯಾಗಿ ಜಿಲ್ಲೆಯ ಕೊರೊನಾ ಸೋಂಕಿತರ ಪ್ರತಿಯೊಂದು ಅಂಕಿಅಂಶ ಗಳೊಂದಿಗೆ ಚಿಕಿತ್ಸೆ ಉಸ್ತುವಾರಿ ಸಹಿತ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಡಾ.ಭಟ್ ಹೋಮ್ ಐಸೋಲೇಷನ್‌ನಲ್ಲಿದ್ದು ಚಿಕಿತ್ಸೆ ಪಡೆಯುತಿದ್ದಾರೆ.

ಇದೀಗ ಇವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ ಚಂದ್ರ ಸೂಡ ಕ್ವಾರಂಟೈನ್‌ಗೆ ತೆರಳಿ ದ್ದಾರೆ. ಅಲ್ಲದೇ ಡಾ.ಭಟ್‌ರೊಂದಿಗೆ ಹೆಚ್ಚಿನ ಒಡನಾಟದಲ್ಲಿದ್ದ 3-4 ಮಂದಿ ಸಹೋದ್ಯೋಗಿಗಳೂ ಈಗ ಕ್ವಾರಂಟೈನ್ ‌ನಲ್ಲಿದ್ದಾರೆ. ಇವರೆಲ್ಲರೂ ಸೋಮವಾರ ಗಂಟಲುದ್ರವ ಮಾದರಿಯ ಪರೀಕ್ಷೆಗೊಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.

ಅಜ್ಜರಕಾಡಿನ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯನ್ನು ಭಾಗಶ: ಸೀಲ್‌ಡೌನ್ ಮಾಡಲಾಗಿದೆ. ಇಂದು ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಟೈಸ್ ಮಾಡಲಾಗಿದೆ. ಡಿಎಚ್‌ಒ ಅವರಿದ್ದ ಮಹಡಿಯನ್ನು ಮುಚ್ಚಲಾಗಿದೆ. ನಾಳೆ ಮತ್ತೆ ಸ್ಯಾನಟೈಸ್ ಮಾಡಿ ಉಳಿದ ವಿಭಾಗಗಳು ಕಾರ್ಯನಿರ್ವಹಿಸುತ್ತವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News